ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯದಲ್ಲಿ ಬೀದರ್ನಿಂದ ಚಾಮರಾಜನಗರದವರೆಗೆ 2250 ಕಿಮೀ ಮಾನವ ಸರಪಳಿಯನ್ನು ಆಯೋಜಿಸಿದ್ದು, ಇದರ ಭಾಗವಾಗಿ ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ಗೇನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆವರೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಮಾರು 107 ಕಿಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಮಟ್ಟದಲ್ಲಿ ನಡೆದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಂಡೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, “ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ವಿನೂತನವಾದ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಪ್ರಜಾಪ್ರಭುತ್ವವು ಇನ್ನಷ್ಟು ಗಟ್ಟಿಗೊಂಡು ಪ್ರತಿಯೊಬ್ಬರ ಬದುಕಿನ ಭಧ್ರಬುನಾದಿಯಾಗಲಿ” ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಮಾತನಾಡಿ, “ನಮ್ಮ ಜವಾಬ್ದಾರಿಗಳ ಅರ್ಥೈಸಿಕೊಂಡಾಗ ಮಾತ್ರ ನಮ್ಮ ಹಕ್ಕುಗಳಿಗೆ ಅರ್ಥ ಬರುತ್ತದೆ. ನಾಗರಿಕನ ಜವಾಬ್ದಾರಿಯುತ ನಡವಳಿಕೆಯಿಂದ ದೇಶದ ಶಾಂತಿ ಸುವ್ಯವಸ್ಥೆ ಚೆನ್ನಾಗಿರುತ್ತದೆ. ಸಂವಿಧಾನದ ಆಶಯಗಳನ್ನು ನಮ್ಮ ನಡವಳಿಕೆಯಲ್ಲಿ ತೋರಿಸಬೇಕು. ಸಂವಿಧಾನದ ವಿಚಾರಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರ ಬಲಿದಾನಗಳಿಗೆ ಅರ್ಥ ನೀಡಬೇಕು” ಎಂದರು.
“ಪ್ರತಿ ಪ್ರಜೆಯನ್ನು ಸಂವಿಧಾನದ ಪ್ರಭುವೆಂದು ಒಪ್ಪಿಕೊಂಡಿದೆ. ಸಂವಿಧಾನವನ್ನು ನಿರ್ವಹಿಸುವ ಜನರು ಎಷ್ಟು ಉತ್ತಮವಾಗಿರುತ್ತಾರೋ ಸಂವಿಧಾನವು ಅಷ್ಟೇ ಉತ್ತಮವಾಗಿರುತ್ತದೆ” ಎಂದರು.
ಈ ಸುದ್ದಿ ಓದಿದ್ದೀರಾ? ಬೀದರ್ | ‘ಬಸವೇಶ್ವರ ದರ್ಶನ’ ಮಹಾನಾಟಕ ನಿರ್ಮಾಣಕ್ಕೆ ನಿರ್ಣಯ
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಡಿಎಫ್ಒ ಗಣಪತಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಜಿ ಎಸ್ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರೋಟರಿಯ ಗವರ್ನರ್ ದೇವಾನಂದ್, ಸಹಕಾರಿ ಸಂಘದ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಸ್ವಾತಂತ್ರ ಹೋರಾಟಗಾರ ಮಲ್ಪೆ ರಾಘವೇಂದ್ರ, ರೋಟರಿ ಕ್ಲಬ್ನ ಸದಸ್ಯರು, ಸಂಘ-ಸಂಸ್ಥೆಯ ಪದಾಧಿಕಾರಿಗಳು, ಯುವಕ-ಯುವತಿ ಮಂಡಳಿಗಳು, ಸ್ವ-ಸಹಾಯ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಇದ್ದರು.