ರಾಜ್ಯ ಸರ್ಕಾರದಿಂದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ನಮ್ಮ ಸರ್ಕಾರವಿದ್ದಾಗ ಗೋಹತ್ಯೆಯನ್ನು ತಡೆಯುವುದಕ್ಕೆ ಜಾರಿ ತಂದಿದ್ದ ಕಾಯ್ದೆಯನ್ನು ರದ್ದು ಮಾಡಲಾಗಿದೆ ಎಂದು ಮಾಜಿ ಸಚಿವ, ಔರಾದ ಶಾಸಕ ಪ್ರಭು ಚೌವ್ಹಾಣ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ಬೀದರ್ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ರಾಜ್ಯ ಸರ್ಕಾರದ ರೈತ ವಿರೋಧಿ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ಒತ್ತಾಯಿಸಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ಸರ್ಕಾರ ಗೋ ಶಾಲೆಗೆ ಸಮರ್ಪಕವಾಗಿ ಅನುದಾನವನ್ನು ನೀಡುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರದಿಂದ ಮೂಕ ಪ್ರಾಣಿಗಳ ಮೇಲೆ ಅನ್ಯಾಯ ಮಾಡಲಾಗುತ್ತಿದೆ. ಇದರ ಶಾಪವನ್ನು ರಾಜ್ಯ ಸರ್ಕಾರಕ್ಕೆ ತಟ್ಟಿ ರಾಜ್ಯ ಸರ್ಕಾರ ಶೀಘ್ರದಲ್ಲಿ ಪತನಗೊಳ್ಳುತ್ತದೆ. ಬಿಜೆಪಿ ಸರ್ಕಾರವಿದ್ದಾಗ ರೈತರಿಗೆ ನೀಡಲಾಗುತ್ತಿರುವ ಹಾಲಿನ ಸಹಾಯ ಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ. ಹಾಗಾಗಿ ರೈತರ ನೆರವಿಗೆ ಸರ್ಕಾರ ಬರುತ್ತಿಲ್ಲ. ಹಾಲಿನ ಸಹಾಯಧನ ಶ್ರೀಘ್ರದಲ್ಲಿ ಬಿಡುಗಡೆ ಮಾಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.
ರಾಜ್ಯ ಭಾಜಪಾ ಕಾರ್ಯದರ್ಶಿ ಹಾಗೂ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, “ರಾಜ್ಯ ಸರ್ಕಾರದ ಗೋ ಹತ್ಯೆ ನಿಷೇಧ ಕಾಯ್ದೆಗೆ ನಿರ್ಲಕ್ಷಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಜಾನುವಾರು ಹತ್ಯೆ ಮತ್ತು ಪ್ರತಿಬಂಧಕ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಅದಕ್ಕೆ ಪೂರಕವಾಗಿ ಅನೇಕ ಕ್ರಮಗಳನ್ನು ಜರುಗಿಸಲಾಗಿತ್ತು. ಚೆಕ್ಪೊಸ್ಟ್ ಗಳನ್ನು ತೆರೆದು, ಗೋವುಗಳನ್ನು ಕಸಾಯಿಖಾನೆಗಳಿಗೆ ಸಾಗಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಈಗ ಆ ಕೆಲಸ ಆಗುತ್ತಿಲ್ಲ.ಈಗ ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಇಲ್ಲದೆ ಮಾಂಸವನ್ನು ಮಾರಾಟ ಮಾಡಲಾಗುತ್ತಿದೆ” ಎಂದರು.
“ರಾಜ್ಯ ಕಾಂಗ್ರೇಸ್ ಸರ್ಕಾರ ಪರಿಶಿಷ್ಟ ಜಾತಿಯ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತಮ್ಮ ಗ್ಯಾರಂಟಿಗಳಿಗೆ ಬಳಸಿಕೊಂಡು ಪರಿಶಿಷ್ಟ ಜಾತಿಯ ಅಭಿವೃದ್ಧಿ ಕುಂಠಿತಗೊಂಡಿದೆ. ರಾಜ್ಯ ಸರ್ಕಾರದಿಂದ ಶೀಘ್ರದಲ್ಲಿ ಗೋಹತ್ಯೆ ಕಾಯ್ದೆಯನ್ನು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡು ಗೋಹತ್ಯೆಯನ್ನು ತಡೆದು ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ಬಸವಕಲ್ಯಾಣ ಶಾಸಕ ಶರಣು ಸಲಗರ ಮಾತನಾಡಿ, “ಗೋವುಗಳ ಸಾಕಣೆ ಮಾಡುವವರಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಪ್ರೋತ್ಸಾಹ ಧನ ಕೊಡುತ್ತಿದ್ದೆವು. ಈಗ ಅದನ್ನು ಕೊಡುತ್ತಿಲ್ಲ. ಶೀಘ್ರ ಪ್ರೋತ್ಸಾಹ ಧನ ಕೊಡಬೇಕು. ಅಗತ್ಯ ಇರುವ ಕಡೆಗಳಲ್ಲಿ ಗೋಶಾಲೆಗಳನ್ನು ಆರಂಭಿಸಬೆಕು. ಕಸಾಯಿಖಾನೆಗಳನ್ನು ಬಂದ್ ಮಾಡಿಸಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯ ನೇತ್ರತ್ವ ವಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, “ರಾಜ್ಯದಲ್ಲಿ ಗೋಹತ್ಯೆ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಹಾಗೂ ಗೋಶಾಲೆಗಳಿಗೆ ಅನುದಾನವನ್ನು ಜಾರಿಗೊಳಿಸಿ ಬಿಜೆಪಿ ಸರ್ಕಾರವಿದ್ದಾಗ ಗೋರಕ್ಷಣೆ ತುರ್ತು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಸೇವೆಯನ್ನು ಪುನಃ ಆರಂಭಿಸಬೇಕು. ಇಲ್ಲದಿದ್ದಲ್ಲಿ ಗ್ರಾಮ ಮಟ್ಟದಲ್ಲಿ ಪಕ್ಷದಿಂದ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಪ್ರತಿವರ್ಷ ʼಬಸವ ಉತ್ಸವʼ ಆಚರಿಸಲು ಬಸವಪರ ಸಂಘಟನೆಗಳ ಆಗ್ರಹ
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪಾ ಯರನಳ್ಳಿ, ಮಾಧವ ಹೊಸೂರೆ, ಬೀದರ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೇಂದ್ರ ಪೂಜಾರಿ, ಬೀದರ ನಗರ ಘಟಕದ ಅಧ್ಯಕ್ಷ ಶಶಿ ಹೊಸಳ್ಳಿ, ಔರಾದ ತಾಲೂಕಾ ಘಟಕ ಅಧ್ಯಕ್ಷ ಆರ್. ಪನ್ನಾಳೆ, ರಾಜಶೇಖರ ನಾಗಮೂರ್ತಿ, ರಾಜಕುಮಾರ ಪಾಟೀಲ ನೆಮತಾಬಾದ, ಬಾಬುರಾವ ಕಾರಬಾರಿ, ನರೇಶ ಗೌಳಿ, ವಿಕ್ರಮ ಮುದಾಳೆ, ನೀತಿನ ನವಲಕೇರೆ, ಸಂಜು ಭೀಮನಗರ, ಭೂಷಣ ಫಾಟಕ, ರೊಷನ್ ವರ್ಮಾ, ವೀರೂ ದಿಗ್ವಾಲ್, ಹಣಮಂತ ಬುಳ್ಳಾ, ನವೀನ ಚಿಟ್ಟಾ, ಬಸವರಾಜ ಪವಾರ, ಶಿವಪುತ್ರ ವೈದ್ಯ, ಶ್ರೀನಿವಾಸ ಚೌಧರಿ ಸೇರಿದಂತೆ ಪಕ್ಷದ ಕಾರ್ಯಕರ್ತರಿದ್ದರು.