ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅಸಭ್ಯ ಮತ್ತು ಕೀಳಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಕ್ಷಣವೇ ಅವರ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಸಂಸದ ಸಾಗರ್ ಖಂಡ್ರೆ ಒತ್ತಾಯಿಸಿದ್ದಾರೆ.
ʼಭಾರತದ ಸಂವಿಧಾನಕ್ಕೆ ಬುನಾದಿ ಹಾಕಿ ದೇಶದ ಪ್ರಜಾಪ್ರಭುತ್ವ ಬಲಪಡಿಸಿದವರು ಅಂಬೇಡ್ಕರ್. ಅಂತಹ ಮಹಾನ್ ವ್ಯಕ್ತಿಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸೋಮವಾರ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ‘ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಈಗ ಫ್ಯಾಷನ್ ಆಗಿಬಿಟ್ಟಿದೆ. ಅದರ ಬದಲು ದೇವರನ್ನು ಜಪಿಸಿದರೆ ಏಳೇಳು ಜನ್ಮದಲ್ಲೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು’ ಎಂದು ಹೇಳುವ ಮೂಲಕ ಡಾ. ಅಂಬೇಡ್ಕರ್ ಅವರ ತತ್ವ, ಆದರ್ಶ, ಮತ್ತು ಅವರ ವಿಚಾರಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಇದರಿಂದ ದೇಶದ ಜನರಿಗೆ ನೋವುಂಟು ಮಾಡಿದೆ. ಬಿಜೆಪಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಬಿಜೆಪಿ ಪ್ರಾರಂಭದಿಂದಲೇ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಅಂಬೇಡ್ಕರ್ ಅವರ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆʼ ಎಂದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಂಬೇಡ್ಕರ್ ಪ್ರತಿಮೆ ಎದುರು ಅಮಿತ್ ಶಾ ಮಂಡಿಯೂರಿ ಕ್ಷಮೆ ಕೇಳಬೇಕು: ಜನಪರ ಮುಖಂಡರ ಆಗ್ರಹ
ಭಾರತೀಯ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ ಮತ್ತು ಸಹಬಾಳ್ವೆಗೆ ಒತ್ತು ನೀಡುತ್ತದೆ. ಆದರೆ ಬಿಜೆಪಿ ಸರ್ಕಾರದ ಧೋರಣೆಗಳು ಈ ತತ್ವಗಳಿಗೆ ವಿರುದ್ಧವಾಗಿದೆ. ಅಂಬೇಡ್ಕರ್ ಅವರ ತತ್ವಗಳು ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯವನ್ನು ಬಲಪಡಿಸಲು ಪ್ರೇರಣೆಯಾಗಿವೆ. ಅವರನ್ನು ಅವಮಾನಿಸುವ ಮಾತುಗಳು ದೇಶದ ಸಂವಿಧಾನದ ವಿರುದ್ಧ ದಾಳಿಯಂತೆ ಕಂಡುಬರುತ್ತವೆ. ಕಾಂಗ್ರೆಸ್ ಪಕ್ಷ ಸಂವಿಧಾನ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ರಕ್ಷಿಸಲು ಸದಾ ಬದ್ಧರಾಗಿದ್ದೇವೆʼ ಎಂದು ತಿಳಿಸಿದ್ದಾರೆ.