ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬವಿದ್ದಂತೆ. ಈ ಹಬ್ಬದಲ್ಲಿ ಪ್ರತಿಯೊಬ್ಬರೂ ತಪ್ಪದೆ ಭಾಗವಹಿಸಿ ಮತದಾನ ಮಾಡಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ನಡೆದ 2024ರ ಲೋಕಸಭಾ ಚುನಾವಣೆ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವ ಉದ್ಘಾಟಿಸಿ ಮಾತನಾಡಿದರು.
“ಮತ ಚಲಾಯಿಸುವ ಮೂಲಕವೇ ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾಗವಹಿಸಲು ಸಾಧ್ಯ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನ ಮಾಡಬೇಕು” ಎಂದು ತಿಳಿಸಿದರು.
“ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಎಲ್ಲರೂ ಮತದಾನ ಮಾಡುವಂತೆ ತಿಳಿಸಬೇಕು. ಯಾವುದೇ ಆಮಿಷಕ್ಕೆ ಬಲಿಯಾಗದೆ, ಮತ ಚಲಾಯಿಸುವ ಮೂಲಕ ದೇಶದ ಅಭವೃದ್ಧಿಯಲ್ಲಿ ಪಾಲ್ಗೊಳ್ಳಬೇಕು” ಎಂದು ತಿಳಿಸಿದರು.
“ಆನ್ಲೈನ್ ಅಪ್ಲಿಕೇಶನ್ ಮತ್ತು 1950 ಹೆಲ್ಪ್ ಲೈನ್ ಸಂಖ್ಯೆಗೆ ಕರೆ ಮಾಡುವ ಮೂಲಕ ಯಾರಾದರೂ ಆಮಿಷಗಳನ್ನು ಒಡ್ಡುತ್ತಿದ್ದರೆ ಅಥವಾ ಮತದಾನಕ್ಕೆ ಅಡ್ಡಿ ಪಡಿಸುತ್ತಿದ್ದರೆ ದೂರು ದಾಖಲು ಮಾಡಬಹುದಾಗಿದೆ” ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಮಾತನಾಡಿ, “ವಿಶ್ವದಲ್ಲಿ ಶೇ.55 ಆಡಳಿತ ದೇಶಗಳು ಪ್ರಜಾಪ್ರಭುತ್ವವನ್ನು ಆಯ್ಕೆ ಮಾಡಿಕೊಂಡಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶವನ್ನು ಸದೃಢವಾಗಿ ಮುನ್ನಡೆಸಲು ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳು ಕಾರ್ಯ ನಿರ್ವಹಿಸುತ್ತಿವೆ. ಉತ್ತಮ ಶಾಸಕಾಂಗ ರಚನೆಯಾಗಬೇಕೆಂದರೆ ಪ್ರತಿಯೊಬ್ಬರೂ ಮತದಾನ ಮಾಡುವುದು ಅತ್ಯಗತ್ಯ, ಕಳೆದಬಾರಿ ಕಡಿಮೆ ಪ್ರಮಾಣದಲ್ಲಿ ಮತದಾನ ನಡೆದಿದ್ದು, ಈ ಬಾರಿ ಶೇಕಡಾ 100ರಷ್ಟು ಮತದಾನ ಆಗುವಂತೆ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಪುರಾಣಗಳ ಕುರುಡು ನಿರಾಕರಣೆ ಸಲ್ಲದು: ಪ್ರೊ. ಬರಗೂರು ರಾಮಚಂದ್ರಪ್ಪ
ಮಕ್ಕಳೊಂದಿಗೆ ಸಂವಾದ ನಡೆಸಿದ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ಅವರು ಜಾಗೃತಿ ಜಾಥಾ ಕಾರ್ಯಕ್ರಮದ ಉದ್ದೇಶ ಮತ್ತು ಮತದಾನ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ, ಕೃಷಿ ಇಲಾಖೆ ಉಪನಿರ್ದೇಶಕ ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಲಾ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
