ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಾದ್ಯಂತ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಕೆಲವೆಡೆ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ. ರೇಂಜಾಳ ಗ್ರಾಮದ ಹೆಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಅವರ ಮನೆಯ ಸಮೀಪ ಭೂಕುಸಿತ ಸಂಭವಿಸಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹಾಗೂ ತಹಶೀಲ್ದಾರ್ ಪ್ರದೀಪ್ ಆರ್ ಅವರು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೂಕುಸಿತದಿಂದ ಮತ್ತಷ್ಟು ಅಪಾಯ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಸಂತ್ರಸ್ತ ಕುಟುಂಬವನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕವಾಗಿ ವಾಸಿಸಲು ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ, ಭೂಕುಸಿತದ ಕಾರಣ ಹಾಗೂ ಮುಂದಿನ ಅಪಾಯದ ಸಾಧ್ಯತೆಗಳ ಕುರಿತು ಅಧ್ಯಯನ ನಡೆಸಲು ಬುಧವಾರ ಭೂ ವಿಜ್ಞಾನಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ತಿಳಿದುಬಂದಿದೆ. ಜಿಲ್ಲಾಡಳಿತ ಸಾರ್ವಜನಿಕರು ಮಳೆಗಾಲದಲ್ಲಿ ಗುಡ್ಡ ಪ್ರದೇಶಗಳು ಹಾಗೂ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಿದೆ.






