ಉಡುಪಿ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ (ಯುಜಿ) ಮರುಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ, ಸಂಪೂರ್ಣ ಪಾರದರ್ಶಕತೆ ಹಾಗೂ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ನಡೆಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಉಂಟಾಗದಂತೆ ಅಗತ್ಯ ಸೌಲಭ್ಯಗಳು ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 2,970 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 938 ಬಾಲಕರು, 2,032 ಬಾಲಕಿಯರು ಹಾಗೂ 7 ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ಸೇರಿದ್ದಾರೆ. ಒಬ್ಬ ಅಭ್ಯರ್ಥಿಗೆ ಸ್ಕ್ರೈಬ್ ಸೌಲಭ್ಯ ಒದಗಿಸಲಾಗಿದೆ.
ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 15 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ನಿಯಮಾನುಸಾರ ಒಂದು ಗಂಟೆ ಹೆಚ್ಚುವರಿ ಸಮಯ ದೊರೆಯಲಿದೆ.

ವಿದ್ಯಾರ್ಥಿಗಳ ಪರಿಶೀಲನಾ ಪ್ರಕ್ರಿಯೆಯನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಪೂರ್ಣಗೊಳಿಸಿ, ನಂತರ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್, ಬ್ಲೂಟೂತ್ ಸಾಧನ, ಇಯರ್ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಮೂಲ ಗುರುತಿನ ಚೀಟಿ ಹಾಗೂ ಎರಡು ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ವ್ಯವಸ್ಥೆ, ಸೂಕ್ತ ಪೊಲೀಸ್ ಭದ್ರತೆ, ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಸುರಕ್ಷಿತ ಸಾಗಾಟಕ್ಕೆ ವಾಹನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ ಹಾಗೂ ಅಗ್ನಿಶಾಮಕ ಮತ್ತು ಆರೋಗ್ಯ ಸಿಬ್ಬಂದಿಯ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಿತ ಇಲಾಖೆಗಳಿಗೆ ಸೂಚನೆ ನೀಡಿದರು.
ನೀಟ್ ಜಿಲ್ಲಾ ನೋಡಲ್ ಅಧಿಕಾರಿ ಎನ್. ಕರೀಂ ಖಾನ್ ಮಾತನಾಡಿ, ಅಜ್ಜರಕಾಡು, ಕೋಟ, ಉಡುಪಿ ಹಾಗೂ ಬ್ರಹ್ಮಾವರದ ಆರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆ, ಪ್ರತ್ಯೇಕ ಪ್ರಿಸ್ಕಿಂಗ್ ಹಾಗೂ ಬಯೋಮೆಟ್ರಿಕ್ ದೃಢೀಕರಣದ ಬಳಿಕವೇ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






