ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮೀನುಗಾರರ ಮೀನುಗಾರಿಕಾ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ಮಲ್ಪೆ ಮೀನುಗಾರರ ಸಂಘಕ್ಕೆ ಭೇಟಿ ನೀಡಿ ಸಂಘದ ಪದಾಧಿಕಾರಿಗಳೊಂದಿಗೆ ಮೀನುಗಾರರ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಚರ್ಚಿಸಿ ಅವರು ಮಾತನಾಡಿದರು.
ಮಲ್ಪೆ ಮೀನುಗಾರಿಕಾ ಬಂದರು ಏಷ್ಯಾದಲ್ಲೇ ಪ್ರಮುಖ ಮೀನುಗಾರಿಕಾ ಕೇಂದ್ರವಾಗಿದ್ದು, ಇದರ ಆಧುನೀಕರಣಕ್ಕೆ ಆದ್ಯತೆ ನೀಡಲಾಗುವುದು. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಮೀನುಗಾರಿಕಾ ಉದ್ಯಮದ ಅಭಿವೃದ್ಧಿಗೆ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಸಚಿವರು ತಿಳಿಸಿದರು.
ಕರಾವಳಿ ಭಾಗದ ಅಭಿವೃದ್ಧಿಗೆ ಮುಖ್ಯಮಂತ್ರಿ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದರು.
ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಿಂದ ಮೀನುಗಾರಿಕೆ ಚಟುವಟಿಕೆಗಳಿಗೆ ತೊಂದರೆಯಾಗಬಹುದು ಎಂಬ ಮೀನುಗಾರರ ಆತಂಕವನ್ನು ಗಮನದಲ್ಲಿಟ್ಟುಕೊಂಡು, ಅವರ ಹಿತಾಸಕ್ತಿಗೆ ಧಕ್ಕೆಯಾಗದ ರೀತಿಯಲ್ಲಿ ಅಗತ್ಯ ಮಾನದಂಡಗಳನ್ನು ರೂಪಿಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಮತ್ಸ್ಯಾಶ್ರಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ನೀಡಲಾಗುತ್ತಿರುವ ₹1.20 ಲಕ್ಷ ಸಹಾಯಧನ ಸಾಕಾಗುತ್ತಿಲ್ಲ ಎಂಬ ಮೀನುಗಾರರ ಬೇಡಿಕೆಯನ್ನು ಪರಿಗಣಿಸಲಾಗುವುದು. ಅನುದಾನ ಹೆಚ್ಚಿಸುವುದು ಹಾಗೂ ಡೀಸೆಲ್ ಸಹಾಯಧನದ ಪ್ರಮಾಣವನ್ನು 300ರಿಂದ 500 ಲೀಟರ್ಗೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಉತ್ತರ ಕರ್ನಾಟಕದ ರೈತರಿಗೆ ನೀಡಲಾಗುತ್ತಿರುವ ಸಹಾಯಧನ, ಪರಿಹಾರ ನಿಧಿ, ಬೆಂಬಲ ಬೆಲೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕರಾವಳಿ ಮೀನುಗಾರರಿಗೂ ಒದಗಿಸಬೇಕು ಎಂಬ ಮೀನುಗಾರರ ಸಂಘದ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮೀನುಗಾರರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಿ ಮೀನುಗಾರಿಕಾ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದರು.

ಮೀನುಗಾರರಿಗೆ ಸಮಾನ ಸೌಲಭ್ಯ ಕಲ್ಪಿಸಲು ಆಗ್ರಹ
ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ, ಕರಾವಳಿ ಭಾಗದ ಮೀನುಗಾರರು ಜೀವದ ಹಂಗು ತೊರೆದು ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ 330 ಕಿ.ಮೀ. ಕರಾವಳಿ ಪ್ರದೇಶದ ಮೀನುಗಾರರ ಧ್ವನಿಯಾಗಿ ಮಲ್ಪೆ ಮೀನುಗಾರರ ಸಂಘ ಕಾರ್ಯನಿರ್ವಹಿಸುತ್ತಿದೆ ಎಂದರು.
ಮೀನುಗಾರಿಕೆ ಕರಾವಳಿ ಭಾಗದ ಆರ್ಥಿಕತೆ ಹಾಗೂ ಜಿಡಿಪಿ ಹೆಚ್ಚಳಕ್ಕೆ ಮಹತ್ವದ ಕೊಡುಗೆ ನೀಡುತ್ತಿದೆ. ಕರಾವಳಿಗೆ ಸೂಕ್ತ ಯೋಜನೆಗಳನ್ನು ರೂಪಿಸಿ ಹೆಚ್ಚಿನ ಅನುದಾನ ಒದಗಿಸಿದರೆ ಮೀನುಗಾರಿಕಾ ಚಟುವಟಿಕೆಗಳು ಮತ್ತಷ್ಟು ಅಭಿವೃದ್ಧಿಯಾಗಲಿವೆ ಎಂದು ಹೇಳಿದರು.
ಕರಾವಳಿಯ ಮೀನುಗಾರರು ಸಿಆರ್ಝಡ್ ಸಮಸ್ಯೆಯಿಂದಾಗಿ ವಿವಿಧ ಆರ್ಥಿಕ ಸಹಾಯಧನ ಹಾಗೂ ಸೌಲಭ್ಯಗಳನ್ನು ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ. ಕೃಷಿಗೆ ನೀಡುವ ಸೌಲಭ್ಯಗಳನ್ನು ಮೀನುಗಾರಿಕಾ ಕ್ಷೇತ್ರಕ್ಕೂ ಸಮಾನವಾಗಿ ಒದಗಿಸಬೇಕು ಎಂದು ಆಗ್ರಹಿಸಿದರು.
ತುರ್ತು ಸಂದರ್ಭಗಳಲ್ಲಿ ಮೀನುಗಾರರ ಜೀವ ರಕ್ಷಣೆ ಹಾಗೂ ಆರೋಗ್ಯ ಸೇವೆಗೆ ಮಲ್ಪೆ ಭಾಗದಲ್ಲಿ ಸೀ-ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಈಗಿರುವ ಫಿಶರೀಸ್ ಶಾಲೆಗಳನ್ನು ಮೇಲ್ದರ್ಜೆಗೇರಿಸಿ ಹೊಸ ರೂಪ ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳು ಬಂದರು ಅಭಿವೃದ್ಧಿ ಹಾಗೂ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡ ಪ್ರಸಾದ್ ರಾಜ್ ಕಾಂಚನ್, ಮೀನುಗಾರರ ಸಂಘದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.






