ಕೇಂದ್ರ ಸರ್ಕಾರ ನಾಲ್ಕು ಲೇಬರ್ ಕೋಡ್ ಕುರಿತು ಅಧಿಸೂಚನೆ ಬಿಡುಗಡೆಗೊಳಿಸಿರುವುದನ್ನು ವಿರೋಧಿಸಿ ಸಿಐಟಿಯು ಉಡುಪಿ ವಲಯ ಸಮಿತಿಯ ನೇತೃತ್ವದಲ್ಲಿ ಬುಧವಾರ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿ ಅಧಿಸೂಚನೆ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು.
ಸಭೆಯನ್ನುದ್ದೇಶಿಸಿ ಸಿಐಟಿಯು ಉಡುಪಿ ಜಿಲ್ಲಾಧ್ಯಕ್ಷ ಶಶಿಧರ್ ಗೊಲ್ಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಹಾಗೂ ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಳೂರು ಮಾತನಾಡಿ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ಸುಭಾಷ್ ನಾಯಕ್, ಮುಖಂಡರಾದ ಸೈಯದ್, ಮುರಳಿ, ಜನರಲ್ ವರ್ಕರ್ಸ್ ಯೂನಿಯನ್ ಕಾರ್ಯದರ್ಶಿ ರಮೇಶ್, ಬೀಡಿ ಅಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್, ಕಾರ್ಯದರ್ಶಿ ಉಮೇಶ್ ಕುಂದರ್, ಜನವಾದಿ ಮಹಿಳಾ ಸಂಘದ ಉಡುಪಿ ಜಿಲ್ಲಾಧ್ಯಕ್ಷೆ ಸರೋಜ ಎಸ್., ಮುಖಂಡರಾದ ಶಾರದ ಹಾಗೂ ಸಿಐಟಿಯು ಮುಖಂಡರಾದ ನಾಗೇಶ್, ವಿಶ್ವನಾಥ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್ ಎಸ್. ಕಾಂಚನ್ ನಿರೂಪಿಸಿ ವಂದಿಸಿದರು.






