- 25 ಡೆಂಗಿ ಪ್ರಕರಣ ವರದಿಯಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ; ಡಿಎಚ್ಒ
- ತಂಬಾಕು ನಿಯಂತ್ರಣ ಕಾಯ್ದೆ ಸಮರ್ಪಕ ಜಾರಿಗೆ ಕ್ರಮ ವಹಸಿ; ಡಿಸಿ ಸೂಚನೆ
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ ಸೂಚಿಸಿದ್ದಾರೆ.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಂಬಂಧ ಮಾಹಿತಿ ಪಡೆದು ಮಾತನಾಡಿ, “ಡೆಂಗಿ, ಚಿಕನ್ ಗುನ್ಯ, ಮಲೇರಿಯ ಮತ್ತಿತರ ಸಾಂಕ್ರಾಮಿಕ ರೋಗ ತಡೆಯುವಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಶಾಲೆಗಳು, ಕಚೇರಿಗಳು, ಇತರೆ ಎಲ್ಲೆಡೆ ನೀರಿನ ಟ್ಯಾಂಕ್ನ್ನು ಆರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸುವಂತಾಗಬೇಕು” ಎಂದು ನಿರ್ದೇಶಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಸಭೆಗೆ ಮಾಹಿತಿ ನೀಡಿ, “ಕಳೆದ ಮೂರು ತಿಂಗಳಲ್ಲಿ 25 ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಆರೋಗ್ಯಯುತರಾಗಿದ್ದಾರೆ. ಮನೆಯ ಸುತ್ತಮುತ್ತ ಪರಿಸರ ಶುಚಿತ್ವ ಕಾಪಾಡಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಬೇಕು” ಎಂದರು.
ರಾಷ್ಟ್ರೀಯ ಅತಿಸಾರ ಭೇದಿಯ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಸಂಬಂಧಿಸಿದಂತೆ ಮಾಹಿತಿ ನೀಡಿದ ಆರ್ಸಿಎಚ್ ಅಧಿಕಾರಿ ಡಾ. ಗೋಪಿನಾಥ್, ಚಿಕ್ಕಮಕ್ಕಳಲ್ಲಿ ಅತಿಸಾರ ಭೇದಿ ನಿಯಂತ್ರಿಸುವುದು ಮತ್ತು ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕಿದೆ ಎಂದರು.
ಚಿಕ್ಕ ಮಕ್ಕಳಲ್ಲಿ ಪದೇಪದೆ ಭೇದಿ ಕಂಡು ಬರುತ್ತದೆ. ಆದ್ದರಿಂದ ಓಆರ್ಎಸ್ ಮತ್ತು ಜಿಂಕ್ನ್ನು ಉಪಯೋಗಿಸಬೇಕಿದೆ. ಸ್ವಚ್ಛತೆಗೆ ಗಮನಹರಿಸಬೇಕಿದೆ. ಕೈತೊಳೆಯುವ ವೈಜ್ಞಾನಿಕ ವಿಧಾನವನ್ನು ಮಕ್ಕಳಲ್ಲಿ ಅರಿವು ಮೂಡಿಸುವುದು, ನಗರ ಪ್ರದೇಶಗಳಲ್ಲಿ ಸಂಚಾರಿ ಆರೋಗ್ಯ ತಂಡಗಳ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ. ಎಸ್ ಆಕಾಶ್ ಮಾತನಾಡಿ, ಶಿಶು ಮರಣ ತಡೆಯುವಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆರೋಗ್ಯದ ಕಡೆ ಹೆಚ್ಚಿನ ಮಹತ್ವ ನೀಡುವಲ್ಲಿ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು.
ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿ ವೇತನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ: ಎಚ್ ಸಿ ಮಹದೇವಪ್ಪ
ತಂಬಾಕು ನಿಯಂತ್ರಣ ಕಾಯ್ದೆ ಸಮರ್ಪಕ ಜಾರಿಗೆ ಸೂಚನೆ
ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ. ಬಿ ಸಿ ಸತೀಶ ಅವರು ಎಲ್ಲ ಕಚೇರಿಗಳಲ್ಲಿ ತಂಬಾಕು ಮುಕ್ತ ವಲಯ ಎಂದು ನಾಮಫಲಕ ಅಳವಡಿಸಲಾಗಿದೆಯೇ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳುವಂತೆ ಸೂಚಿಸಿದರು.
ತಂಬಾಕು ನಿಯಂತ್ರಣ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ 6ಬಿ ಕಾಯ್ಡೆಯ ಅನುಷ್ಠಾನ ಕುರಿತು ಅರಿವು ಮೂಡಿಸಬೇಕು. ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ತಂಬಾಕು ಮುಕ್ತ ಕಾಲೇಜು ಮಾಡುವಲ್ಲಿ ಶ್ರಮಿಸಬೇಕು ಎಂದರು.
ತಹಶೀಲ್ದಾರ್ ನೇತೃತ್ವದಲ್ಲಿ ತಾಲೂಕು ಸಮನ್ವಯ ಸಮಿತಿ ಸಭೆ ನಡೆಸಬೇಕು. ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಕೋಪ್ಟಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್, ಕೋಪ್ಟಾ ಕಾಯ್ದೆ ನಿಯಂತ್ರಣ ಸೇರಿದಂತೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸೇರಿಸಿಕೊಂಡು ಕಾರ್ಯಕ್ರಮ ಆಯೋಜಿಸುವಂತೆ ಸಲಹೆ ನೀಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಸರ್ಜನ್ ಡಾ. ನಂಜುಂಡಯ್ಯ, ತಾಲೂಕು ವೈದ್ಯಾಧಿಕಾರಿಗಳಾದ ಡಾ. ಯತಿರಾಜ್, ಡಾ. ಚೇತನ್, ಡಾ. ಅನಿಲ್ ಧವನ್, ಡಾ. ಸೋಮಶೇಖರ್ ಮತ್ತು ಡಾ. ಕುಸ್ವಂತ್ ಕೋಳಿಬೈಲು ಇತರರು ಹಲವು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾ ದೇವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಬಿಸಿಎಂ ಇಲಾಖೆ ಅಧಿಕಾರಿ ಎನ್ ಮಂಜುನಾಥ್ ಹಾಜರಿದ್ದರು.