ಉತ್ತರ ಕನ್ನಡ: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲೆಯ ಮುಂಗಾರು ಹಂಗಾಮಿನ ಭತ್ತ, ಮೆಕ್ಕೆ ಜೋಳ ಹಾಗೂ ಹತ್ತಿ ಬೆಳೆಗಳನ್ನು ಪಂಚಾಯಿತಿ ಮಟ್ಟದಲ್ಲಿ ಅಧಿಸೂಚನೆ ಮಾಡಲಾಗಿದ್ದು, ಜಿಲ್ಲೆಯ ಅರ್ಹ ರೈತರು ನಿಗದಿತ ಅವಧಿಯೊಳಗೆ ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆಯುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.
ಬಿತ್ತನೆಯಿಂದ ಹಿಡಿದು ಕಟಾವಿನ ನಂತರದ ಅವಧಿಯವರೆಗೆ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಯಡಿ ಭತ್ತ (ಮಳೆ ಆಶ್ರಿತ) ಬೆಳೆಗೆ ಪ್ರತಿ ಎಕರೆಗೆ ₹30,595 ವಿಮಾ ಮೊತ್ತ ನಿಗದಿಪಡಿಸಲಾಗಿದ್ದು, ರೈತರು ₹612 ಪ್ರೀಮಿಯಂ ಪಾವತಿಸಬೇಕು.
ಈ ಯೋಜನೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಅನ್ವಯಿಸುತ್ತದೆ. ಭತ್ತ (ನೀರಾವರಿ ಆಶ್ರಿತ) ಬೆಳೆಗೆ ಪ್ರತಿ ಎಕರೆಗೆ ₹43,950 ವಿಮಾ ಮೊತ್ತ ನಿಗದಿಪಡಿಸಲಾಗಿದ್ದು, ₹879 ಪ್ರೀಮಿಯಂ ಪಾವತಿಸಬೇಕಾಗಿದೆ. ಇದು ಮುಂಡಗೋಡ ಹಾಗೂ ಹಳಿಯಾಳ ತಾಲೂಕಿನ ಆಯ್ದ ಗ್ರಾಮ ಪಂಚಾಯಿತಿಗಳಿಗೆ ಅನ್ವಯಿಸುತ್ತದೆ. ಭತ್ತ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನವಾಗಿದೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ಸಿಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಮೆಕ್ಕೆ ಜೋಳ (ಮಳೆ ಆಶ್ರಿತ) ಬೆಳೆಗೆ ಪ್ರತಿ ಎಕರೆಗೆ ₹27,317 ವಿಮಾ ಮೊತ್ತ ನಿಗದಿಪಡಿಸಲಾಗಿದ್ದು, ₹546 ಪ್ರೀಮಿಯಂ ಪಾವತಿಸಬೇಕಿದೆ. ಈ ಯೋಜನೆ ಮುಂಡಗೋಡ, ಶಿರಸಿ ಹಾಗೂ ಹಳಿಯಾಳ ತಾಲೂಕಿನ ಆಯ್ದ ಗ್ರಾಮ ಪಂಚಾಯಿತಿಗಳಿಗೆ ಅನ್ವಯವಾಗುತ್ತದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಹತ್ತಿ (ಮಳೆ ಆಶ್ರಿತ) ಬೆಳೆಗೆ ಪ್ರತಿ ಎಕರೆಗೆ ₹24,161 ವಿಮಾ ಮೊತ್ತ ನಿಗದಿಪಡಿಸಲಾಗಿದ್ದು, ₹1,208 ಪ್ರೀಮಿಯಂ ಪಾವತಿಸಬೇಕಿದೆ. ಹಳಿಯಾಳ ತಾಲೂಕಿನ ಎಲ್ಲಾ ಹೋಬಳಿಗಳಿಗೆ ಈ ಯೋಜನೆ ಅನ್ವಯವಾಗಿದ್ದು, ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ರೈತರು ಫ್ರೂಟ್ಸ್ ಐಡಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ನಕಲು, ಜಮೀನಿನ ಪಹಣಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್, ಸಿಎಸ್ಸಿ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಸಹಾಯವಾಣಿ ಸಂಖ್ಯೆ 1800-103-5499 ಅನ್ನು ಸಂಪರ್ಕಿಸಬಹುದು. ಅಲ್ಲದೆ ಹತ್ತಿರದ ರೈತ ಸಂಪರ್ಕ ಕೇಂದ್ರ, ಕೃಷಿ ಅಧಿಕಾರಿಗಳು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದಲೂ ಮಾಹಿತಿ ಪಡೆಯಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.




