- ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಕಾರ್ಯಕ್ರಮ ಆಯೋಜನೆ
- ಸಮಾರಂಭಕ್ಕೆ ದೇಶದ ಹಲವು ಗಣ್ಯರು ಭಾಗಿಯಾಗುವ ಸಾಧ್ಯತೆ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರಾಗಿ ಎಂಟು ಮಂದಿ ಶಾಸಕರು ಶನಿವಾರ (ಇಂದು) 12:30ಕ್ಕೆ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಡ ರಾತ್ರಿಯವರೆಗೂ ಕಸರತ್ತು ನಡೆಸಿದ್ದಾರೆ. ಸರ್ಕಾರದ ಸಚಿವ ಸಂಪುಟಕ್ಕೆ ಸೇರುವ ಎಂಟು ಮಂದಿ ಶಾಸಕರ ಹೆಸರನ್ನು ಅಂತಿಮಗೊಳಿಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸುವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ. ಡಾ. ಜಿ ಪರಮೇಶ್ವರ್, ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಇಂದು ಪ್ರಮಾಣ ವಚನ ಸ್ವೀಕರಿಸುವರು.
ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್, ನೂತನ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ವಿಜಯೋತ್ಸವದ ಮಾದರಿಯಲ್ಲಿ ನಡೆಸಲು ಮುಂದಾಗಿದೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಅಂದಾಜಿಸಲಾಗಿದೆ.
ಸಿದ್ದರಾಮಯ್ಯ ಅವರು 2013ರಲ್ಲಿ ಮುಖ್ಯಮಂತ್ರಿ ಆದಾಗಲೂ ಕಂಠೀರವ ಕ್ರೀಡಾಂಗಣದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು. ಆಗಲೂ ಭಾರಿ ಜನಸ್ತೋಮ ಕಾರ್ಯಕ್ರಮಕ್ಕೆ ಸೇರಿತ್ತು.
ಈ ಸುದ್ದಿ ಓದಿದ್ದೀರಾ? ಬಿಜೆಪಿ ಸರ್ಕಾರದ ವೈಫಲ್ಯ ಮುಚ್ಚಲು ಮತ್ತೊಂದು ನೋಟ್ ಬ್ಯಾನ್: ಸಿದ್ದರಾಮಯ್ಯ ಲೇವಡಿ
ಕಾರ್ಯಕ್ರಮದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾಜಸ್ಥಾನ, ಛತ್ತೀಸ್ಗಢ, ಹಿಮಾಚಲ ಪ್ರದೇಶ, ಬಿಹಾರ, ಪುದುಚೇರಿ, ತಮಿಳುನಾಡು, ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ.