ತುಮಕೂರು ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಕಚೇರಿ ಸಿಬ್ಬಂದಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಶನಿವಾರ ಬೆಳಿಗ್ಗೆ 11ಕ್ಕೆ ಲೋಕಾಯುಕ್ತ ಎಸ್ಪಿ ವಲಿಬಾಷ ನೇತೃತ್ವದಲ್ಲಿ ಬೆಂಗಳೂರು ಮತ್ತು ತುಮಕೂರಿನ ಸುಮಾರು 25ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಇಡೀ ಕಚೇರಿಯನ್ನು ತಮ್ಮ ಹಿಡಿತಕ್ಕೆ ಪಡೆದು ವಿವಿಧ ಶಾಖೆಗಳಲ್ಲಿ ಅಗತ್ಯ ದಾಖಲಾತಿಗಳ ಪರಿಶೀಲನೆ ನಡೆಸಿದರು.
6 ವಾಹನಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆಯ ಕಂದಾಯ ಶಾಖೆ, ಎಂಜಿನಿಯರ್ ಶಾಖೆ, ಆರೋಗ್ಯ ಶಾಖೆ, ಯುಜಿಡಿ ಸೇರಿದಂತೆ ಹಲವು ಶಾಖೆಗಳಿಗೆ ತೆರಳಿ ಅಗತ್ಯ ಕಡತಗಳು, ದಾಖಲಾತಿಗಳ ತಪಾಸಣೆ ನಡೆಸಿದರು.
ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಕೇಳಿ ಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪಾಲಿಕೆಯ ಹಲವು ಶಾಖೆಗಳನ್ನು ಜಾಲಾಡಿದರು.
ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದಾಗ ಕಚೇರಿಯ ಆವರಣದಲ್ಲಿ ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ಅವರ ಕೆಲಸ ಕಾರ್ಯಗಳ ಬಗ್ಗೆ ವಿಚಾರಣೆ ನಡೆಸಿದರು.
ಮಹಾನಗರ ಪಾಲಿಕೆಯ ಹೊಸ ಆಡಳಿತ ಕಚೇರಿ ಸೇರಿದಂತೆ ಇಡೀ ಮಹಾನಗರ ಪಾಲಿಕೆಯ ಕಚೇರಿ ಆವರಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ಸಂಪೂರ್ಣ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ತಮ್ಮ ಕೆಲ ಕಾರ್ಯಗಳಿಗಾಗಿ ಪಾಲಿಕೆ ಕಚೇರಿಗೆ ಬಂದಿದ್ದ ಸಾರ್ವಜನಿಕರು ಹೊರ ಬರಲಾಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ರಾಜ್ಯಾದ್ಯಂತ ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60ರಷ್ಟು ಅವಕಾಶ ನೀಡಬೇಕು: ಕರವೇ ರಾಜ್ಯಾಧ್ಯಕ್ಷ
ಮಹಾನಗರ ಪಾಲಿಕೆಯ ಎಲ್ಲ ಶಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.
ದಾಳಿಯಲ್ಲಿ ಲೋಕಾಯುಕ್ತ ಎಸ್ಪಿ ವಲಿಭಾಷ, ಡಿವೈಎಸ್ಪಿ ಉಮಾಶಂಕರ್, ಇನ್ಸ್ಪೆಕ್ಟರ್ ರಾಮಕೃಷ್ಣ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.