ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ ಕಾರ್ಯಕ್ರಮವಾಗಿ ಯಶಸ್ವಿ ಕಂಡಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರಶಿಲ್ಪಿ ಜಕಣಾಚಾರಿ ಸಾಂಸ್ಕೃತಿಕ ದಸರಾ ವೈಭವ ಮಹಾವೇದಿಕೆಯಲ್ಲಿ ಮಂಗಳವಾರ ರಾತ್ರಿ ತುಮಕೂರು ಸಾಂಸ್ಕೃತಿಕ ದಸರಾ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಸೆಪ್ಟೆಂಬರ್ 22 ರಿಂದ ಇಂದಿನವರೆಗೂ ತುಮಕೂರಿನಲ್ಲಿ ದಸರಾ ಉತ್ಸವವನ್ನು 2ನೇ ಬಾರಿ ಅತ್ಯಂತ ಅದ್ದೂರಿಯಾಗಿ ಎಲ್ಲರೂ ಸೇರಿ ಒಟ್ಟಾಗಿ ಆಚರಿಸುತ್ತಿದ್ದೇವೆ. ಕಳೆದ ವರ್ಷ ಪ್ರಥಮ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗಿದ್ದ ತುಮಕೂರು ದಸರಾ ಉತ್ಸವವು ಅಭೂತಪೂರ್ವ ಯಶಸ್ಸನ್ನು ಕಂಡಿದ್ದು, ಯಶಸ್ಸಿಗೆ ಸಹಕಾರ ನೀಡಿದ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿ ವರ್ಗ, ಹಲವಾರು ಸಂಘ-ಸಂಸ್ಥೆಗಳಿಗೆ ಅಭಿನಂದನೆ ತಿಳಿಸಿದರು.
ಇಂದು ನಾಡಿನಾದ್ಯಂತ ತುಮಕೂರು ದಸರಾ ಜನಮನ ಗೆದ್ದಿದೆ. ಆಧುನಿಕ ಭಾರತದಲ್ಲಿ ಕರ್ನಾಟಕ ರಾಜ್ಯವು ವೇಗವಾಗಿ ಅಭಿವೃದ್ಧಿಯ ಮಾರ್ಗದಲ್ಲಿ ಸಾಗುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ತುಮಕೂರು ವಿಶೇಷ ಸ್ಥಾನಮಾನ ಹೊಂದಿದ್ದು, ಸಿದ್ಧಗಂಗಾ ಶ್ರೀಗಳು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಅನ್ನದಾನ ನೀಡುತ್ತಿರುವುದು ಮಾದರಿ ಸಂಗತಿಯಾಗಿದೆ. ಇನ್ನೊಂದು ಕಡೆ ದಿವಂಗತ ಗಂಗಾಧರಯ್ಯ ಅವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಬೆಳಕು ಹರಡಿದ್ದರು ಎಂದು ಸ್ಮರಿಸಿದರು.

ದಸರಾ ಹಬ್ಬವು ಉಳಿದ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಅತಿ ಹೆಚ್ಚು ಪ್ರಸಿದ್ಧಿ ಪಡೆದಿದೆ ಎಂದು ಇತಿಹಾಸ ಹೇಳುತ್ತದೆ. ಕರ್ನಾಟಕದ ಇತಿಹಾಸ ವೈವಿಧ್ಯಮಯವಾಗಿದ್ದು, ಮೂರನೇ ಶತಮಾನದಲ್ಲಿ ಅಶೋಕ ಚಕ್ರವರ್ತಿ ಕಾಲದಲ್ಲಿ ಮಸ್ಕಿಯಲ್ಲಿ ಬೌದ್ಧ ಸಿದ್ಧಾಂತ ಹರಡಿದ ಉದಾಹರಣೆ, ಬೇಲೂರು ಹಳೇಬೀಡಿನಲ್ಲಿ ಜೈನ ಪರಂಪರೆಯ ಸಾಕ್ಷಿಗಳು ಕಾಣಸಿಗುತ್ತವೆ. ಹೀಗಾಗಿ ಕರ್ನಾಟಕ ಇತಿಹಾಸವನ್ನು ಅವಲೋಕಿಸಿದಾಗ ಭಾರತ ದೇಶದ ಯಾವುದೇ ರಾಜ್ಯದಲ್ಲಿ ಸಿಗದಷ್ಟು ಐತಿಹಾಸಿಕ ಪರಂಪರೆ ಇಲ್ಲಿ ಅಡಕವಾಗಿದೆ ಎಂದು ಅವರು ಹೇಳಿದರು.
ಇಡೀ ದೇಶದಲ್ಲಿ ಯಾವುದೇ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿ ದೊರೆತಿಲ್ಲ. ಆದರೆ ಕನ್ನಡ ಭಾಷೆಗೆ ಮಾತ್ರ 8 ಜ್ಞಾನಪೀಠ ಪ್ರಶಸ್ತಿ ದೊರೆತಿದೆ. 2008ರಲ್ಲಿ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಲಭಿಸಿತ್ತು. ಕನ್ನಡ ಭಾಷೆಗೆ 2500 ವರ್ಷಗಳ ಇತಿಹಾಸವಿದೆ. ನಾಟಕ, ಸಂಗೀತ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ಕರ್ನಾಟಕವನ್ನು ಮೀರಿಸುವ ರಾಜ್ಯ ಬೇರಿಲ್ಲವೆಂದು ಅವರು ಬಣ್ಣಿಸಿದರು.
ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 20,000 ಎಕರೆ ಪ್ರದೇಶದಲ್ಲಿ ಏಷ್ಯಾ ಖಂಡದ ಅತಿ ದೊಡ್ಡ ಇಂಡಸ್ಟಿçಯಲ್ ಕಾರಿಡಾರ್ ನಿರ್ಮಿಸಲಾಗುತ್ತಿದೆ. ತುಮಕೂರು ಜಿಲ್ಲೆಯಿಂದ 150ಕ್ಕೂ ಹೆಚ್ಚು ರಾಷ್ಟçಗಳಿಗೆ ಪ್ರತಿ ವರ್ಷ 10ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ರಫ್ತು ಮಾಡಲಾಗುತ್ತಿರುವುದು ಜಿಲ್ಲೆಯ ಅಭಿವೃದ್ಧಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿದಿನ ಈ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರಿಗೆ ಕಲಾ ಸಂಸ್ಕೃತಿಯ ಸವಿಯನ್ನು ನೀಡಿವೆ. ಸಮನ್ವಯ ಮತ್ತು ಶ್ರಮದಿಂದ ಉತ್ಸವ ಯಶಸ್ವಿಯಾಗಲು ತೊಡಗಿಸಿಕೊಂಡ ಎಲ್ಲಾ ಇಲಾಖೆಗಳಿಗೂ ಅವರು ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ತುಮುಲ್ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ ವೆಂಕಟೇಶ್,ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್,
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಬಿ.ವಿ., ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ್ ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಕಲಾವಿದ ಮಲ್ಲಿಕಾರ್ಜುನ ಕೆಂಕೆರೆ ಮತ್ತು ತಂಡವು ಪ್ರಸ್ತುತಪಡಿಸಿದ ಸುಗಮ ಸಂಗೀತ ಕಾರ್ಯಕ್ರಮವು ನೆರೆದಿದ್ದ ಪ್ರೇಕ್ಷಕರನ್ನು ಸಂಗೀತ ಕಡಲಲ್ಲಿ ಮುಳುಗಿಸಿದವು.
ಪ್ರೇಕ್ಷಕರಿಂದ ಹುಚ್ಚೆದ್ದು ಕುಣಿದು ಸ್ವಾಗತ ಮಲ್ಲ ಚಲನಚಿತ್ರದ “ಕರುನಾಡೇ ಕೈ ಚಾಚಿದೆ ನೋಡೆ” ಹಾಡಿನ ಮೂಲಕ ಗ್ರಾಂಡ್ ಎಂಟ್ರಿ ನೀಡಿ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದ ಕ್ರೇಜಿû ಸ್ಟಾರ್ ರವಿಚಂದ್ರನ್, ಜಸ್ಟ್ ಮಾತ್ ಮಾತಲ್ಲಿ ಚಲನಚಿತ್ರದ “ಎಲ್ಲೋ ರವಿ ಬರುವ ಸಮಯ” ಹಾಡಿನ ಮೂಲಕ ವೇದಿಕೆಗೆ ಆಗಮಿಸಿದ ಮೋಹಕ ತಾರೆ ರಮ್ಯಾ ಅವರನ್ನು ಹುಚ್ಚೆದ್ದು ಕುಣಿಯುವ ಮೂಲಕ ಪ್ರೇಕ್ಷಕರು ಸ್ವಾಗತಿಸಿದರು.

ಖ್ಯಾತ ಕನ್ನಡ ಚಲನಚಿತ್ರ ನಿರ್ಮಾಪಕ, ನಿರ್ದೇಶಕ, ಸಂಗೀತ ನಿರ್ದೇಶಕ ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಮಾತನಾಡಿ, “ಕನ್ನಡವನ್ನು ಅಪ್ಪಿಕೊಂಡಿರುವ ನನಗೆ ತುಮಕೂರಿನ ಪ್ರೀತಿಯು ನನ್ನ ಹೆತ್ತ ತಂದೆ-ತಾಯಿಯನ್ನು ನೆನಪಿಸುತ್ತದೆ” ಎಂದು ಭಾವುಕರಾದರು. ತುಮಕೂರಿನ 2 ಚಿತ್ರ ಮಂದಿರಗಳಲ್ಲಿ ತಮ್ಮ ಚಿತ್ರಗಳು ಬಿಡುಗಡೆಯಾಗುತ್ತಿದ್ದುದನ್ನು ಸ್ಮರಿಸಿಕೊಂಡು, “ಆ ದಿನಗಳಲ್ಲಿ ತುಮಕೂರು ಜನರು ನೀಡಿದ ಪ್ರೀತಿ, ಗೌರವ ನನಗೆ ಸದಾ ಸ್ಫೂರ್ತಿ ನೀಡಿದೆ” ಎಂದು ಹೇಳಿದರಲ್ಲದೆ, ಮತ್ತೊಂದು ಹೊಸದಾಗಿ ‘ಪ್ರೇಮಲೋಕ’ ಚಿತ್ರ ತಯಾರಿಗೆ ಸಿದ್ಧತೆ ನಡೆಯುತ್ತಿದೆ. ಪ್ರೇಮ ಮತ್ತು ಕುಟುಂಬ ಮೌಲ್ಯಗಳನ್ನು ಒಳಗೊಂಡ ಈ ಹೊಸ ಚಿತ್ರವೂ ಜನಮನ ಗೆಲ್ಲಲಿದೆ ಎಂಬ ವಿಶ್ವಾಸ ನನಗಿದೆ ಎಂದರು.
ತುಮಕೂರಿನ ವೈಭವದ ಉತ್ಸವವನ್ನು ಕಂಡು ಬೆರಗಾಗಿ ಮಾತನಾಡಿದ ರಮ್ಯಾ ಅವರು ಬಾಲ್ಯದಲ್ಲಿ ದಸರಾ ಆಚರಣೆ ಬಗ್ಗೆ ಮೆಲುಕು ಹಾಕುತ್ತಾ ಉತ್ತಮ ಚಿತ್ರಕತೆ ಬಂದರೆ ಮತ್ತೆ ನಟನೆ ಪ್ರಾರಂಭಿಸುತ್ತೇನೆAದು ಪ್ರೇಕ್ಷಕರಿಗೆ ತಿಳಿಸಿದರು.
ಜಾಣ ಚಲನಚಿತ್ರದ “ಪ್ರೇಮ ಲೋಕದ ಪಾರಿಜಾತವೇ ಯಾಕೆ ನೀನು ಎದೆಯ ತುಂಬಿದೆ” ಎನ್ನುವ ಹಾಡಿಗೆ ರವಿ ಮಾಮ ಹಾಗೂ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಹೆಜ್ಜೆ ಹಾಕಿ ಪ್ರೇಕ್ಷಕರ ಮನ ರಂಜಿಸಿದರು.
ರವಿಚಂದ್ರನ್ ಹಾಗೂ ರಮ್ಯಾ ಜೋಡಿಯನ್ನು ತೆರೆಯ ಮೇಲೆ ಕಾಣುವ ಬಯಕೆಯನ್ನು ಪ್ರೇಕ್ಷಕರು ವ್ಯಕ್ತಪಡಿಸಿದರು.
ನಂತರ ಆಳ್ವಾಸ್ ಸಾಂಸ್ಕೃತಿಕ ತಂಡದಿAದ “ನವ ದುರ್ಗೆಯರು” ನೃತ್ಯ ರೂಪಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.