ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.
ಮಡಿಕೇರಿ ನಗರಸಭೆ ಆಯೋಜಿಸಿದ್ದ ‘ಪೌರ ಕಾರ್ಮಿಕರ’ ದಿನಾಚರಣೆಯಲ್ಲಿ ಅವರು ಮಾತನಾಡಿದರು. “ಪೌರಕಾರ್ಮಿಕರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಅವುಗಳನ್ನು ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು. ಪೌರ ಕಾರ್ಮಿಕರು ಕರ್ತವ್ಯ ಸಂದರ್ಭದಲ್ಲಿ ಸೂಕ್ತ ರಕ್ಷಣಾ ಸಾಮಾಗ್ರಿಗಳನ್ನು ಬಳಸಿ ಕಾರ್ಯನಿರ್ವಹಿಸಬೇಕು” ಎಂದು ಶಾಸಕರು ಸಲಹೆ ಮಾಡಿದರು.
“ಪೌರಕಾರ್ಮಿಕರು ರಜೆ ಕೇಳಿದ್ದಲ್ಲಿ ನೀಡಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದರ ಜೊತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡುವವರಿಂದ ದಂಡ ವಸೂಲಿ ಮಾಡಬೇಕು. ಈ ರೀತಿ ಆದಲ್ಲಿ ಪ್ರತಿಯೊಬ್ಬರೂ ಎಚ್ಚರವಹಿಸಲು ಸಾಧ್ಯ” ಎಂದರು.
ನಗರಸಭೆಯಲ್ಲಿ ಓಬಳಿಯಂತ ಪೌರಕಾರ್ಮಿಕರು ನಾಲ್ಕು ದಶಕಗಳ ಕಾಲ ದುಡಿದಿದ್ದಾರೆ. ಅವರ ಆರೋಗ್ಯಕ್ಕೆ ಅಗತ್ಯ ನೆರವು ನೀಡಬೇಕು ಎಂದ ಶಾಸಕರು, ಓಬಳಿ ಅವರಿಗೆ ವೈಯಕ್ತಿಕವಾಗಿ 10 ಸಾವಿರ ರೂ.ವನ್ನು ಇದೇ ಸಂದರ್ಭದಲ್ಲಿ ನೀಡಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, “ಪೌರಕಾರ್ಮಿಕರು ಮಡಿಕೇರಿ ನಗರದ ಕಿರೀಟವಿದ್ದಂತೆ ಪೌರಕಾರ್ಮಿಕರು ಒಂದು ದಿನ ಸ್ವಚ್ಛತಾ ಕಾರ್ಯ ಕೈಗೊಳ್ಳದಿದ್ದಲ್ಲಿ ಪರಿಸ್ಥಿತಿಯನ್ನು ಊಹಿಸಿಕೊಳ್ಳುವುದು ಕಷ್ಟಸಾಧ್ಯ. ಆದ್ದರಿಂದ ಪೌರಕಾರ್ಮಿಕರನ್ನು ಗೌರವಿಸಬೇಕು” ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, “ನಗರ, ಪಟ್ಟಣಗಳು ಸ್ವಚ್ಛವಾಗಿರಲು ಪೌರಕಾರ್ಮಿಕರ ಕರ್ತವ್ಯ ನಿಷ್ಠೆ ಹೆಚ್ಚಿನದ್ದಾಗಿದೆ. ಮಡಿಕೇರಿ ನಗರದಲ್ಲಿ ಉತ್ತಮ ವಾತಾವರಣ ಇರಲು ಪೌರಕಾರ್ಮಿಕರ ಪಾತ್ರ ಹೆಚ್ಚಿನದ್ದಾಗಿದೆ. ದಸರಾ ಸಮಯದಲ್ಲಿ ಹೆಚ್ಚಿನ ಕೆಲಸವನ್ನು ಪೌರಕಾರ್ಮಿಕರು ನಿರ್ವಹಿಸಿದ್ದಾರೆ. ಮುಂದಿನ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪೌರಕಾರ್ಮಿಕರನ್ನು ಗೌರವಿಸುವಂತಾಗಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ್, ನಗರಸಭೆ ಸದಸ್ಯ ರಾಜೇಶ್ ಯಲ್ಲಪ್ಪ, ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಚಿತ್ರಾವತಿ, ಕಲಾವತಿ, ಉಷಾ, ಶ್ವೇತಾ, ಸಬಿತಾ, ಅರುಣ್ ಶೆಟ್ಟಿ, ಶಾರದ, ಚಂದ್ರಶೇಖರ್, ಪೌರ ಸೇವಾ ನೌಕರರ ಜಿಲ್ಲಾಧ್ಯಕ್ಷರಾದ ಪಿ.ಕೆ.ಸತೀಶ್, ತಾಲ್ಲೂಕು ಅಧ್ಯಕ್ಷರಾದ ಎಸ್.ಕೆ.ಸತ್ಯನಾರಾಯಣ, ಇತರರು ಇದ್ದರು.
ಪರಿಸರ ಎಂಜಿನಿಯರ್ ಸೌಮ್ಯ ನಿರೂಪಿಸಿದರು. ಸಹಾಯಕ ಎಂಜಿನಿಯರ್ ಹೇಮಂತ್ ಕುಮಾರ್ ಸ್ವಾಗತಿಸಿದರು. ನಗರಸಭೆ ಕಂದಾಯ ಅಧಿಕಾರಿ ತಾಹೀರ್ ವಂದಿಸಿದರು.