ರೈತರ ಪಂಪ್ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಾಗೂ ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ನಕ್ಸಲ್ ಎಂದು ಹೇಳಲಾಗುತ್ತಿರುವ ಉಪ್ಪಾರ ವೆಂಕಟೇಶ್ ಎಂಬಾತನನ್ನು ಜಿಲ್ಲಾ ಪೊಲೀಸ್ ತಂಡ ಬಂಧಿಸಿದೆ.
ತಾಲ್ಲೂಕಿನ ಕಸಬಾ ಹೋಬಳಿ ಕಡಮಲಕುಂಟೆ ಗ್ರಾಮದ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಹಿಂದೆ ತಾಲ್ಲೂಕಿನ ಕನಿಕಲಬಂಡೆ ಗ್ರಾಮದ ರೈತ ಕರಿಯಣ್ಣ ಅವರ ಹೊಲದಲ್ಲಿರುವ ಪಂಪ್ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಲಾಗಿತ್ತು ಎನ್ನಲಾಗಿದೆ. ಅಲ್ಲದೆ, ‘ಸಿಪಿಐ (ಮಾವೋವಾದಿ) ಹಾಗೂ ಸಿಪಿಎಂ ಪೀಪಲ್ಸ್ ವಾರ್ ಜನಶಕ್ತಿ ಪಾರ್ಟಿ ದೇವಣ್ಣ ದಳಂ’ ಹೆಸರಿನಲ್ಲಿ ರೈತನಿಗೆ ಪತ್ರ ಬರೆದು ₹5 ಲಕ್ಷ ನೀಡಬೇಕು. ಇಲ್ಲವಾದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಗಳಿಂದ ಕನಿಕಲಬಂಡೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಆರೋಪಿಯ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದರು.
ಎಎಸ್ಪಿ ಗೋಪಾಲ್ ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ತಂಡ ಭಾನುವಾರದಿಂದ ತೀವ್ರ ಪತ್ತೆ ಕಾರ್ಯಾಚರಣೆ ನಡೆಸುತ್ತಿತ್ತು. ಮಂಗಳವಾರ ರಾತ್ರಿ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಮಧುಗಿರಿ ಡಿವೈಎಸ್ಪಿ ಮಂಜುನಾಥ, ಪಾವಗಡ ವೃತ್ತ ನಿರೀಕ್ಷಕ ಸುರೇಶ್, ಕೊಟ್ರೇಶ್, ಮಧುಗಿರಿ ಸಿಪಿಐ ಹನುಮಂತರಾಯಪ್ಪ, ಸಬ್ ಇನ್ಸ್ಪೆಕ್ಟರ್ ಸುನೀಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಕಡಮಲಕುಂಟೆ ಬೆಟ್ಟದ ತಪ್ಪಲಿನಲ್ಲಿ ಕಾರ್ಯಾಚರಣೆ ನಡೆಸಿ ಉಪ್ಪಾರ ವೆಂಕಟೇಶ್ನನ್ನು ಬಂಧಿಸಿದ್ದಾರೆ.
ಆರೋಪಿಯ ಬಂಧನದಿಂದ ಕನಿಕಲಬಂಡೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ವೆಂಕಟೇಶ್ ತಾನು ನಕ್ಸಲ್ ಸಂಘಟನೆಗೆ ಸೇರಿದವನೆಂದು ಹೇಳಿಕೊಂಡು ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದನೇ ಅಥವಾ ಆತನಿಗೆ ನಿಜವಾಗಿಯೂ ಯಾವುದೇ ನಕ್ಸಲ್ ಸಂಘಟನೆಯೊಂದಿಗೆ ಸಂಪರ್ಕವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆರೋಪಿಯ ವಿಚಾರಣೆ ಹಾಗೂ ತನಿಖೆಯ ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.




