ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಂಭ್ರಮಾಚರಣೆ ವೇಳೆ ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿದ್ದು, ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ತಾಲಿಬಾನೀಕರಣ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರು ಪಾಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸುತ್ತಿದ್ದರು. ಈ ವೇಳೆ, ತಮ್ಮ ಮನೆಯ ಮುಂದೆ ಪಟಾಕಿ ಸಿಡಿಸುವುದನ್ನು ಕೃಷ್ಣಪ್ಪ ಎಂಬಾತ ವಿರೋಧಿಸಿದ್ದರು. ಅವರ ಮೇಲೆ ಹಲವರು ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಕೃಷ್ಣಪ್ಪ ಸಾವನ್ನಪ್ಪಿದ್ದರು.
ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಕಟೀಲ್, “ರಾಜ್ಯದಲ್ಲಿ ತಾಲಿಬಾನೀಕರಣ ಆರಂಭವಾಗಿದೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರು ಹೆಚ್ಚುತ್ತಿದ್ದಾರೆ. ಶಾಂತಿ ಮತ್ತು ಸೌಹಾರ್ದತೆಯನ್ನು ಹಾಳು ಮಾಡುತ್ತಿದ್ದಾರೆ. ಕಾಂಗ್ರೆಸ್ ಇಂತಹ ಜನರಿಗೆ ಆಶ್ರಯ ನೀಡಿ ಪ್ರಚಾರ ಮಾಡಿದ್ದರಿಂದ ಇದು ನಡೆಯುತ್ತಿದೆ. ಕಾಂಗ್ರೆಸ್ನಿಂದ ಒಳ್ಳೆಯದ್ದನ್ನು ನಿರೀಕ್ಷಿಸಲು ಸಾಧ್ಯವಿಲ್ಲ,” ಎಂದಿದ್ದಾರೆ.
ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ನಡೆಸಿದ ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.