ಉಡುಪಿ ಜಿಲ್ಲೆಯ ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್(42) ಅಲಿಯಾಸ್ ಬನ್ಸ್ ರಾಘು ಎನ್ನುವರರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಶುಕ್ರವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಶಿವಮೊಗ್ಗ ಮೂಲದ ಶಫಿವುಲ್ಲಾ(40) ಮತ್ತು ಇಮ್ರಾನ್(43) ಬಂಧಿತ ಆರೋಪಿಗಳು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು 2ನೇ ಹೆಚ್ಚುವರಿ ಸಿವಿಲ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಕುಂದಾಪುರ ಠಾಣೆ ನಿರೀಕ್ಷಕ ನಂದಕುಮಾರ್, ಅಪರಾಧ ವಿಭಾಗದ ಪಿಎಸ್ಐ ಪ್ರಸಾದ್, ಪಿಎಸ್ಐ ವಿನಯ್ ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಮೊದಲಿಗೆ ಕುಂದಾಪುರ ಸಾರ್ವಕನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಘಟನೆ ಹಿನ್ನೆಲೆ
ಕುಂದಾಪುರ ನಗರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪದ ಡೆಲ್ಲಿ ಬಜಾರ್ ಬಳಿ ಭಾನುವಾರ ಸಂಜೆ ಮಾರಕಾಸ್ತ್ರದಿಂದ ಇರಿದು ರಾಘವೇಂದ್ರ ಶೇರುಗಾರ್ ಎಂಬುವವರನ್ನು ಹತ್ಯೆ ಮಾಡಿದ್ದರು. ಕೃತ್ಯ ನಡೆದ ಕೂಡಲೇ ಪೊಲೀಸ್ ಇಲಾಖೆ ಆರೋಪಿಗಳ ಬಂಧನಕ್ಕೆ ಕಾರ್ಯಪ್ರವೃತ್ತರಾಗಿದ್ದು, ತದನಂತರ ಉಡುಪಿ ಎಸ್ಪಿ ಡಾ. ಅರುಣ್ ಕೆ. ಅವರು ಮೂರು ವಿಶೇಷ ತನಿಖಾ ತಂಡ ರಚಿಸಿದ್ದರು.
ಈ ಸುದ್ದಿ ಓದಿದ್ದೀರಾ? ಹಾಸನ | ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ
ಪೊಲೀಸರ ತಂಡಗಳು ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದರು. ಬಳಿಕ ಸಿಸಿ ಟಿವಿ ದೃಶ್ಯಾವಳಿ ಸಹಿತ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದು, ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆಹಾಕಿ ಆರೋಪಿಗಳ ಪತ್ತೆಗೆ ಶಿವಮೊಗ್ಗ, ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ತನಿಖಾ ತಂಡ ತೆರಳಿತ್ತು.