ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026ರ ಭಾಗವಾಗಿ ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದಿರುವ ಹಾಗೂ ತಾರ್ಕಿಕ ವ್ಯತ್ಯಾಸ ಹೊಂದಿರುವ ಮತದಾರರಿಗೆ ಒಟ್ಟು 65,248 ನೋಟಿಸ್ಗಳನ್ನು ನೀಡಲಾಗಿದ್ದು, ಈ ಪೈಕಿ 58,687 ನೋಟಿಸ್ಗಳನ್ನು ವಿತರಿಸಲಾಗಿದೆ. 18,904 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದ್ದು, 39,783 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ತಿಳಿಸಿದರು.
ಮಂಗಳವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಚಾರಣೆ ಪ್ರಕ್ರಿಯೆಯಲ್ಲಿ ಮರಣ ಹೊಂದಿರುವ ಅಥವಾ ದ್ವಿ-ನೋಂದಣಿ ಹೊಂದಿರುವ 19 ಪ್ರಕರಣಗಳು ಪತ್ತೆಯಾಗಿವೆ. ಹಳಿಯಾಳ ಕ್ಷೇತ್ರದಲ್ಲಿ ನೀಡಲಾಗಿರುವ 14,012 ನೋಟಿಸ್ಗಳ ಪೈಕಿ 4,618 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದೆ.
ಕಾರವಾರದಲ್ಲಿ 10,446 ನೋಟಿಸ್ಗಳಲ್ಲಿ 3,111, ಕುಮಟಾದಲ್ಲಿ 8,344 ನೋಟಿಸ್ಗಳಲ್ಲಿ 2,350, ಭಟ್ಕಳದಲ್ಲಿ 13,660 ನೋಟಿಸ್ಗಳಲ್ಲಿ 1,957, ಶಿರಸಿಯಲ್ಲಿ 8,821 ನೋಟಿಸ್ಗಳಲ್ಲಿ 2,385 ಹಾಗೂ ಯಲ್ಲಾಪುರದಲ್ಲಿ 9,965 ನೋಟಿಸ್ಗಳಲ್ಲಿ 4,483 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ
ಚುನಾವಣಾ ಆಯೋಗದ ನಿರ್ದೇಶನದಂತೆ ಸೆ.23ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅ.27ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು. ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯ ಪೀಡಿತರು ಹಾಗೂ ವಿದೇಶದಲ್ಲಿರುವ ಮತದಾರರಿಗೆ ನೀಡಿರುವ ನೋಟಿಸ್ಗಳ ವಿಚಾರಣೆಯಲ್ಲಿ ಅವರ ವಯಸ್ಕ ಕುಟುಂಬ ಸದಸ್ಯರು ಅವರ ಪರವಾಗಿ ಹಾಜರಾಗಿ ಅಗತ್ಯ ದಾಖಲೆ ಹಾಗೂ ಮಾಹಿತಿಯನ್ನು ಸಲ್ಲಿಸಬಹುದು ಎಂದರು.
ಅಕ್ಟೊಬರ್ 1, 2026ಕ್ಕೆ 18 ವರ್ಷ ಪೂರ್ಣಗೊಳಿಸುವ ಅರ್ಹ ನಾಗರಿಕರು ಸೆಪ್ಟೆಂಬರ್ 23ರೊಳಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 19 ಮತ್ತು 20ರಂದು ವಿಶೇಷ ಮತದಾರರ ಆಂದೋಲನ ನಡೆಯಲಿದ್ದು, ಆಯಾ ಮತಗಟ್ಟೆಗಳಲ್ಲಿ ಬಿಎಲ್ಒಗಳು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಲಭ್ಯವಿರಲಿದ್ದಾರೆ.
ಈ ಸಂದರ್ಭದಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಸೇರಿದಂತೆ ಅಗತ್ಯ ಸೇವೆಗಳನ್ನು ಪಡೆಯಬಹುದಾಗಿದೆ. ಅರ್ಹ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು. ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸದಾಗಿ ಸೇರ್ಪಡೆಯಾಗುವ ಮತದಾರರು ನಮೂನೆ–18ರಲ್ಲಿ ಅರ್ಜಿಗಳನ್ನು ಜಿಲ್ಲೆಯ ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಸಾಜೀದ್ ಮುಲ್ಲಾ ತಿಳಿಸಿದರು.
ಸಭೆಯಲ್ಲಿ ಬಿಜೆಪಿ ಉಪಾಧ್ಯಕ್ಷ ಸಂಜಯ್ ಸಾಲುಂಕೆ, ಕಾಂಗ್ರೆಸ್ ಪಕ್ಷದ ರಮೇಶ್ ಸೇರಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.




