ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಉಡುಪಿಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಮುನ್ನಡೆ ದೊರಕಿದೆ.
ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳುವಲ್ಲಿ ಉಡುಪಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.
ನ.15ರಂದು ಬೆಳಗಾವಿಯ ಕುಡಚಿಯಲ್ಲಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬಂಧಿಸಿ, ನ.16ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ನ.28ರವರೆಗೆ ಅಂದರೆ 14 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿತ್ತು. ಹೀಗಾಗಿ, ಪ್ರಕರಣದ ಬಗ್ಗೆ ಆರೋಪಿಯ ಅಪರಾಧವನ್ನು ಸಾಬೀತುಪಡಿಸಲು ತನಿಖಾಧಿಕಾರಿಗಳ ತಂಡ ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಉಡುಪಿ ಪೊಲೀಸರು, ಕೃತ್ಯಕ್ಕೆ ಬಳಸಿದ ಆಯುಧಕ್ಕಾಗಿ ಶೋಧ ಕಾರ್ಯ ನಡೆಸಿದ್ದರು.
ವಿಚಾರಣೆಯ ವೇಳೆ ಪ್ರವೀಣ್ ಸಮರ್ಪಕ ಮಾಹಿತಿ ನೀಡದೆ, ಪೊಲೀಸರನ್ನೇ ಸತಾಯಿಸುತ್ತಿದ್ದ. ಈ ಮೊದಲು ಕೃತ್ಯಕ್ಕೆ ಎಸಗಿ ಉಡುಪಿಯಿಂದ ಮಂಗಳೂರಿಗೆ ಹೋಗುವಾಗ ದಾರಿ ಮಧ್ಯೆ ಸೇತುವೆಯಿಂದ ನದಿಗೆ ಚೂರಿಯನ್ನು ಎಸೆದಿದ್ದೆ ಎಂದು ಹೇಳಿದ್ದ. ಆ ಬಳಿಕ ಅದನ್ನು ತನ್ನ ಮಂಗಳೂರಿನ ಮನೆಯ ಬಳಿ ವಿಲೇವಾರಿ ಮಾಡಿದ್ದೆ ಎಂದೆಲ್ಲ ಸಬೂಬು ಹೇಳಿ, ದಾರಿ ತಪ್ಪಿಸಲು ಯತ್ನಿಸಿದ್ದನು.
ಈಗ ಕೊನೆಗೂ ಪೊಲೀಸರು ಯಶಸ್ವಿಯಾಗಿರುವ ಪೊಲೀಸರು, ಮಂಗಳೂರಿನಲ್ಲಿರುವ ಮನೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಆಯುಧಕ್ಕಾಗಿ ತೀವ್ರ ಶೋಧ ನಡೆಸಿದಾಗ, ಆತನ ಬಿಜೈ ಎಂಬ ಪ್ರದೇಶದಲ್ಲಿರುವ ಫ್ಲ್ಯಾಟ್ನಲ್ಲಿ ಕೃತ್ಯಕ್ಕೆ ಬಳಸಿದ್ದ ಚೂರಿ ಪತ್ತೆಯಾಗಿದೆ. ಅದಲ್ಲದೆ ಕೃತ್ಯದ ವೇಳೆ ಗುರುತು ಸಿಗದಂತೆ ಬಳಸಿದ್ದ ಬಿಳಿ ಬಣ್ಣದ ಮಾಸ್ಕ್, ರಕ್ತಸಿಕ್ಕ ಬಟ್ಟೆ, ಕೃತ್ಯಕ್ಕೆ ಬಳಸಿದ ಕಾರು ಸೇರಿದಂತೆ ಎಲ್ಲ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಮುನ್ನಡೆ ದೊರಕಿದಂತಾಗಿದೆ.
‘ಕಳೆದ ನ.12ರಂದು ನಡೆದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯಿಂದ ಕೃತ್ಯಕ್ಕೆ ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಉಡುಪಿ ಪ್ರಕರಣ | ’15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ’ ಎಂದು ವಿಕೃತಿ ಮೆರೆದವನ ಮೇಲೆ ಎಫ್ಐಆರ್
‘ಪ್ರಕರಣದ ತನಿಖೆ ಮುಂದುವರೆದಿದೆ. ಶುಕ್ರವಾರ ಮತ್ತು ಶನಿವಾರ ಆತನ ಮನೆಯಿಂದ ಕೃತ್ಯಕ್ಕೆ ಬಳಸಿದ ಚೂರಿ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಮಾಹಿತಿಯನ್ನು ತನಿಖೆ ಸಂಪೂರ್ಣಗೊಂಡ ಬಳಿಕ ನೀಡಲಾಗುವುದು’ ಎಂದು ಉಡುಪಿ ಎಸ್ಪಿ ತಿಳಿಸಿದ್ದಾರೆ.