ಪರಿಶಿಷ್ಟ ಜಾತಿಯಲ್ಲಿ ತಾರತಮ್ಯ ಹೋಗಲಾಡಿಸಲು. ಅತ್ಯಂತ ಶೋಷಣೆಗೆ ಒಳಗಾದ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ಬಗ್ಗೆ ಸುಪ್ರಿಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ಜವಾಬ್ದಾರಿ ನೀಡಿರುವುದು ಅತ್ಯಂತ ಸ್ವಾಗತಾರ್ಹ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ಶಿರಾ ನಗರದ ಅಂಬೇಡ್ಕರ್ ಭವನದಲ್ಲಿ ಶಿರಾ ತಾಲೂಕು ಮಾತಂಗ ಸೇವಾನಿರತ ಮತ್ತು ನಿವೃತ್ತ ನೌಕರರ ಬಳಗದ ವತಿಯಿಂದ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಮಾತಂಗ (ಮಾದಿಗ) ಸಮುದಾಯದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಳಮೀಸಲಾತಿ ನೀಡುವ ಬಗ್ಗೆ ಸದಾಶಿವ ಆಯೋಗ ರಚಿಸಿದ್ದು ಕಾಂಗ್ರೆಸ್ ಸರ್ಕಾರ. ಸದಾಶಿವ ಆಯೋಗದ ವರದಿಯನ್ನು ಇದುವರೆಗೂ ಸರಕಾರಗಳು ಜಾರಿ ಮಾಡಲು ಆಗಲಿಲ್ಲ. ಸಧ್ಯ ಒಳಮೀಸಲಾತಿ ಜಾರಿಗೆ ಸುಪ್ರಿಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಜವಾಬ್ದಾರಿಯನ್ನು ಕೊಟ್ಟಿದ್ದು, ಇದಕ್ಕೆ ನನ್ನ ಒಪ್ಪಿಗೆ ಇದೆ. ಒಳಮೀಸಲಾತಿ ಕುರಿತು ಸುಪ್ರಿಂ ಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಶೋಷಣೆಗೊಳಗಾದ ಸಮುದಾಯಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ನಿರಂತರ ನಡೆಯಲಿ ಎಂದರು.

ಶಿರಾ ನಗರದಲ್ಲಿ ಮಾತಂಗ (ಮಾದಿಗ) ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಸಂಸದರು ಹಾಗೂ ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ ಶೋಷಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡಲು ಈ ದೇಶದ ಪ್ರಧಾನಮಂತ್ರಿಗಳು ಕೂಡ ಒಳಮೀಸಲಾತಿಯ ಪರವಾಗಿದ್ದಾರೆ. ದೇಶದಲ್ಲಿನ ಎನ್.ಡಿ.ಎ. ಸರ್ಕಾರ ಒಳಮೀಸಲಾತಿ ಜಾರಿಗೆ ನಾವು ಬದ್ಧರಿದ್ದೇವೆ ಎಂದು ಸುಪ್ರಿಂ ಕೋರ್ಟ್ಗೆ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಮುಖಾಂತರ ಅಫಿಡವಿಟ್ ಸಲ್ಲಿಸಿದೆ. ಕಳೆದ 30 ವರ್ಷಗಳಿಂದ ದಕ್ಷಿಣ ಭಾರತದಲ್ಲಿ ಒಳಮೀಸಲಾತಿಗಾಗಿ ಹೋರಾಟ ಮಾಡಿದ್ದಾರೆ. ಒಳಮೀಸಲಾತಿಯನ್ನು ನಾವು ಕೇಳುತ್ತಿರುವುದು ಸಾಮಾಜಿಕ ನ್ಯಾಯಕ್ಕಾಗಿಯೇ ಹೊರತು ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡಲಿಕ್ಕಲ್ಲ. ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಯವರಿಗೂ ಸಹ ಮೀಸಲಾಗಿ ಸಿಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರದ ಎನ್.ಡಿ.ಎ. ಸರ್ಕಾರ ಒಳಮೀಸಲಾತಿಗೆ ಬದ್ಧವಾಗಿದೆ ಎಂದರು.
ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ ಅತ್ಯಂತ ಹಿಂದುಳಿದ ಮಾದಿಗ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದಿರುವುದು ಶ್ಲಾಘನೀಯ. ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಶೋಷಿತ ಸಮುದಾಯದ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ಯಶಸ್ಸು ಸಾಧಿಸಿ ಎಂದ ಅವರು ದೇಶದಲ್ಲಿ ಸಮ ಸಮಾಜ ನಿರ್ಮಾಣ ಮಾಡಲು ನಾವೆಲ್ಲರೂ ಜತೆಯಾಗಿ ಕೆಲಸ ಮಾಡೋಣ ಎಂದರು.
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ ಮಾದಿಗ ಸಮುದಾಯದ ವಿದ್ಯಾರ್ಥಿಗಳಲ್ಲಿ ಅತ್ಯಂತ ಪ್ರತಿಭಾವಂತರಿದ್ದಾರೆ. ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಮುದಾಯದ ನೌಕರರು ತಮ್ಮ ವೇತನದಲ್ಲಿ ಕನಿಷ್ಟ ಶೇ. 10 ರಷ್ಟನ್ನು ಮೀಸಲಿಟ್ಟು ಸಮುದಾಯದ ಏಳಿಗೆಗೆ ಶ್ರಮಿಸಬೇಕು. ಆದಿಜಾಂಬವ ನಿಗಮದಲ್ಲಿ ಹಲವಾರು ಸೌಲಭ್ಯಗಳನ್ನು ಮಾದಿಗ ಸಮುದಾಯಕ್ಕೆ ನೀಡಲಾಗುತ್ತಿದ್ದು, ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ವೈದ್ಯರಾದ ಡಾ.ಅರುಂಧತಿ, ನಿವೃತ್ತ ಮುಖ್ಯ ಶಿಕ್ಷಕ ರಾಮಚಂದ್ರಪ್ಪ, ಚರಕ ಆಸ್ಪತ್ರೆಯ ವೈದ್ಯರಾದ ಡಾ.ಬಸವರಾಜು, ರೇಷ್ಮೆ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ವೈ.ಕೆ.ಬಾಲಕೃಷ್ಣ, ಸಹಾಯಕ ಕೃಷಿ ನಿರ್ದೇಶಕ ಎಚ್.ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ, ಬಿ.ಆರ್.ಸಿ. ಎಚ್.ರಂಗಪ್ಪ, ಜಿ.ಎನ್.ರಾಜಸಿಂಹ, ಕೊಟ್ಟ ಶಂಕರ್, ಮುಖ್ಯ ಶಿಕ್ಷಕ ರಾಮರಾಜ್, ರಾಜಣ್ಣ, ನರಸಿಂಹಮೂರ್ತಿ, ಮಹದೇವಪ್ಪ, ರವಿ, ನವೋದಯ ಬಳಗದ ಜಯರಾಮಕೃಷ್ಣ, ಉಪನ್ಯಾಸಕ ಶಿವಣ್ಣ ಹೆಂದೊರೆ, ಕೆಪಿಸಿಸಿ ಸದಸ್ಯ ಕೋಟೆ ಲೋಕೇಶ್, ಪಿ.ಬಿ.ನರಸಿಂಹಯ್ಯ, ಸಕ್ಕರ ನಾಗರಾಜು ಸೇರಿದಂತೆ ಹಲವರು ಹಾಜರಿದ್ದರು.
