- ಉದ್ಯೋಗ ಮತ್ತು ನೇಮಕಾತಿ ಅಭಿಯಾನ ಉದ್ಘಾಟಿಸಿ ಉನ್ನತ ಶಿಕ್ಷಣ ಸಚಿವ ಹೇಳಿಕೆ
- ‘ಎಸ್ಇಪಿ ಪರ, ವಿರೋಧ ಇರುವವರನ್ನೂ ಕರೆದು ಅಭಿಪ್ರಾಯ ಸಂಗ್ರಹಿಸಲಾಗುವುದು‘
ರಾಜ್ಯ ಶಿಕ್ಷಣ ನೀತಿ (ಎಸ್ಇಪಿ) ಜಾರಿಗೆ ತರುತ್ತೇವೆ ಎಂದು ನಾವು ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವೆ. ಎಸ್ಇಪಿಯ ಪರ ಮತ್ತು ವಿರುದ್ಧ ಅಭಿಪ್ರಾಯ ಹೊಂದಿರುವ ಶಿಕ್ಷಣ ತಜ್ಞರು, ಕುಲಪತಿಗಳು, ಶಿಕ್ಷಕರು, ನಿವೃತ್ತ ಬೋಧಕರು ಇದ್ದಾರೆ. ಅವರೆಲ್ಲರ ಜೊತೆ ಸಮಾಲೋಚಿಸಿ ಎರಡು ವರ್ಷಗಳೊಳಗೆ ಯಾವುದೇ ಗೊಂದಲವಿಲ್ಲದಂತೆ ಜಾರಿ ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ತಿಳಿಸಿದ್ದಾರೆ.
ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ರೋಟರಿ ಕ್ಲಬ್ ವತಿಯಿಂದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉದ್ಯೋಗ ಮತ್ತು ನೇಮಕಾತಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
“ಎಸ್ಇಪಿ ಪರ ಇರುವವರನ್ನೂ, ವಿರುದ್ಧ ಇರುವವರನ್ನೂ ಕರೆದು ಅವರ ಅಭಿಪ್ರಾಯ ಸಂಗ್ರಹಿಸಲಾಗುವುದು. ನಂತರ ಅಧ್ಯಯನ ನಡೆಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯಡಿ (ಎನ್ಇಪಿ) ಬಹಳಷ್ಟು ವಿದ್ಯಾರ್ಥಿಗಳು ಕೋರ್ಸ್ ಆಯ್ಕೆ ಮಾಡಿಕೊಂಡಿದ್ದಾರೆ. ನಾವು ತಕ್ಷಣ ಬದಲಾಯಿಸಿದರೆ ಆ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತದೆ. ಹೀಗಾಗಿ ಸೂಕ್ತ ಅಧ್ಯಯನ ನಂತರವೇ ಜಾರಿ ಮಾಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯದಿಂದ ಸಾವುಗಳಾದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ದಿನೇಶ್ ಗುಂಡೂರಾವ್
ಮುಕ್ತ ಅಭಿಪ್ರಾಯ ತಿಳಿಸಲು ಹಿಂದೇಟು
ಎನ್ಇಪಿ ಸೇರಿದಂತೆ ಉನ್ನತ ಶಿಕ್ಷಣದ ಹಲವು ವಿಷಯಗಳ ಮೇಲೆ ಮೇಲೆ ಚರ್ಚಿಸಲು ಸಚಿವರು ಕರೆಯಲಾಗಿದ್ದ ಸಭೆಯಲ್ಲಿ ಬಹುತೇಕ ಕುಲಪತಿಗಳು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ತಿಳಿಸಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಲಿಖಿತವಾಗಿಯೇ ಅಭಿಪ್ರಾಯ ತಿಳಿಸಲು ಸಚಿವರು ಸೂಚಿಸಿದ್ದಾರೆ.
ನೇಮಕಾತಿ ಪ್ರಕ್ರಿಯೆ ಶೀಘ್ರ ಪೂರ್ಣ
ಪ್ರಥಮದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲಾಗುವುದು. ಎಲ್ಲ ವಿಶ್ವವಿದ್ಯಾಲಯಗಳ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಲಿದೆ” ಎಂದು ಸಚಿವರು ಇದೇ ವೇಳೆ ತಿಳಿಸಿದ್ದಾರೆ.