ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು ಆರಂಭಿಸಿಲ್ಲ ಎಂದು ಆರೋಪಿಸಿರುವ ರೈತಸಂಘ, ಗೋಶಾಲೆ, ಮೇವು ಬ್ಯಾಂಕ್, ನೀರಾವರಿ ಯೋಜನೆ, ಕುಡಿಯುವ ನೀರು ಹಾಗೂ ಹೇಮಾವತಿ ನೀರು ಸರಬರಾಜು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2027ರ ಏಪ್ರಿಲ್ವರೆಗೆ ಮಳೆ ಕೊರತೆ ಮುಂದುವರಿಯುವ ಸಾಧ್ಯತೆ ಕುರಿತು ಸರ್ಕಾರಕ್ಕೆ ಮಾಹಿತಿ ಇದ್ದರೂ ಬರಗಾಲ ನಿರ್ವಹಣೆಗೆ ಅಗತ್ಯ ಕಾಮಗಾರಿಗಳನ್ನು ಆರಂಭಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಬರಗಾಲದ ತೀವ್ರತೆ ಹೆಚ್ಚಾಗಿದ್ದು, ಶೇ.85ರಷ್ಟು ಮಳೆ ಕೊರತೆಯಾಗಿದೆ. ಬಿತ್ತನೆಯಾಗಿದ್ದ ಬೆಳೆಗಳ ಪೈಕಿ ಸುಮಾರು ಶೇ.25ರಷ್ಟು ಬೆಳೆ ಒಣಗಿ ಹೋಗಿದೆ. ಬೆಳೆ ನಷ್ಟದಿಂದ ಸಂಕಷ್ಟಕ್ಕೀಡಾಗಿರುವ ರೈತರು ಸಾಲದ ಹೊರೆ ಎದುರಿಸುತ್ತಿದ್ದು, ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಸುಮಾರು ₹40 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಎಂದು ಆರೋಪಿಸಿದ ಅವರು, ರೈತರ ಸುಮಾರು ₹7.50 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರೆ ತಪ್ಪೇನಿಲ್ಲ ಎಂದರು.
This video cannot be played in your browser. Open the video directly
ಗುಬ್ಬಿ ತಾಲ್ಲೂಕಿನಲ್ಲಿ ಸುಮಾರು 320 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದ್ದು, ಪ್ರಸ್ತುತ 120 ಮೆಗಾವ್ಯಾಟ್ ಮಾತ್ರ ಪೂರೈಕೆಯಾಗುತ್ತಿದೆ. ಇದರಿಂದ ರೈತರಿಗೆ ಎರಡು ಗಂಟೆಯೂ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ದೊರೆಯುತ್ತಿಲ್ಲ. ವಿದ್ಯುತ್ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿದರು.
ಎತ್ತಿನಹೊಳೆ ಯೋಜನೆಯ ನೀರನ್ನು ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಗೆ ಒದಗಿಸಬೇಕು. ಬಯಲುಸೀಮೆ ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಡಿ ಶಿರಾ ಹಾಗೂ ಪಾವಗಡ ತಾಲ್ಲೂಕುಗಳಿಗೆ ನೀರು ಒದಗಿಸಬೇಕು ಎಂದು ಒತ್ತಾಯಿಸಿದರು.
ಹೇಮಾವತಿ ಲಿಂಕ್ ಕೆನಾಲ್ ನಿರ್ಮಾಣದಿಂದ ಜಿಲ್ಲೆಯ ಏಳು ತಾಲ್ಲೂಕುಗಳಿಗೆ ಅನ್ಯಾಯವಾಗಲಿದೆ. ಆದ್ದರಿಂದ ಲಿಂಕ್ ಕೆನಾಲ್ ಕಾಮಗಾರಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತಸಂಘದ ಜಿಲ್ಲಾ ಕಾರ್ಯದರ್ಶಿ ಶಂಕರಪ್ಪ, ತಾಲ್ಲೂಕು ಅಧ್ಯಕ್ಷ ಕೆ.ಎನ್. ವೆಂಕಟೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಜಿ. ಲೋಕೇಶ್, ತುರುವೇಕೆರೆ ಅಧ್ಯಕ್ಷ ಶ್ರೀನಿವಾಸ್, ಸಿ.ಟಿ. ಕುಮಾರ್, ಹುಚ್ಚೆಗೌಡ, ಮುದ್ದುಬಸವಯ್ಯ, ಶಿವಕುಮಾರ್, ಮಹದೇವಯ್ಯ, ವೆಂಕಟೇಶ್, ಮಹೇಶ್, ಗುರುಚನ್ನಬಸಪ್ಪ, ಕಾಳೇಗೌಡ, ಸತ್ತಿಗಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





