- ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿಲ್ಲ ಎಂದು ಆಕ್ರೋಶ
- ಚುನಾವಣೆ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರಿಂದ ಕಲ್ಲು ತೂರಾಟ
ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಪುತ್ರ ಮತ್ತು ಚಿಂಚೋಳಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಅವರ ವಾಹನಗಳ ಮೇಲೆ ಶನಿವಾರ ರಾತ್ರಿ ಕಲ್ಲು ತೂರಾಟ ನಡೆದಿದೆ.
ಚಿಂಚೋಳಿ ತಾಲೂಕಿನ ಚಂದನಕೆರಾ ಗ್ರಾಮಕ್ಕೆ ಚುನಾವಣೆ ಪ್ರಚಾರಕ್ಕೆ ತೆರಳಿರುವ ವೇಳೆ ಶಾಸಕ ಅವಿನಾಶ್ ಜಾಧವ್ ಮತ್ತು ಸಂಗಡಿಗರು ಹಾಗೂ ಬೆಂಬಲಿಗರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಚುನಾವಣೆ ಪ್ರಚಾರಕ್ಕೆ ತೆರಳಿದ್ದ ವೇಳೆ ಚಂದನಕೆರಾ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲಾ ಎಂಬ ಕಾರಣಕ್ಕೆ ಗ್ರಾಮಸ್ಥರು ಜಗಳ ತೆಗೆದಿದ್ದಾರೆ. ನಂತರ ಕಾರುಗಳ ಮೇಲೆ ಕಲ್ಲು ಎಸೆದು, ಡಾ. ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
“ಚುನಾವಣಾ ಪ್ರಚಾರ ಮುಗಿಸಿ ಗ್ರಾಮದ ಓಣಿಯಿಂದ ತೆರಳುವಾಗ ಕಾಂಗ್ರೆಸ್ ಕಾರ್ಯಕರ್ತರು ತನ್ನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ” ಎಂದು ಶಾಸಕ ಜಾಧವ್ ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೋದಿ ನೀಡಿದ ಆಫರ್ಗಳನ್ನೇ ತಿರಸ್ಕರಿಸಿದ ಜಗದೀಶ್ ಶೆಟ್ಟರ್!
ಈ ಹಿನ್ನೆಲೆ ತಡರಾತ್ರಿ ಚಂದನಕೇರಾ ಗ್ರಾಮಕ್ಕೆ ಆಗಮಿಸಿದ ಪೊಲೀಸರು, ಗ್ರಾಮದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ತಡರಾತ್ರಿಯೇ ಪೊಲೀಸರು ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಘಟನೆಯಲ್ಲಿ ನಾಲ್ಕು ಮಂದಿಗೆ ಗಾಯಗಳಾಗಿವೆ. ವಾಹನಗಳ ಗಾಜು ಪುಡಿಪುಡಿ ಆಗಿವೆ ಎಂದು ಶಾಸಕರ ಬೆಂಬಲಿಗರು ತಿಳಿಸಿದ್ದಾರೆ. ಈ ಸಂಬಂಧ ರಟಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.