ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಡಿಸೆಂಬರ್ 31ರ ಬೆಳಿಗ್ಗೆ 8 ಗಂಟೆಯಿಂದ 2024ರ ಜನವರಿ 2ರ ಬೆಳಿಗ್ಗೆ 8ಗಂಟೆಯವರೆಗೆ ಈ ನಿರ್ಬಂಧ ಇರಲಿದೆ. ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಬೆಟ್ಟಕ್ಕೆ 2024ರ ಹೊಸ ವರ್ಷಾಚರಣೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಪ್ರವಾಸಿಗರು ಭೇಟಿ ನೀಡಲಿದ್ದು, ಸಂಭ್ರಮಾಚರಣೆ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ಸಂಭವಗಳು ಇರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.
ಸಾರ್ವಜನಿಕರು ಮದ್ಯಪಾನ ಮಾಡಿ ಹಾಗೂ ಜಾಲಿರೈಡ್ ನೆಪದಲ್ಲಿ ವಾಹನಗಳನ್ನು ಚಾಲನೆ ಮಾಡುವುದರಿಂದ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಈ ಪ್ರದೇಶಗಳು ಸುರಕ್ಷಿತ ಅರಣ್ಯ ಆವೃತ ಪ್ರದೇಶಗಳಾಗಿದ್ದು, ಪ್ರವಾಸಿಗರ ಮೇಲೆ ಕಾಡು ಪ್ರಾಣಿಗಳು ದಾಳಿ ಮಾಡುವ ಸಾಧ್ಯತೆ ಇರುತ್ತದೆ.
ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ನಾಮದ ಚಿಲುಮೆ, ಬಸದಿ ಬೆಟ್ಟ, ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿ ಗುಂಪು ಘರ್ಷಣೆಗಳಾಗಿ ಕಾನೂನು ಹಾಗೂ ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಂಭವವಿರುವುದರಿಂದ ಈ ನಿರ್ಬಂಧವನ್ನು ಹೇರಲಾಗಿದೆ. ಆದರೆ, ನಿರ್ಬಂಧಿತ ಅವಧಿಯಲ್ಲಿ ಮೇಲ್ಕಾಣಿಸಿದ ಮಾರ್ಗವಾಗಿ ದೈನಂದಿನ ಚಟುವಟಿಕೆಗಳಿಗೆ ತೆರಳುವ ಸ್ಥಳೀಯರು ಸದರಿ ಮಾರ್ಗ ಮಧ್ಯೆ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸದಂತೆ ತೆರಳಲು ಅನುಮತಿ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.