- ‘ವಿಮಾನ ನಿಲ್ದಾಣಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ‘
- ‘ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆ ಸರ್ಕಾರ ಮಾಡಲಿದೆ‘
ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿ ವಿಮಾನಯಾನ ಕಂಪನಿ ಆರಂಭಿಸುವ ಪ್ರಸ್ತಾವವಿದೆ. ಈ ಬಗ್ಗೆ ಪರಿಶೀಲಿಸಿ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ವಿಮಾನ ನಿಲ್ದಾಣಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರವನ್ನು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. ಅದೇ ರೀತಿ ಸ್ವಂತ ವಿಮಾನಯಾನ ಕಂಪನಿ ಕೂಡ ಸ್ಥಾಪಿಸಿ, ರಾಜ್ಯದೊಳಗೆ ಸೇವೆ ಆರಂಭಿಸಲಾಗುವುದು” ಎಂದು ತಿಳಿಸಿದರು.
ಒಂದು ಹೊಸ ವಿಮಾನ ಖರೀದಿಗೆ 200 ಕೋಟಿ ವೆಚ್ಚವಾಗಲಿದೆ. 600 ಕೋಟಿ ವೆಚ್ಚದಲ್ಲಿ ಮೂರು ವಿಮಾನ ಖರೀದಿಸಿ ಬೆಂಗಳೂರಿನಿಂದ ಮೈಸೂರು, ಹುಬ್ಬಳ್ಳಿ, ಕಲಬುರಗಿ, ಶಿವಮೊಗ್ಗ ಸೇರಿದಂತೆ ವಿವಿಧ ನಗರಗಳಿವೆ ವಿಮಾನಯಾನ ಸೇವೆ ಒದಗಿಸುವ ಬಗ್ಗೆ ಚಿಂತನೆ ಇದೆ. ಈ ಬಗ್ಗೆ ವಿಮಾನಯಾನ ಕ್ಷೇತ್ರದ ತಜ್ಞರ ಜತೆ ಸಮಾಲೋಚಿಸಲಾಗುತ್ತಿದೆ” ಎಂದು ವಿವರಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?
“ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರವೇ ಮಾಡಲಿದೆ. ಇನ್ನು ಮುಂದೆ ಹೊಸದಾಗಿ ನಿರ್ಮಾಣವಾಗುವ ವಿಮಾನ ನಿಲ್ದಾಣಗಳನ್ನು ಪ್ರಾಧಿಕಾರದ ಮೂಲಕವೇ ನಿರ್ವಹಣೆ ಮಾಡಲಾಗುವುದು” ಎಂದರು.
“ಕಾಂಗ್ರೆಸ್ ಸರ್ಕಾರ ನೂರು ದಿನ ಪೂರೈಸಿದೆ. ಈ ಅವಧಿಯಲ್ಲಿ ಕೈಗಾರಿಕಾ ಇಲಾಖೆಯಲ್ಲಿ 60,000 ಕೋಟಿ ರೂ. ಮೊತ್ತದ ಹೂಡಿಕೆ ಒಪ್ಪಂದಗಳಾಗಿವೆ. ಹಲವು ಹೊಸ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ” ಎಂದು ವಿವರಿಸಿದರು.