ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕಾನೂನುಗಳನ್ನು ಜಾರಿಗೆ ತರುವುದರ ಜತೆಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಹೇಳಿದರು.
ಉಡುಪಿ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರ್ಗಳ ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ ಹಾಗೂ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಸಂಯುಕ್ತಾಶ್ರಯದಲ್ಲಿ ಕಾರ್ಮಿಕ ಇಲಾಖೆಯಿಂದ ಹಾಗೂ ಇತರೆ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
“ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಕಾರ್ಮಿಕ ಕಾಯಿದೆಗಳು ಬಲಿಷ್ಠವಾಗಿದ್ದು, ಇವುಗಳ ಬಗ್ಗೆ ಉದ್ಯೋಗದಾತರಿಗೆ ಕಾನೂನಿನ ಅರಿವು ಮೂಡಿಸಿ ಆ ಮೂಲಕ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳನ್ನು ಸರಿಯಾಗಿ ತಲುಪಿಸಬೇಕು. ಮಾನವೀಯ ನೆಲೆಯೊಂದಿಗೆ ಕಾನೂನಿನ ಅಡಿಯಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುವ ಬಗ್ಗೆ ತಿಳುವಳಿಕೆ ಮೂಡಿಸಿದಾಗ ಕಾಯಿದೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತವೆ” ಎಂದರು.
“ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಅವರ ಪರ ಕಾರ್ಮಿಕ ಕಾನೂನುಗಳಿವೆ. ಅವುಗಳನ್ನು ಅರ್ಥೈಸಿಕೊಂಡು ಉದ್ಯೋಗದಾತರು ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ಕಾರ್ಮಿಕರ ದುಡಿಮೆಗೆ ಅನುಗುಣವಾಗಿ ಕನಿಷ್ಠ ವೇತನ ಕಾಯಿದೆ ಅನ್ವಯ ಸಂಬಳ, ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಇಎಸ್ಐ, ಪಿಎಫ್, ಹೆಚ್ಚುವರಿ ಕೆಲಸ ಮಾಡಿಸಿಕೊಂಡಲ್ಲಿ ಹೆಚ್ಚುವರಿ ಪೇಮೆಂಟ್ ನೀಡಬೇಕು. ಕಾರ್ಮಿಕರು ಸುರಕ್ಷತೆಯಿಂದ ಕೆಲಸ ಮಾಡಲು ಸುರಕ್ಷಿತ ವಾತಾವರಣವನ್ನು ಕಲ್ಪಿಸಬೇಕು” ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರ ಸುರಕ್ಷತೆಗೆ ಅನುಗುಣವಾಗಿ ಕಾನೂನುಗಳನ್ನು ರೂಪಿಸಿವೆ. ಸರ್ಕಾರದಿಂದ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ಹಲವು ಸವಲತ್ತುಗಳಿವೆ. ಈ ಬಗ್ಗೆ ಹಲವರಿಗೆ ಅರಿವೇ ಇರುವುದಿಲ್ಲ. ಉದ್ಯೋಗದಾತರು ಹಾಗೂ ಸಂಬಂಧಪಟ್ಟ ಇಲಾಖೆಗಳು ಇವುಗಳನ್ನು ತಲುಪಿಸುವಲ್ಲಿ ಕಾರ್ಯಪ್ರವೃತ್ತರಾಗುವುದರೊಂದಿಗೆ, ಉದ್ಯೋಗದಾತರು ಸ್ವ-ಜವಾಬ್ದಾರಿಗಳನ್ನು ಅರಿತು ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳಬೇಕು” ಎಂದರು.
ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಪ್ ಅಹಮದ್ ಪ್ರಾಸ್ತಾವಿಕವಾಗಿ ಮಾತನಾಡಿ, “ಕಾರ್ಮಿಕರ ಕಲ್ಯಾಣವನ್ನು ಆದ್ಯತೆಯನ್ನಾಗಿಸಿಕೊಂಡು ಸರ್ಕಾರ ಹಾಗೂ ಇಲಾಖೆಯು ಕಾರ್ಮಿಕರು ಸಬಲರಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ಕಾರ್ಮಿಕರ ಹಿತಕಾಯುವಲ್ಲಿ ಹಾಗೂ ಜನಪರ ಯೋಜನೆಗಳನ್ನು ಸಕಾಲದಲ್ಲಿ ಕಾರ್ಮಿಕರುಗಳಿಗೆ ತಲುಪಿಸಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೂಮಿ ಪೂಜೆ
ಕಾರ್ಯಾಗಾರದಲ್ಲಿ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ, ಕಾರ್ಮಿಕ ಭವಿಷ್ಯ ನಿಧಿ ಸಂಘಟನೆಯ ಜಿಲ್ಲಾ ಪ್ರಾದೇಶಿಕ ಆಯುಕ್ತ ಸಂದೀಪ್ ಕುಮಾರ್, ಕಾರ್ಖಾನೆಗಳು, ಬಾಯ್ಲರುಗಳ ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಸಹಾಯಕ ನಿರ್ದೇಶಕ ಪ್ರತಾಪ್ ಹೆಚ್ ಎ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ಮತ್ತು ವೈದ್ಯಕೀಯ ಸೇವೆಯ ಆಡಳಿತ ವಿಮಾ ವೈದ್ಯಾಧಿಕಾರಿ ಡಾ. ಹೇಮಂತ್ ಕುಮಾರ್, ಮಂಗಳೂರು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಬಿ ಆರ್ ಕುಮಾರ್, ಕಾರ್ಮಿಕ ನಿರೀಕ್ಷಕರುಗಳು, ಗುತ್ತಿಗೆದಾರರು, ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.