ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ 4.5 ಟಿಎಂಸಿ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ತುಮಕೂರು ನಗರದ ಟೌನ್ಹಾಲ್ ಮುಂಭಾಗದಲ್ಲಿ ಜಮಾಯಿಸಿದ್ದ ನೂರಾರು ಕರವೇ ಕಾರ್ಯಕರ್ತರು ರಾಜ್ಯ ಸರ್ಕಾರದ ಪರವಾಗಿ ಘೋಷಣೆಗಳನ್ನು ಕೂಗಿ, ಅಶೋಕ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸುವಂತೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ತುಮಕೂರು ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ, ರಾಜ್ಯದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಸುರಿಯದ ಪರಿಣಾಮ ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ರೈತರ ಹಿತಾಸಕ್ತಿ ಹಾಗೂ ಕುಡಿಯುವ ನೀರಿನ ಭದ್ರತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕಿದ್ದು, ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುವ ಆದೇಶವನ್ನು ಸರ್ಕಾರ ವಿರೋಧಿಸಬೇಕು ಎಂದು ಆಗ್ರಹಿಸಿದರು.
ಪ್ರಸ್ತುತ ಕೃಷ್ಣರಾಜಸಾಗರ (ಕೆಆರ್ಎಸ್) ಜಲಾಶಯಕ್ಕೆ ಸುಮಾರು 2,800ರಿಂದ 3,000 ಕ್ಯೂಸೆಕ್ಸ್ ಒಳಹರಿವು ಮಾತ್ರವಿದ್ದು, 1,700ರಿಂದ 1,800 ಕ್ಯೂಸೆಕ್ಸ್ ಹೊರಹರಿವು ಇದೆ. ಜಲಾಶಯದ ನೀರಿನ ಮಟ್ಟವೂ ಗರಿಷ್ಠ ಮಟ್ಟಕ್ಕಿಂತ ಕಡಿಮೆಯಾಗಿದೆ. ಕೆಆರ್ಎಸ್ ನೀರು ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರು, ಕೃಷಿ ಮತ್ತು ಕೈಗಾರಿಕಾ ಅಗತ್ಯಗಳಿಗೆ ಪ್ರಮುಖವಾಗಿದೆ ಎಂದು ಅವರು ಹೇಳಿದರು.
ಕಬಿನಿ ಜಲಾಶಯಕ್ಕೂ 12,000ರಿಂದ 15,000 ಕ್ಯೂಸೆಕ್ಸ್ ಒಳಹರಿವು ಇದ್ದರೂ, 10,000ರಿಂದ 14,000 ಕ್ಯೂಸೆಕ್ಸ್ ಹೊರಹರಿವು ನಡೆಯುತ್ತಿದ್ದು, ಅದರಲ್ಲೂ ಹೆಚ್ಚಿನ ಪ್ರಮಾಣದ ನೀರು ತಮಿಳುನಾಡಿನ ಕಡೆ ಹರಿಯುತ್ತಿದೆ. ಹೀಗಾಗಿ ರಾಜ್ಯದ ಜಲಾಶಯಗಳಲ್ಲಿರುವ ನೀರನ್ನು ಕರ್ನಾಟಕದ ಜನರ ಕುಡಿಯುವ ನೀರು, ರೈತರ ಕೃಷಿ ಹಾಗೂ ಭವಿಷ್ಯದ ಅಗತ್ಯಗಳಿಗೆ ಸಂರಕ್ಷಿಸುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರವು ಕರ್ನಾಟಕದ ಹಿತಾಸಕ್ತಿಯ ಆಧಾರದ ಮೇಲೆ ಪ್ರಬಲವಾಗಿ ವಿರೋಧಿಸಬೇಕು. ಜಲಾಶಯಗಳ ವಾಸ್ತವಿಕ ನೀರಿನ ಸಂಗ್ರಹಣೆ ಹಾಗೂ ಮಳೆಯ ಕೊರತೆ ಕುರಿತು ಸಮಗ್ರ ವರದಿ ಸಲ್ಲಿಸಿ ಕರ್ನಾಟಕದ ಪರವಾಗಿ ದೃಢವಾದ ವಾದ ಮಂಡಿಸಬೇಕು. ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿಗೆ ಧಕ್ಕೆಯಾಗದಂತೆ ತಮಿಳುನಾಡಿಗೆ ಯಾವುದೇ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬಾರದು. ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ ಸೇರಿದಂತೆ ಎಲ್ಲ ಕಾನೂನು ವೇದಿಕೆಗಳಲ್ಲಿ ರಾಜ್ಯದ ಹಕ್ಕುಗಳನ್ನು ಸಮರ್ಥವಾಗಿ ಪ್ರತಿಪಾದಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಒಂದು ವೇಳೆ ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಿದರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಾಗೂ ಪ್ರಜಾಸತ್ತಾತ್ಮಕ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರವೇ ಮುಖಂಡರು ಎಚ್ಚರಿಕೆ ನೀಡಿದರು
ಪ್ರತಿಭಟನೆಯಲ್ಲಿ ಕರವೇ (ನಾರಾಯಣಗೌಡ ಬಣ) ಗೌರವಾಧ್ಯಕ್ಷ ರಂಗಸ್ವಾಮಿ, ಉಪಾಧ್ಯಕ್ಷ ಆದೇಶ್ ಸಿ.ಎನ್., ಮಹಿಳಾ ಪ್ರಧಾನ ಕಾರ್ಯದರ್ಶಿ ರಾಧಾಗೌಡ, ತಿಪಟೂರು ತಾಲೂಕು ಅಧ್ಯಕ್ಷ ಶಶಿಧರ್, ಮಧುಗಿರಿ ಅಧ್ಯಕ್ಷ ಶಿವಕುಮಾರ್, ಶಿರಾ ಅಧ್ಯಕ್ಷ ಕಿಶೋರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಂಬರೀಷ್, ಯುವ ಘಟಕದ ಅಧ್ಯಕ್ಷ ಪವನ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.




