ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕು ಬಂದ್ಗೆ ಕರೆ ನೀಡಲಾಗಿದ್ದು, ನಾಳೆ ಸಭೆ ಸೇರಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಕೊಟ್ಟೂರು ಸಮಿತಿಯ ಸಂಚಾಲಕರಾದ ಗುಡಿಯಾರ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ.
“ಕೊಟ್ಟೂರು ತಾಲ್ಲೂಕಿನ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಆರಕ್ಷಕ ವೃತ್ತ ನಿರೀಕ್ಷಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡೊನೇಷನ್ ಕಡಿಮೆ ಮಾಡುವುದಾಗಿ ಸಾರ್ವಜನಿಕವಾಗಿ ಒಪ್ಪಿಕೊಂಡು ಇದೀಗ ಮಾತು ತಪ್ಪಿರುವುದು ಖಂಡನೀಯ ಮಾತ್ರವಲ್ಲ, ಜನರಿಗೆ ಮಾಡಿದ ದ್ರೋಹವಾಗಿದೆ” ಎಂದು ಅಭಿಪ್ರಾಯಿಸಿದ್ದಾರೆ.
“ಬಡವರು, ರೈತರು, ಕೂಲಿ ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮಕ್ಕಳ ಶಿಕ್ಷಣವನ್ನು ಹಣದ ದಾಹಕ್ಕಾಗಿ ಬಲಿ ಕೊಡುವ ಶಿಕ್ಷಣ ಮಾಫಿಯಾದ ಧೋರಣೆ ವಿರುದ್ಧ ಪ್ರಗತಿಪರ ಸಂಘಟನೆಗಳ ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ. ಶಿಕ್ಷಣವನ್ನು ಸೇವೆಯ ಬದಲಾಗಿ ವ್ಯಾಪಾರವನ್ನಾಗಿ ಮಾಡಿಕೊಂಡು ಪೋಷಕರನ್ನು ಸುಲಿಗೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ನಡೆಯನ್ನು ಸಹಿಸಲು ಅಸಾಧ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಉಲ್ಲಂಘಿಸಿ ಅಕ್ರಮ ಡೊನೇಷನ್ ವಸೂಲಾತಿ ಮುಂದುವರಿಸಿರುವ ಸಂಸ್ಥೆಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಿ, ಮಾನ್ಯತೆ ರದ್ದುಪಡಿಸುವ ಪ್ರಕ್ರಿಯೆ ಆರಂಭಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳದಿದ್ದಲ್ಲಿ ವಿದ್ಯಾರ್ಥಿಗಳು, ಪೋಷಕರು, ರೈತರು, ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶಿಕ್ಷಣ ಮಾಫಿಯಾ ವಿರುದ್ಧ ಕೊಟ್ಟೂರು ಬಂದ್ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
“ಇದು ಕೇವಲ ಡೊನೇಷನ್ ವಿರುದ್ಧದ ಹೋರಾಟವಲ್ಲ; ಶಿಕ್ಷಣವನ್ನು ವ್ಯಾಪಾರೀಕರಣದಿಂದ ರಕ್ಷಿಸುವ ಜನಾಂದೋಲನ” ಎಂದು ಅಭಿಪ್ರಾಯಿಸಿದ್ದಾರೆ.




