ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ. ಈ ತೀರ್ಪನ್ನು ರಾಜ್ಯ ಸರ್ಕಾರಗಳೇ ಅನುಷ್ಠಾನಗೊಳಿಸಬಹುದೆಂದು ಸುಪ್ರೀಂ ಕೋರ್ಟ್ ಆಗಸ್ಟ್ 01ರಂದು ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಸೆಪ್ಟಂಬರ್ 12ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ “ಬೃಹತ್ ತಮಟೆ ಚಳವಳಿ” ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಜಿಲ್ಲೆಯ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಮೂರ್ತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ, ವಿವಿಧ ಹಕ್ಕೊತ್ತಾಯಗಳನ್ನು ಈಡೇರಿರಿಸುವಂತೆ ಆಗ್ರಹಿಸಿದರು.
“ಒಳಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಇದು ಕಳೆದ 30 ವರ್ಷಗಳಿಂದ ಪ್ರೊ. ಬಿ ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಅಲ್ಲದೆ ಇದು ಮೀಸಲಾತಿ ವ್ಯವಸ್ಥೆಯಲ್ಲಿ ಬಹಳ ಮುಖ್ಯವಾದ ಹೆಜ್ಜೆಯಾಗಿದೆ. ಈ ಹಿಂದೆ ಒಳಮೀಸಲಾತಿ ವಿಚಾರದಲ್ಲಿ ನ್ಯಾಯಾಲಯಗಳು ಪರಸ್ಪರ ವಿರುದ್ಧವಾದ ತೀರ್ಪುಗಳನ್ನು ನೀಡಿದ್ದವು. ಈಗ ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು, ʼಈ ವಿಚಾರದಲ್ಲಿದ್ದ ಗೊಂದಲವನ್ನು ಪರಿಹರಿಸಿದ್ದು, ಒಳಮೀಸಲಾತಿ ನೀಡಿಕೆಯು ಸಂವಿಧಾನ ಕಲ್ಪಿಸಿರುವ ಸಮಾನತೆಯ ಹಕ್ಕನ್ನು ಉಲ್ಲಂಘಿಸುವುದಿಲ್ಲ. ವಾಸ್ತವಿಕವಾಗಿ ಸಮಾನತೆಯನ್ನು ಹೆಚ್ಚಿಸಲು ಅಗತ್ಯವಾಗಿದೆʼಯೆಂದು ಹೇಳಿದೆ” ಎಂದರು.
“ಪರಿಶಿಷ್ಟ ಜಾತಿಯ ಸಮುದಾಯಗಳು ಸಮರೂಪದಲ್ಲಿಲ್ಲ ಮತ್ತು ಅವುಗಳಿಗೆ ಆಗೋಚರವಾದ ಏಕರೂಪವೂ ಇಲ್ಲವೆಂದು ನ್ಯಾಯಾಲಯ ಹೇಳಿದೆ. ಈ ಜಾತಿಗಳ ಒಳಗೆ ಇರುವ ಕೆಲವು ಉಪಜಾತಿಗಳಿಗೆ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಇಂತಹ ಉಪಜಾತಿಗಳು ಅಭಿವೃದ್ಧಿಯಲ್ಲಿ ಹಿಂದೆಬಿದ್ದಿವೆ. ಹಿಂದುಳಿದಿರುವಿಕೆಯ ಆಧಾರದಲ್ಲಿ ಮೀಸಲಾತಿ ನೀಡಿದರೆ ಈ ತನಕ ಮೀಸಲಾತಿಯ ಲಾಭ ಪಡೆದುಕೊಳ್ಳಲು ಸಾಧ್ಯವಾಗದ ಸಮುದಾಯಗಳಿಗೂ ಪ್ರಯೋಜನ ದೊರೆಯಬಹುದು” ಎಂದರು.
“ಪಂಜಾಬ್, ಹರಿಯಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಂತಹ ರಾಜ್ಯಗಳು ಒಳಮೀಸಲಾತಿ ನೀಡಲು ಈ ಹಿಂದೆ ಪ್ರಯತ್ನಿಸಿದ್ದವು. ಆದರೆ ಈ ಪ್ರಯತ್ನಗಳಿಗೆ ನ್ಯಾಯಾಂಗವೇ ತಡೆಯೊಡ್ಡಿತ್ತು. ಒಳಮೀಸಲಾತಿ ಕಲ್ಪಿಸುವುದು ಬಹಳ ಸಾಧ್ಯವಾಗದ ಕೆಲಸ. ಹಾಗಾಗಿ ಈ ಕೆಲಸವನ್ನು ನ್ಯಾಯಯುತವಾಗಿ ಮಾಡಬೇಕು. ಒಳಮೀಸಲಾತಿ ನೀಡಿಕೆಯು ಯಾರದೋ ಇಷ್ಟಾನಿಷ್ಟಗಳನ್ನು ಅವಲಂಬಿಸದೆ, ಗಣನೀಯವಾದ ಮತ್ತು ಪ್ರಮಾಣೀಕರಿಸಬಹುದಾದ ದತ್ತಾಂಶಗಳ ಆಧಾರದಲ್ಲಿ ನಿರ್ಧಾರವಾಗಬೇಕು” ಎಂದರು.
“ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ. ಬಿ ಕೃಷ್ಣಪ್ಪನವರ ಜನ್ಮದಿನವಾದ ಜೂನ್ 09ನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು. ಮತ್ತು ರಾಜ್ಯ ಸರ್ಕಾರ ಪ್ರೊ ಬಿ ಕೃಷ್ಣಪ್ಪನವರಿಗೆ “ಕರ್ನಾಟಕ ರತ್ನ” ಪ್ರಶಸ್ತಿ ನೀಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಸಚಿವ ಸಂತೋಷ್ ಲಾಡ್ ಪುತ್ರ ಕರಣ್ ಲಾಡ್ ಬರೆದ ಕೃತಿಯ ಕನ್ನಡಾನುವಾದ ಬಿಡುಗಡೆ
“ಬಾಕಿ ಉಳಿದಿರುವ “ಬ್ಯಾಕ್ ಲಾಗ್” ಹುದ್ದೆಗಳನ್ನು ರಾಜ್ಯ ಸರ್ಕಾರ ಕೂಡಲೇ ಭರ್ತಿ ಮಾಡಬೇಕು. ಒಳಮೀಸಲಾತಿ ಜಾರಿಯಾಗುವವರೆಗೂ ರಾಜ್ಯ ಸರ್ಕಾರದ ಎಲ್ಲ ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ತಡೆ ಹಿಡಿಯಬೇಕು.
ಬಗರ್ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡಬೇಕು. ಕಳೆದ ಎರಡ್ಮೂರು ತಲೆಮಾರುಗಳಿಂದ 3-4 ಎಕರೆಯಷ್ಟು ಅರಣ್ಯ ಭೂಮಿ ಸಾಗುವಳಿ ಮಾಡುತ್ತಾ ಉಪಜೀವನ ಸಾಗಿಸುತ್ತಿರುವ ಕೃಷಿ ಕಾರ್ಮಿಕರನ್ನು ಭೂಮಿಯಿಂದ ಒಕ್ಕಲೆಬ್ಬಿಸದೆ ಪರ್ಯಾಯ ಭೂಮಿ ನೀಡಬೇಕು” ಎಂದು ಆಗ್ರಹಿಸಿದರು.
“ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿನಿಲಯ ಮತ್ತು ವಸತಿ ಶಾಲೆಗಳಲ್ಲಿ ಹೊರ ಸಂಪನ್ಮೂಲದಡಿ ಕೆಲಸ ನಿರ್ವಹಿಸುತ್ತಿರುವ ನೌಕರರನ್ನು ಕಾಯಂಗೊಳಿಸಬೇಕು” ಎಂದು ಒತ್ತಾಯಿಸಿದರು.