ರಾಜಕೀಯ ವೈಷಮ್ಯದಿಂದಾಗಿ ಇಬ್ಬರ ನಡುವಿನ ಜಗಳ, ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದ್ದು, ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ಬೈಕ್ಗೆ ಬೆಂಕಿ ಹಚ್ಚಲಾಗಿದ್ದು, ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ವ್ಯಕ್ತಿಯೊಬ್ಬರ ಪರಿಸ್ತಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಜೆಡಿಎಸ್ ಮುಖಂಡ ಮುದ್ದಪ್ಪ ಮತ್ತು ಕಾಂಗ್ರೆಸ್ ಮುಖಂಡ ಕೃಷ್ಣಪ್ಪ ನಡುವೆ ಜಗಳ ಆರಂಭವಾಗಿದೆ. ಅವರಿಬ್ಬರ ನಡುವಿನ ಗಲಾಟೆ ತಾರಕಕ್ಕೇರಿದ್ದು, ಎರಡು ಗುಂಪುಗಳ ನಡುವಿನ ಹೊಡೆದಾಟಕ್ಕೆ ಕಾರಣವಾಗಿದೆ.
ಕೃಷ್ಣಪ್ಪ ಸಂಗಡಿಗರು ಮುದ್ದಪ್ಪ ಅವರ ಬೈಕ್ಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸಿಟ್ಟಾದ ಮುದ್ದಪ್ಪ ಮತ್ತು ಬೆಂಬಲಿಗರು ಕೃಷ್ಣಪ್ಪ ಮೇಲೆ ಹಲ್ಲೆ ಮಾಡಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.