ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕ ಗಳಿಸುವುದನ್ನಷ್ಟೇ ಗುರಿಯಾಗಿಸಿಕೊಳ್ಳದೆ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಆಡಳಿತ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಬೀದರ್ ಜಿಲ್ಲೆಯ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ. ಅಬ್ದುಲ್ ಖಾದರ್ ಹೇಳಿದರು.
ಅವರು ಇಂದು ನಗರದ ಮಣಿಪಾಲ್ ಇನ್ ಹೋಟೆಲ್ ರಂಜಿತಾ ಪ್ಯಾಲೇಸ್ನಲ್ಲಿ ನಮ್ಮ ನಾಡ ಒಕ್ಕೂಟ (ರಿ.), ಉಡುಪಿ ಜಿಲ್ಲಾ ಘಟಕ ಆಯೋಜಿಸಿದ್ದ ‘ವೃತ್ತಿ ಮಾರ್ಗದರ್ಶನ ಹಾಗೂ ಸಾಧಕರ ಸನ್ಮಾನ ಸಮಾರಂಭ–2026’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ; ಅದು ಉತ್ತಮ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ಸಮಾಜ ಮತ್ತು ದೇಶದ ಪ್ರಗತಿಗೆ ಕಾರಣವಾಗುವ ಶಕ್ತಿಯಾಗಿದೆ. ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಬೇಕು. ಜೀವನದಲ್ಲಿ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೂ ಅದರಲ್ಲಿ ಶ್ರೇಷ್ಠ ಸಾಧನೆ ಮಾಡಿ ರಾಷ್ಟ್ರಕ್ಕೆ ಉಪಯೋಗವಾಗುವ ವ್ಯಕ್ತಿಗಳಾಗಬೇಕು ಎಂದು ಅವರು ಕರೆ ನೀಡಿದರು.

ಶೂನ್ಯದಿಂದ ಆರಂಭವಾದ ಶಾಹೀನ್ ಶಿಕ್ಷಣ ಸಂಸ್ಥೆ ಇಂದು 40 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಂಸ್ಥೆಯಾಗಿ ಬೆಳೆದಿದೆ. ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ ಸೇರಿದಂತೆ ವಿವಿಧ ಸಮುದಾಯಗಳ ವಿದ್ಯಾರ್ಥಿಗಳು ಯಾವುದೇ ಭೇದಭಾವವಿಲ್ಲದೆ ಒಂದೇ ಕುಟುಂಬದ ಸದಸ್ಯರಂತೆ ಶಿಕ್ಷಣ ಪಡೆಯುತ್ತಿರುವುದು ಭಾರತದ ಐಕ್ಯತೆಯ ಪ್ರತೀಕವಾಗಿದೆ ಎಂದು ಹೇಳಿದರು.
ಶಿಕ್ಷಣದ ಜೊತೆಗೆ ಕೌಶಲಾಭಿವೃದ್ಧಿ, ನಾಯಕತ್ವ ಗುಣ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ. ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶದ ಶಕ್ತಿಯಾಗಿರುವುದರಿಂದ ಪ್ರತಿಯೊಬ್ಬರೂ ಸಮಾಜಕ್ಕೆ ಹಾಗೂ ರಾಷ್ಟ್ರಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ವಿದ್ಯಾರ್ಥಿಗಳಿಗೆ ಸರಿಯಾದ ಸಮಯದಲ್ಲಿ ವೃತ್ತಿ ಮಾರ್ಗದರ್ಶನ ದೊರೆತರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು.
10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಬೇಕು ಎಂಬ ಗೊಂದಲ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಅಂತಹ ಗೊಂದಲ ನಿವಾರಣೆಗೆ ನಮ್ಮ ನಾಡ ಒಕ್ಕೂಟ ಹಮ್ಮಿಕೊಂಡಿರುವ ಈ ರೀತಿಯ ಕೆರಿಯರ್ ಗೈಡೆನ್ಸ್ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗಿವೆ ಎಂದು ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 600ಕ್ಕೂ ಹೆಚ್ಚು ಯುವಕ ಸಂಘಗಳು, ಧಾರ್ಮಿಕ ಕೇಂದ್ರಗಳು ಹಾಗೂ ಸಾಮಾಜಿಕ ಸಂಘಟನೆಗಳು ವರ್ಷಕ್ಕೊಮ್ಮೆ ಇಂತಹ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಿದರೆ ನಿರುದ್ಯೋಗ ಸಮಸ್ಯೆಯನ್ನು ಸಾಕಷ್ಟು ಮಟ್ಟಿಗೆ ತಗ್ಗಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಗಮನ ಸೆಳೆದ ಜಿಲ್ಲೆಯಾಗಿದೆ. ಕರಾವಳಿಯ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ದೊರೆತರೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ದಾರುಲ್ ಹುದಾ ಚಾರಿಟೇಬಲ್ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಡಾ. ನಕ್ವಾ ಪರ್ವೇಜ್ ಅಹ್ಮದ್ ಮದನಿ ಮಾತನಾಡಿ, ಜೀವನದಲ್ಲಿ ಯಶಸ್ಸು ಸಾಧಿಸಲು ಗುರಿ, ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸ ಅತ್ಯಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಸಾಮರ್ಥ್ಯವನ್ನು ಗುರುತಿಸಿಕೊಂಡು ನಿರಂತರ ಪ್ರಯತ್ನದ ಮೂಲಕ ಯಶಸ್ಸಿನ ಮೆಟ್ಟಿಲು ಏರಬೇಕು ಎಂದು ಪ್ರೇರಣಾದಾಯಕ ಸಂದೇಶ ನೀಡಿದರು.
ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಪ್ರಮುಖ ಅಡಿಪಾಯವಾಗಿದ್ದು, ಉನ್ನತ ಶಿಕ್ಷಣದ ಮೂಲಕ ಸಮಾಜ ಮತ್ತು ದೇಶಕ್ಕೆ ಸೇವೆ ಸಲ್ಲಿಸುವ ಯುವಜನತೆ ರೂಪುಗೊಳ್ಳಬೇಕು ಎಂದು ಆಶಿಸಿದರು.
ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನಕ್ವಾ ಯಾಹ್ಯಾ ಮಲ್ಪೆ ಅಧ್ಯಕ್ಷತೆ ವಹಿಸಿದ್ದರು.
ಮೌಲಾನ ಝಮೀರ್ ಅಹಮದ್ ರಶೀದ್ ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ನಾಡ ಒಕ್ಕೂಟ ಸಂಘಟನೆಯು ಸಮಾಜದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ, ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗಾವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಹೇಳಿ ಸರ್ವರನ್ನೂ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಲ್ತಾನ್ ಡೈಮಂಡ್ಸ್ ಅಂಡ್ ಗೋಲ್ಡ್ನ ವ್ಯವಸ್ಥಾಪಕ ನಿರ್ದೇಶಕ ಡಾ. ಟಿ.ಎಂ. ಅಬ್ದುಲ್ ರಹೂಫ್, ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿಯ ಅಧ್ಯಕ್ಷ ಡಾ. ರಿಜ್ವಾನ್ ಅಹ್ಮದ್, ಉದ್ಯಮಿ ಸಾಧಿಕ್ ಗುಡ್ಮಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ನಮ್ಮ ನಾಡ ಒಕ್ಕೂಟದ ಟ್ರಸ್ಟಿಗಳಾದ ಮುಶ್ತಾಕ್ ಅಹಮದ್ ಬೆಳ್ವೆ, ಪೀರು ಸಾಹೇಬ್, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಫಾಝಿಲ್ ಅಹಮ್ಮದ್, ಖಜಾಂಚಿ ಝಹೀರ್ ನಖುದಾ ಗಂಗೊಳ್ಳಿ, ಕಾರ್ಯಕ್ರಮ ಸಂಚಾಲಕ ಟಿ.ಎಂ. ಜಫ್ರುಲ್ಲಾ ಹೂಡೆ, ಉಡುಪಿ ತಾಲೂಕು ಹಾಗೂ ಕಮ್ಯೂನಿಟಿ ಸೆಂಟರ್ ಅಧ್ಯಕ್ಷ ಇಬಾದ್ ಉಸ್ಮಾನ್ ಸಾಹೇಬ್, ಬೈಂದೂರು ತಾಲೂಕು ಅಧ್ಯಕ್ಷ ಸೈಯದ್ ಎಂ. ಅಜ್ಮಲ್, ಕುಂದಾಪುರ ತಾಲೂಕು ಅಧ್ಯಕ್ಷ ಜಮಾಲ್ ಎ., ಬ್ರಹ್ಮಾವರ ತಾಲೂಕು ಅಧ್ಯಕ್ಷ ಸಕೀರ್ ಎಂ., ಹೆಬ್ರಿ ತಾಲೂಕು ಅಧ್ಯಕ್ಷ ಅನ್ಸಾರ್, ಕಾರ್ಕಳ ತಾಲೂಕು ಅಧ್ಯಕ್ಷ ಮುಹಮ್ಮದ್ ಮುಸ್ತಫಾ ಹಾಗೂ ಕಾಪು ತಾಲೂಕು ಅಧ್ಯಕ್ಷ ಅಬ್ದುಲ್ ಹಮೀದ್ ಯೂಸುಫ್, ಉಪಸ್ಥಿತರಿದ್ದರು. ಅಡ್ವೊಕೇಟ್ ಮಹಮ್ಮದ್ ಸುಹಾನ್ ಸಾಸ್ತಾನ್ ಕಾರ್ಯಕ್ರಮ ನಿರೂಪಿಸಿದರು. ಅಬೂ ಮಹಮ್ಮದ್ ಧನ್ಯವಾದವಿತ್ತರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ತಜ್ಞರು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ವೃತ್ತಿ ಮಾರ್ಗದರ್ಶನದ ಜೊತೆಗೆ ಸಾಧಕರಿಗೆ ಸನ್ಮಾನ ಸಲ್ಲಿಸಿದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.






