ಸಾರ್ವಜನಿಕರಿಂದ ಸಲ್ಲಿಸಲಾದ ಅರ್ಜಿಗಳನ್ನು ದೀರ್ಘಕಾಲ ವಿಲೇವಾರಿ ಮಾಡದೆ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ಕಚೇರಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ನಗರಸಭೆಯ ವಿವಿಧ ವಿಭಾಗಗಳಲ್ಲಿ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳು ಯಾವುದೇ ಸಮರ್ಪಕ ಕಾರಣವಿಲ್ಲದೆ ತಿಂಗಳುಗಟ್ಟಲೆ ಬಾಕಿ ಉಳಿದಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳ ತಂಡ ನಗರಸಭೆ ಕಚೇರಿಗೆ ಭೇಟಿ ನೀಡಿ ಕಡತಗಳ ನಿರ್ವಹಣೆ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಅರ್ಜಿಗಳ ವಿಲೇವಾರಿಯ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿತು.

ಪರಿಶೀಲನೆ ವೇಳೆ ವಿವಿಧ ವಿಭಾಗಗಳ ದಾಖಲೆಗಳು ಹಾಗೂ ಆಡಳಿತಾತ್ಮಕ ಕಡತಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಸಾರ್ವಜನಿಕರ ಅರ್ಜಿಗಳ ವಿಲೇವಾರಿಯಲ್ಲಿ ಉಂಟಾಗಿರುವ ವಿಳಂಬಕ್ಕೆ ಕಾರಣವಾದ ಅಂಶಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಿದರು.
ಲೋಕಾಯುಕ್ತ ದಾಳಿಯಿಂದ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತನಿಖೆಗೆ ಸಹಕರಿಸಿದ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಲೋಕಾಯುಕ್ತ ತಂಡಕ್ಕೆ ಒದಗಿಸಿದರು.
ಪ್ರಸ್ತುತ ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಲೋಕಾಯುಕ್ತ ಇಲಾಖೆಯ ಸಂಪೂರ್ಣ ವರದಿ ಹೊರಬಂದ ಬಳಿಕ ಯಾವ ವಿಭಾಗಗಳಲ್ಲಿ ಎಷ್ಟು ಕಡತಗಳು ಬಾಕಿ ಉಳಿದಿವೆ ಹಾಗೂ ವಿಳಂಬಕ್ಕೆ ಕಾರಣರಾದವರ ಕುರಿತು ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆಯಿದೆ.






