ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದದ ವತಿಯಿಂದ ಉಡುಪಿ ಜಿಲ್ಲೆಯ ವಿವಿಧ ಕುಂದುಕೊರತೆಗಳು ಹಾಗೂ ದಲಿತ ಸಮುದಾಯಕ್ಕೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಯಿತು.
ಜಿಲ್ಲೆಯಲ್ಲಿರುವ ಡಿ.ಸಿ. ಮನ್ನಾ ಭೂಮಿಯನ್ನು ನಿವೇಶನ ರಹಿತರಿಗೆ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು. ದಲಿತರಿಗೆ ಸೇರಿದ ಕನಿಷ್ಠ 25 ಸೆಂಟ್ಸ್ ಪಿಟಿಸಿಎಲ್ ಭೂಮಿಯನ್ನು ವಾಣಿಜ್ಯ ಪರಿವರ್ತನೆಗೆ ಅವಕಾಶ ಕಲ್ಪಿಸಬೇಕು ಎಂದು ವಿನಂತಿಸಲಾಯಿತು.
ಉಡುಪಿ ಜಿಲ್ಲೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹15 ಕೋಟಿ ಅನುದಾನ ನೀಡಬೇಕು ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಪ್ರತಿವರ್ಷ ಕನಿಷ್ಠ ₹50 ಕೋಟಿ ಅನುದಾನ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಅಲ್ಲದೆ, ಉಡುಪಿ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಂದರ್ಭದಲ್ಲಿ ಮೀಸಲಾತಿ ನಿಯಮಗಳನ್ನು ಅನ್ವಯಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು.
ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಹಾಗೂ ಕಾರ್ಕಳ ತಾಲೂಕು ಸಂಚಾಲಕ ರಾಘವ ಕುಕುಜೆ ಉಪಸ್ಥಿತರಿದ್ದರು.






