ಕೇಂದ್ರ ಸರ್ಕಾರ ಕೊಬ್ಬರಿಗೆ ಬೆಲೆ ನಿಗದಿಪಡಿಸಿರುವ ₹12,000ದ ಜತೆಗೆ ರಾಜ್ಯ ಸರ್ಕಾರ ₹3,000 ಸೇರಿಸಿ ನಾಫೆಡ್ ಮೂಲಕ ಕೊಬ್ಬರಿ ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಸೋಮವಾರ ಟೌನ್ಹಾಲ್ ವೃತ್ತದಿಂದ ಮೆರವಣಿಗೆಯಲ್ಲಿ ಆಗಮಿಸಿದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಆರಂಭಿಸಿದರು.
ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ಮಾತನಾಡಿ, “ಕೇಂದ್ರ ಸರ್ಕಾರ ನಿಗದಿ ಮಾಡಿರುವ ಬೆಲೆ ಜತೆಗೆ ರಾಜ್ಯ ಸರ್ಕಾರವೂ ₹3,000 ಸೇರಿಸಿ ನಾಫೆಡ್ ಕೇಂದ್ರದ ಮೂಲಕ ಖರೀದಿಸಲು ಕ್ರಮ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ಬಿಡದೆ ಹೋರಾಟ ಮಾಡುತ್ತೇವೆ” ಎಂದು ಹೇಳಿದರು.
“ರೈತರು, ಕಾರ್ಮಿಕರು, ಸೈನಿಕರ ಬದುಕು ಉಳಿದರೆ ಮಾತ್ರ ದೇಶದ ಅಭಿವೃದ್ಧಿ. ಹೀಗಿರುವಾಗ ಸರ್ಕಾರಗಳು ರೈತರನ್ನು ಕಡೆಗಣಿಸುತ್ತಲೇ ಬರುತ್ತಿವೆ. ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚು ಮಾಡಬೇಕೆಂದು ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಸರ್ಕಾರಗಳು ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ. ಹಾಗಾಗಿ ಸಮರ್ಪಕ ನಿರ್ಧಾರ ಪ್ರಕಟಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ” ಎಂದರು.
“ವಿದೇಶಗಳಿಂದ ಕೊಬ್ಬರಿ ಎಣ್ಣೆ ಹಾಗೂ ಪೌಡರ್ ಆಮದನ್ನು ಸರ್ಕಾರ ನಿಲ್ಲಿಸದ ಕಾರಣ ಕೊಬ್ಬರಿ ಬೆಲೆ ಕುಸಿಯಲು ಕಾರಣವಾಗಿದೆ. ಸರ್ಕಾರಗಳಿಗೆ ತೆಂಗು ಬೆಳೆಗಾರರ ಹಿತಕಾಯುವ ಕಾಳಜಿಯಿಲ್ಲ. ಅರಸೀಕೆರೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿ ತೆಂಗು ಬೆಳೆಗಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಆದರೆ ತೆಂಗು ಬೆಳೆಗಾರರ ಪರವಾಗಿ ಜಿಲ್ಲೆಯ ಯಾವೊಬ್ಬ ಶಾಸಕರೂ ಅಧಿವೇಶನದಲ್ಲಿ ಧ್ವನಿ ಎತ್ತಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆ ಎಸ್ ಧನಂಜಯಾರಾಧ್ಯ ಮಾತನಾಡಿ, “ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ ಸರ್ಕಾರ ಖರೀದಿ ಮಾಡಿ ತೆಂಗು ಬೆಳೆಗಾರರಿಗೆ ನ್ಯಾಯ ಒದಗಿಸದಿದ್ದರೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಮಡಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಗ್ರಹ
“ಈ ಮೊದಲಿದ್ದ ಕ್ವಿಂಟಾಲ್ ಕೊಬ್ಬರಿಯ ಬೆಲೆ ₹11,750ರ ದರಕ್ಕೆ ₹250 ಸೇರಿಸಿ, ₹12,000ಕ್ಕೆ ಹೆಚ್ಚಿಸಿದ್ದು ತೆಂಗು ಬೆಳೆಗಾರರಿಗೆ ಯಾವುದೇ ಪ್ರಯೋಜನವಾಗಿಲ್ಲ. ಈಗ ಎಲ್ಲ ದಿನಬಳಕೆ ಪದಾರ್ಥಗಳ ಬೆಲೆ ಶೇ.30ರಷ್ಟು ಹೆಚ್ಚಾಗಿದೆ. ಹೀಗಿರುವಾಗ ಅದೇ ಪ್ರಮಾಣದಲ್ಲಿ ಕೊಬ್ಬರಿಗೂ ಶೇ.30ರಷ್ಟು ಬೆಲೆ ಹೆಚ್ಚಿಸಿದರೆ ಕ್ವಿಂಟಾಲ್ಗೆ ₹16,000 ನೀಡಬೇಕಾಗುತ್ತದೆ. ಸಾಲ ಬಾಧೆಯಿಂದ ರೈತರು ಕಷ್ಟಕ್ಕೆ ಸಿಲುಕಿದ್ದಾರೆ. ತೆಂಗು ಬೆಳೆಗಾರರು ಕೊಬ್ಬರಿ ಬೆಲೆ ಕುಸಿತದಿಂದ ನಷ್ಟ ಅನುಭವಿಸುತ್ತಿದ್ದಾರೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ₹12,000ಕ್ಕೆ ರಾಜ್ಯ ಸರ್ಕಾರ ₹3,000 ಸೇರಿಸಿ ತುರ್ತಾಗಿ ನಾಫೆಡ್ ಕೇಂದ್ರ ತೆರೆದು ಖರೀದಿಸಬೇಕು” ಎಂದು ಒತ್ತಾಯಿಸಿದರು.
ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಕೆ ವಿ ಲೋಕೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಿವರತ್ನಮ್ಮ, ಮುಖಂಡರುಗಳಾದ ಸಣ್ಣದ್ಯಾಮೇಗೌಡ, ಮಲ್ಲಿಕಾರ್ಜುನಯ್ಯ, ಸಿದ್ದರಾಜು, ಸರ್ವಮಂಗಳ, ಶಾಂತಕ್ಕ, ದೇವಮ್ಮ, ರೇಣುಕಮ್ಮ, ನಾಗೇಂದ್ರ, ರಾಜಣ್ಣ ಸೇರಿದಂತೆ ಬಹುತೇಕರು ಇದ್ದರು.