ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ.
ಇದಲ್ಲದೆ, ಅನಗತ್ಯ ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ ಶಬ್ದ ಮಾಲಿನ್ಯವೂ ಉಂಟಾಗುತ್ತದೆ.
ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ದ್ವಂದ್ವ ಉಂಟಾಗಿ ಯಾವ ಕಡೆಗೆ ಚಲಿಸಬೇಕೆಂಬುದು ತಿಳಿಯದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಮತ್ತು ಇತರ ವಾಹನಗಳಿಗೆ ಗೊಂದಲ ಉಂಟುಮಾಡುವ ಸಾಧ್ಯತೆಯೂ ಇರುತ್ತದೆ.

ವಿಐಪಿ ಸಂಚಾರದ ವೇಳೆ, ವಾಹನಗಳ ತುರ್ತು ಚಲನವಲನದ ಅವಶ್ಯಕತೆಗಳಿಗೆ ಅನುಗುಣವಾಗಿ ದೂರಸಂಪರ್ಕ ಸಾಧನಗಳಾದ ವೈರ್ಲೆಸ್ ಕಮ್ಯುನಿಕೇಶನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೆಚ್ಚು ಶಿಸ್ತಿನ ಹಾಗೂ ಸುರಕ್ಷಿತ ಮಾರ್ಗವಾಗಿದೆ.
ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು.ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ /ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ತಿಳಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ, ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಬಳಕೆಗೆ ಕಡಿವಾಣ ಹಾಕುವಂತೆ ಘಟಕಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.