ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ಪ್ರಜೆಯ ಸಂವಿಧಾನಬದ್ದ ಹಕ್ಕು. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆ ಯಲ್ಲಿ ಪ್ರತಿಯೊಬ್ಬ ಮತದಾರ, ಬೂತ್ ಮಟ್ಟದ ಏಜೆಂಟ್(ಬಿಎಲ್ಎ) ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಎಸ್ಐಆರ್ ಪ್ರಕ್ರಿಯೆಯ ಉದ್ದೇಶ ಮತದಾರರ ಪಟ್ಟಿಯನ್ನು ನಿಖರ ಗೊಳಿಸುವುದಾಗಿದೆ. ಆದರೆ ಈ ಪ್ರಕ್ರಿಯೆಯ ಬಗ್ಗೆ ಅರಿವಿನ ಕೊರತೆ ಅಥವಾ ನಿರ್ಲಕ್ಷ್ಯ ಉಂಟಾದರೆ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈತಪ್ಪು ವುದು, ಹೊಸ ಮತದಾರರು ಸೇರ್ಪಡೆಯಾಗದೆ ಉಳಿಯುವುದು, ಅಗತ್ಯ ತಿದ್ದುಪಡಿಗಳು ಆಗದೆ ಉಳಿಯುವುದು ಅಥವಾ ಅನುಮಾನಾಸ್ಪದ ನೋಂದಣಿಗಳ ಕುರಿತು ಸಮಯಕ್ಕೆ ಆಕ್ಷೇಪಣೆ ಸಲ್ಲಿಕೆಯಾಗದಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.
ಜೂ.30ರಿಂದ ಜು.29ರೊಳಗೆ ಪ್ರತಿಯೊಬ್ಬ ಮತದಾರರು ತಮ್ಮ ಬೂತ್ನ ಬಿಎಲ್ಓ ಅವರನ್ನು ಸಂಪರ್ಕಿಸಿ ಇಎಫ್ ಅನ್ನು ಸರಿಯಾದ ಮಾಹಿತಿ ಯೊಂದಿಗೆ ಭರ್ತಿ ಮಾಡಿ ಸಲ್ಲಿಸಬೇಕು. ಫಾರ್ಮ್ನಲ್ಲಿ ಕೇಳಲಾಗಿರುವ ವಿವರ ಗಳನ್ನು ಯಾವುದೇ ತಪ್ಪು ಅಥವಾ ಸುಳ್ಳು ಮಾಹಿತಿಯಿಲ್ಲದೆ ದಾಖಲಿಸುವುದು ಅತ್ಯಂತ ಮುಖ್ಯವಾಗಿದೆ. ಅಗತ್ಯವಿರುವ ಸಂದರ್ಭಗಳಲ್ಲಿ 2002ರ ಮತದಾರರ ಪಟ್ಟಿಯಲ್ಲಿನ ಮತದಾರನ ವಿವರ ಅಥವಾ ಆಗ ಆತ ಮತದಾನದ ಹಕ್ಕು ಪಡೆದಿರದಿದ್ದರೆ ಆತನ ತಂದೆ, ತಾಯಿ ಅಥವಾ ಅಜ್ಜ-ಅಜ್ಜಿಯರ ಮತದಾರರ ವಿವರಗಳನ್ನು ಒದಗಿಸಬೇಕಾಗಬಹುದು. ಆದ್ದರಿಂದ ಚುನಾವಣಾ ಆಯೋಗ ಕೇಳುವ 11 ದಾಖಲೆಗಳಲ್ಲಿ ಲಭ್ಯವಿರುವ ಅಗತ್ಯ ದಾಖಲೆಗಳನ್ನು ಮುಂಚಿತವಾಗಿಯೇ ಸಿದ್ಧವಾಗಿಟ್ಟು ಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಚುನಾವಣೆ ಗೆಲ್ಲುವ ಸಿದ್ಧತೆ ಮತದಾನದ ದಿನ ಆರಂಭವಾಗುವುದಿಲ್ಲ; ಅದು ಮತದಾರರ ಪಟ್ಟಿಯ ರಕ್ಷಣೆಯಿಂದ ಆರಂಭವಾಗುತ್ತದೆ. ಆದ್ದರಿಂದ ಗ್ರಾಪಂ, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಪುರಸಭೆ, ಪಟ್ಟಣ ಪಂಚಾ ಯತ್, ವಿಧಾನಸಭಾ ಹಾಗೂ ಲೋಕಸಭಾ ಅಭ್ಯರ್ಥಿ ಆಕಾಂಕ್ಷಿಗಳು, ಪ್ರತಿಯೊಬ್ಬ ಬಿಎಲ್ಎ, ಪ್ರತಿಯೊಬ್ಬ ಕಾರ್ಯಕರ್ತ ಮತ್ತು ಪ್ರತಿಯೊಬ್ಬ ಮತದಾರ ಎಸ್ಐಆರ್ ಪ್ರಕ್ರಿಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿ ನಿಖರವಾಗಿ ರುವಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






