ಉಡುಪಿಯ ಶಾಲೆ, ಆಸ್ಪತ್ರೆ ಮತ್ತಿತರ ಕಡೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ಗಳನ್ನು ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಪೊಲೀಸರು ಚೈನ್ನೈ ಮೂಲದ ಎಂಜಿನಿಯರ್ ಯುವತಿಯನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಉಡುಪಿಯ ಶಾಲೆಗೆ ಬಂದಿದ್ದ ಬಾಂಬ್ ಬೆದರಿಕೆ ಕರೆಗೆ ಸಂಬಂಧಿಸಿ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಉಡುಪಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಜೂನ್ 16ರಂದು ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಹುಸಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಇದರಲ್ಲಿ ‘ನಿಮ್ಮ ಶಾಲೆಯಲ್ಲಿ ಬಾಂಬ್ ಸ್ಪೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ ಮತ್ತು ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆʼ ಎಂದು ಬರೆಯಲಾಗಿತ್ತು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಇಮೇಲ್ ಸಂದೇಶ ಕಳುಹಿಸಿ ಶಾಲೆಗಳು, ಆಸ್ಪತ್ರೆಗಳು ಮತ್ತು ಕ್ರೀಡಾಂಗಣಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಗುಜರಾತಿನ ಅಹಮದಾಬಾದ್ ಪೊಲೀಸರು ಚೆನ್ನೈ ಆರೋಪಿ ಎಂಜಿನಿಯರ್ ಯುವತಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿದ್ದೀರಾ? ಕರ್ನಾಟಕದಲ್ಲೊಂದು ʼಮಿನಿ ಇರಾನ್ʼ- ಖಮೇನಿ ಜೊತೆ ಅಲಿಪುರಕ್ಕಿರುವ ನಂಟೇನು?
“ಉಡುಪಿ ಶಾಲೆಯ ಬಾಂಬ್ ಬೆದರಿಕೆ ಪ್ರಕರಣದ ಆರೋಪಿಯ ಹೆಚ್ಚಿನ ತನಿಖೆಗಾಗಿ ನಮ್ಮ ಕಸ್ಟಡಿಗೆ ನೀಡುವಂತೆ ಅಹಮದಾಬಾದ್ ಪೊಲೀಸರಿಗೆ ಪತ್ರ ಬರೆಯಲಾಗುವುದು. ಅವರ ತನಿಖೆ ಮುಗಿದ ಬಳಿಕ ಆರೋಪಿಯನ್ನು ನಮ್ಮ ವಶಕ್ಕೆ ನೀಡುವ ಸಾಧ್ಯತೆ ಇದೆ. ಅದರಂತೆ ಉಡುಪಿಯ ಪ್ರಕರಣದ ತನಿಖೆಯನ್ನು ನಡೆಸಲಾಗುವುದು” ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.