ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ನವರಾತ್ರಿ ಪ್ರಯುಕ್ತ ಶ್ರೀ ಚಾಮುಂಡೇಶ್ವರಿಗೆ ವಿಶೇಷವಾಗಿ ಅಲಂಕಾರಿಸಲಾಗಿತ್ತು. ದಸರಾ ಉತ್ಸವದ 11ನೇ ದಿನವಾದ ಇಂದು ಏರ್ಪಡಿಸಿದ್ದ ಶ್ರೀ ಚಂಡಿಕಾ ಹೋಮದಲ್ಲಿ ಸಚಿವರು ಪಾಲ್ಗೊಂಡು ಜಿಲ್ಲೆಯ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿ ಹೋಮ ಕುಂಡಕ್ಕೆ ಪೂರ್ಣಾಹುತಿ ಅರ್ಪಿಸಿದರು. ನಂತರ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸೇರಿದಂತೆ ಭಕ್ತ ಸಮೂಹ ಪಾಲ್ಗೊಂಡಿದ್ದರು.