ಸುವರ್ಣ ಕರ್ನಾಟಕದ ಸಂಭ್ರಮ ಆಚರಿಸುವ ಈ ಸಂದರ್ಭದಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ಆಚರಿಸುವ ರಾಜ್ಯೋತ್ಸವ ಆಚರಣೆ ವಿಶೇಷವಾಗಿರಲಿ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು.
ತುಮಕೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರೊಂದಿಗೆ ಮಾತನಾಡಿದ ಅವರು, ರಾಜ್ಯೋತ್ಸವ ದಿನ ಧ್ವಜಾರೋಹಣ, ಮೆರವಣಿಗೆ, ನಂತರ ಕರ್ನಾಟಕದ ಏಕೀಕರಣದ ಬಗ್ಗೆ ಕರ್ನಾಟಕದ ವರ್ತಮಾನದ ಸವಾಲುಗಳ ಬಗ್ಗೆ, ತುಮಕೂರು ಜಿಲ್ಲೆಯ ರಂಗಭೂಮಿ, ಸಿನಿಮಾ, ಸಾಹಿತ್ಯ ಕ್ಷೇತ್ರಗಳಲ್ಲಿ ಸಾಧಿಸಿರುವ ಸಾಧನೆಗಳ ಬಗ್ಗೆ ವಿಶೇಷ ವಿಚಾರ ಸಂಕಿರಣ ನಡೆಸಿದರೆ ರಾಜ್ಯೋತ್ಸವ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದರು.

ಬರಗೂರರ ಸಲಹೆ ಸ್ವಾಗತಿಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು, ಜಿಲ್ಲೆಯ ಸಾಧಕರುಗಳ ಭಾವಚಿತ್ರದೊಂದಿಗೆ ಮೆರವಣಿಗೆ ಹಾಗೂ ಸಾಧ್ಯವಾದರೆ ಶಾಲಾ-ಕಾಲೇಜುಗಳಲ್ಲಿ ಸಾಹಿತಿ, ಕಲಾವಿದರ ಸಾಧನೆಗಳ ವಿಶೇಷ ಉಪನ್ಯಾಸ ಮುಂತಾದ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಇಂಗಿತ ವ್ಯಕ್ತಪಡಿಸಿದರು.

ನವೆಂಬರ್ 1 ರಂದು ಮಹಾತ್ಮಗಾಂಧಿ ಕ್ರೀಡಾಂಗಣದ ಕಾರ್ಯಕ್ರಮ ಮುಗಿದ ನಂತರ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ವಿಚಾರ ಸಂಕಿರಣ ಆಯೋಜಿಸಲು ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಇದೇ ಸಂದರ್ಭದಲ್ಲಿ ತಿಳಿಸಿದರು.
ನಂತರ ನಡೆದ ಚರ್ಚೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಾದ ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮನಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಪ್ರಾಧ್ಯಾಪಕ ನಾಗಭೂಷಣ್ ಬಗ್ಗನಡು, ಗೋವಿಂದಯ್ಯ, ಕೆ.ಎಸ್. ಉಮಾಮಹೇಶ್, ಸಣ್ಣಹೊನ್ನಯ್ಯ ಕಂಟಲಗೆರೆ, ಜಿ.ಹೆಚ್. ಮಹದೇವಪ್ಪ, ರಾಣಿ ಚಂದ್ರಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.
