- ಪ್ರತಿನಿತ್ಯ 41.81 ಲಕ್ಷ ಮಹಿಳೆಯರಿಗೆ ಸಿಗಲಿದೆ ‘ಶಕ್ತಿ ಯೋಜನೆ’ ಸೌಲಭ್ಯ
- ರಾಜ್ಯಾದ್ಯಂತ ಒಟ್ಟು 18,609 ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ರಾಜ್ಯ ಸರ್ಕಾರವು ತನ್ನ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೊದಲನೆಯದಾಗಿ ಜಾರಿಗೆ ತಂದಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಮಹಿಳೆಯರಿಗೆ ಕರ್ನಾಟಕದಾದ್ಯಂತ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಗೆ ಭಾನುವಾರ ವಿಧ್ಯುಕ್ತವಾಗಿ ಚಾಲನೆ ಸಿಕ್ಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧ ಮತ್ತು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಗೆ ತೆರಳುವ ಬಸ್ಗಳಿಗೆ ಹಸಿರು ನಿಶಾನೆ ತೋರಿ ಶಕ್ತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಹಾಗೆಯೇ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಸೌಲಭ್ಯವನ್ನು ಪ್ರತಿನಿತ್ಯ 41.81 ಲಕ್ಷ ಮಹಿಳೆಯರು (11.58 ಲಕ್ಷ ಪಾಸ್ ಪ್ರಯಾಣಿಕರು ಸೇರಿದಂತೆ) ಪಡೆಯಲಿದ್ದಾರೆ ಎಂದು ಸಾರಿಗೆ ಇಲಾಖೆ ಅಂದಾಜಿಸಿದೆ.
ಮುಂಗಡ ಬುಕಿಂಗ್ ಸೌಲಭ್ಯವಿರುವ ಬಸ್ಸುಗಳಲ್ಲಿ ಮಹಿಳೆಯರಿಗೆ ಮುಂಗಡ ಆಸನ ಕಾಯ್ದಿರಿಸುವ ಅವಕಾಶವನ್ನು ಸಾರಿಗೆ ಇಲಾಖೆ ಕಲ್ಪಿಸಿದೆ. ಸೇವಾಸಿಂಧು ತಂತ್ರಾಂಶದ ಮೂಲಕ ಜೂನ್ 15ರಿಂದ ಸ್ಮಾರ್ಟ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಮುಂದಿನ ಮೂರು ತಿಂಗಳೊಳಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ.
ಯೋಜನೆಯ ಪ್ರಮುಖ ಅಂಶಗಳು ಇಲ್ಲಿವೆ
- ರಾಜ್ಯದೊಳಗೆ ಪ್ರಯಾಣಕ್ಕೆ ಮಾತ್ರ ಈ ಯೋಜನೆ ಅನ್ವಯ, ಅಂತರರಾಜ್ಯ ಪ್ರಯಾಣಕ್ಕೆ ಅವಕಾಶವಿಲ್ಲ. ಆದಾಗ್ಯೂ ಅಂತರರಾಜ್ಯ ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬಸ್ಗಳಲ್ಲಿ ರಾಜ್ಯದ ಗಡಿವರೆಗೂ ಪ್ರಯಾಣಿಸಹುದು.
- ರಾಜ್ಯದ 6308 ನಗರ, 5958 ಸಾಮಾನ್ಯ ಹಾಗೂ 6343 ವೇಗದೂತ ಬಸ್ಸುಗಳಲ್ಲಿ (ಒಟ್ಟು 18,609 ಬಸ್ಸುಗಳಲ್ಲಿ) ಪ್ರಯಾಣಿಸಬಹುದು. ಐಷಾರಾಮಿ ಸಾರಿಗೆಗಳಲ್ಲಿ ಈ ಸೌಲಭ್ಯವಿಲ್ಲ.
- ಇಟಿಎಂ ತಂತ್ರಾಂಶದಲ್ಲಿ ಉಚಿತ ಟಿಕೆಟ್ ವಿತರಿಸಲು ಅಗತ್ಯ ಮಾರ್ಪಾಡುಗಳನ್ನು ಈಗಾಗಲೇ ಮಾಡಲಾಗಿದ್ದು, ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.
- ಗುರುತಿನ ಚೀಟಿ ಪರಿಶೀಲಿಸಿ, ಶೂನ್ಯ ಟಿಕೆಟ್ ವಿತರಿಸಲಾಗುತ್ತದೆ.ಈ ವೇಳೆ ಇಟಿಎಂನಲ್ಲಿ ತಾಂತ್ರಿಕ ದೋಷ ಕಂಡುಬಂದಲ್ಲಿ ಮ್ಯಾನ್ಯುವಲ್ ರೀತಿ ಟಿಕೆಟ್ ವಿತರಿಸಲಾಗುತ್ತದೆ.
- ಯೋಜನೆಯ ವೆಚ್ಚವನ್ನುಇಟಿಎಂಗಳಲ್ಲಿ ವಿತರಿಸಲಾದ ಶೂನ್ಯ ಟಿಕೆಟ್/ ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ನಿಗಮಗಳಿಗೆ ವೆಚ್ಚ ಭರಿಸಲಾಗುವುದು.
- ಪ್ರಸಕ್ತ ವರ್ಷದಲ್ಲಿ ನಾಲ್ಕೂ ನಿಗಮಗಳು ಸೇರಿ ಒಟ್ಟು 1894 ಹೊಸ ವಾಹನಗಳನ್ನು ಸೇರ್ಪಡೆ ಮಾಡಲು ಸರ್ಕಾರ ಯೋಜಿಸಿದೆ.
- ಕೆಲವೊಂದು ಮಾರ್ಗಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದಲ್ಲಿ ಬಸ್ಸುಗಳ ಬೇಡಿಕೆ ಅಧಿಕವಾಗುವ ಸಾಧ್ಯತೆ ಮನಗಂಡು, ಅಂತಹ ವೇಳೆ ಬಸ್ಸುಗಳ ಕೊರತೆ ನೀಗಿಸಲು ಅನುಸೂಚಿತ ವೇಳಾಪಟ್ಟಿ/ಮಾರ್ಗ ಪರಿಷ್ಕರಣೆ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.