ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಅರ್) ಸಂಘಟನೆ ಮುಖಂಡರು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.
“ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ವಿಧಿಸಲಾಗಿರುವ ಹಿಜಾಬ್ ನಿಷೇಧವನ್ನು ಹಿಂಪಡೆಯುವ ಕುರಿತು ಹೇಳಿಕೆ ನೀಡಿ ಮೂಲಭೂತ ಹಕ್ಕನ್ನು ಎತ್ತಿ ಹಿಡಿಯುವ ಕುರಿತು ಹೇಳಿದ್ದರು. ಈ ಹೇಳಿಕೆಯನ್ನು ಉಲ್ಲೇಖಿಸಿ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಕಾರುವ ಹೇಳಿಕೆ ನೀಡಿರುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಕಲ್ಲಡ್ಕ ಪ್ರಭಾಕರ್ ಭಟ್ ರಾಜ್ಯದಲ್ಲಿ ಕೋಮು ದ್ವೇಷದ ಭಾಷಣ ಮಾಡಿ, ಶಾಂತಿ ಸುವ್ಯವಸ್ಥೆ ಕದಡುವ ನಿರಂತರ ಪ್ರಯತ್ನದಲ್ಲಿದ್ದು ಈ ಮುಂಚೆಯೂ ಕೂಡ ಅವರ ಹಲವು ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ದ್ವೇಷ ಭಾಷಣ ಮಾಡಿದ್ದಾರೆ. ಇದೀಗ ಮತ್ತೊಮ್ಮೆ ಸಂವಿಧಾನ ಕೊಟ್ಟ ಧಾರ್ಮಿಕ ಸ್ವಾತಂತ್ರ್ಯದ ಅನುಗುಣವಾಗಿ ವಿದ್ಯಾರ್ಥಿನಿಯರು ಧರಿಸುವ ಶಿರವಸ್ತ್ರದ ಕುರಿತು ಆಧಾರ ರಹಿತವಾಗಿ ಮಾತನಾಡುತ್ತ ಮುಸ್ಕಾನ್ ಎಂಬ ವಿದ್ಯಾರ್ಥಿನಿಯ ಕುರಿತು ಮಾನಹಾನಿಕಾರಕ ಹೇಳಿಕೆ ನೀಡುತ್ತ ಇಡೀ ಮುಸ್ಲಿಂ ಸಮುದಾಯ ಮತ್ತು ಮಹಿಳೆಯರ ಕುರಿತು ದ್ವೇಷ ಕಾರುವ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹೇಳಿಕೆಗಳನ್ನು ನೀಡಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
“ಮುಸ್ಕಾನ್, ನೀನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಅಲ್ಲಾಹು ಅಕ್ಬರ್ ಎಂದು ಹೇಳಬೇಕು. ಈ ದೇಶದಲ್ಲಿ ಹೇಳ ಬೇಕಿರೋದು ರಾಮನಾಮ. ಅಲ್ಲಾಹು ಅಕ್ಬರ್ ಎನ್ನಬೇಕಾದರೆ ನೀವು ಮುಸಲ್ಮಾನ ದೇಶಕ್ಕೆ ಹೋಗಿ. ಮುಸ್ಕಾನ್ಗೆ ಶಹಭಾಷ್ಗಿರಿ ಕೊಟ್ಟಿದ್ದು ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಸದಸ್ಯ. ಮುಸ್ಕಾನ್ಗೂ ಕೂಡ ಅಲ್ ಖೈದಾ ಜೊತೆ ಸಂಪರ್ಕ ಇದೆ. ತಾಕತ್ತಿದ್ದರೆ ಮುಸ್ಕಾನ್ ಮತ್ತೆ ಶಾಲೆಗೆ ಹೋಗುವ ಕೆಲಸ ಮಾಡಲಿ. ಇದನ್ನು ನೀವು ಹಿಂದೂಗಳ ದೌರ್ಬಲ್ಯ ಅಂದುಕೊಳ್ಳಬೇಡಿ. ನಾವು ಒಟ್ಟಾಗಿರಲು ಬಯಸುತ್ತೇವೆಂದು ಕೋಮು ಪ್ರಚೋದಕವಾಗಿ ಹೇಳಿಕೆ ನೀಡಿದ್ದಾನೆ” ಎಂದು ವಿವರಿಸಿದ್ದಾರೆ.
“ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿರುವ ಕಲ್ಲಡ್ಕ ಭಟ್, ʼಮುಸಲ್ಮಾನ್ ಹುಡುಗರು ಅಷ್ಟೇ ಅಲ್ಲ, ಮುಸ್ಲಿಂ ಮಹಿಳೆಯರೂ ಮತಾಂತರ ಮಾಡುತ್ತಿದ್ದಾರೆ. ನಿಮ್ಮ ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ. ಹಿಂದೂ ಹುಡುಗಿಯರನ್ನು ಯಾಕೆ ಟಾರ್ಗೆಟ್ ಮಾಡುತ್ತೀರಾ. ಮತಾಂತರ ಮಾಡಲು ಲವ್ ಜಿಹಾದ್ ಪ್ರಯತ್ನಗಳಾಗುತ್ತಿವೆ. ಮುಸ್ಲಿಮರಿಗೆ ಈ ಹಿಂದೆ ತಲಾಕ್ ಹೇಳುವ ಅವಕಾಶ ಇತ್ತು. ಮೋದಿ ಸರ್ಕಾರದಿಂದ ತ್ರಿವಳಿ ತಲಾಕ್ ಇಲ್ಲದಾಗಿದೆ. ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರʼ ಎಂದು ಹೇಳಿರುವ ಕುರಿತು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ” ಎಂದು ಹೇಳಿದ್ದಾರೆ.
“ಮುಸ್ಲಿಮರ ಸಂಖ್ಯೆ ಹೆಚ್ಚಾಗುತ್ತಿದೆ. ಈ ದೇಶವನ್ನು ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕು. ನಮ್ಮ ದೇಶವನ್ನು ಉಳಿಸಬೇಕೆಂದು ಹೇಳಿ ಸಾರ್ವಜನಿಕರ ನಡುವೆ ಧಾರ್ಮಿಕ ಸಂಘರ್ಷ ಹುಟ್ಟು ಹಾಕಲು ಯತ್ನ ನಡೆಸಿದ್ದಾನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗದಗ | ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಬಿಡುಗಡೆಗೆ ಆಗ್ರಹ
“ಈ ಎಲ್ಲ ಹೇಳಿಕೆಗಳಲ್ಲಿ ಆಧಾರ ರಹಿತವಾಗಿ ಕಲ್ಲಡ್ಕ ಪ್ರಭಾಕರ್ ಭಟ್ ಇಡೀ ಮುಸ್ಲಿಂ ಸಮಯದಾಯದ ವಿರುದ್ಧ ಪ್ರಮುಖವಾಗಿ ಮಹಿಳೆಯರ ವಿರುದ್ಧ ದ್ವೇಷ ಭಾಷಣ ಮಾಡುತ್ತ ಜನರಲ್ಲಿ ಆತಂಕ ಸೃಷ್ಟಿಸುವ, ಗಲಭೆ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದು ಅವರ ವಿರುದ್ಧ ಕೂಡಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು” ಎಂದು ತಾಜುದ್ದೀನ್ ಷರೀಫ್, ಗ್ಹೌಸೆ ಪಾಷಾ ಆಗ್ರಹಿಸಿದ್ದಾರೆ.