ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರಾಜ್ಯ ಸರ್ಕಾರದ ಗೌರವಧನ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಬಿಡುಗಡೆಯಾಗಿಲ್ಲ. ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ನೂತನ ಆಡಳಿತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
“ಕಳೆದ ಮೂರು ನಾಲ್ಕು ತಿಂಗಳುಗಳಿಂದ ಆಶಾ ಕಾರ್ಯಕರ್ತೆಯರು ಬಿರು ಬಿಸಿಲಿನಲ್ಲಿ ನಿಷ್ಠೆಯಿಂದ ಇಲಾಖೆಯ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಸೇವೆಗೆ ವೇತನ ನೀಡದೆ ಇಲಾಖೆ ಅವರನ್ನು ಸಂಕಷ್ಟಕ್ಕೆ ದೂಡಿದೆ. ಒಂಟಿ ಮಹಿಳೆಯರು ಸೇರಿದಂತೆ ಬಹುತೇಕ ಆಶಾ ಕಾರ್ಯಕರ್ತೆಯರು ಇದನ್ನೇ ನಂಬಿ ಬದುಕು ನಡೆಸುತ್ತಿದ್ದಾರೆ. ಆದರೆ, ವೇತನ ಇಲ್ಲದೆ ಜೀವನ ನಡೆಸಲು ಅತ್ಯಂತ ತೊಂದರೆ ಉಂಟಾಗಿದೆ” ಎಂದು ಸಂಘದ ರಾಜ್ಯ ಕಾರ್ಯದರ್ಶಿ ಡಿ ನಾಗಲಕ್ಷ್ಮಿ ಅವಲತ್ತುಕೊಂಡಿದ್ದಾರೆ.
“ವೇತನ ಬಿಡುಗಡೆ ಮಾಡುವಂತೆ ಕಳೆದ ಒಂದೂವರೆ ತಿಂಗಳಿಂದ ಇಲಾಖೆಯ ಮುಖ್ಯಸ್ಥರಿಗೆ ಹಲವು ಬಾರಿ ಮೌಖಿಕವಾಗಿ ಮತ್ತು ವಿವಿಧ ಸಭೆಗಳಲ್ಲಿ ಮನವಿ ನೀಡಲಾಗಿತ್ತು. ಪ್ರತಿ ಬಾರಿ ಒಂದು ವಾರದಲ್ಲಿ ಗೌರವಧನ – ಪ್ರೋತ್ಸಾಹಧನ ಬಿಡುಗಡೆ ಆಗುವುದೆಂದು ಭರವಸೆಗಳನ್ನು ನೀಡುತ್ತಲೇ ಇದ್ದರು. ಆದರೆ, ಮೂರ್ನಾಲ್ಕು ತಿಂಗಳಿಂದ ಗೌರವಧನ ಬಿಡುಗಡೆ ಆಗಿಲ್ಲ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಪಿಂಚಣಿ ಮೊತ್ತ ಪರಿಷ್ಕರಣೆಗೆ ಒತ್ತಾಯಿಸಿ ಬ್ಯಾಂಕ್ ಪಿಂಚಣಿದಾರರ ಧರಣಿ
“ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗೌರವಧನ-ಪ್ರೋತ್ಸಾಹಧನ ಬಿಡುಗಡೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.
ಸಂಘದ ರಾಜ್ಯಾಧ್ಯಕ್ಷ ಕೆ ಸೋಮಶೇಖರ್ ಯಾದಗಿರಿ, ರಾಜ್ಯ ಕಾರ್ಯದರ್ಶಿ ಡಿ ನಾಗಲಕ್ಷ್ಮಿ ಈ ಮೂಲಕ ಪ್ರಕಟಣೆಗೆ ತಿಳಿಸಿದ್ದಾರೆ.