ಕಾಶ್ಮೀರದ ಪಹಲ್ಗಾಮ್ ಸಮೀಪದ ಪ್ರವಾಸಿತಾಣ ಬೈಸರನ್ ಕಣಿವೆಯಲ್ಲಿ ಮಂಗಳವಾರ ಕನ್ನಡಿಗರಾದ ಮಂಜುನಾಥ್ ಹಾಗೂ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ತೀವ್ರವಾಗಿ ಖಂಡಿಸಿತು.
“ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರಕಾರ ಕ್ರಮವಹಿಸಬೇಕು. ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಯಿತು.
ರಾಷ್ಟ್ರದ ಭದ್ರತೆ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರ್ಕಾರ ‘ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆ’ ಎಂದು ಹೇಳುತ್ತಲೇಯಿದೆಯಾದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಕೇಂದ್ರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯ ಸ್ಥಾಪಿಸಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ” ಎಂದು ಸಂಘಟನೆ ಕರೆ ನೀಡಿದೆ.
ಇದನ್ನೂ ಓದಿ: ವಿಜಯನಗರ | ವಿದ್ಯುತ್ ತಂತಿಯಿಂದ ಬೆಂಕಿ; ನಾಲ್ಕು ರಾಸು, ಹುಲ್ಲಿನ ಬಣವೆ ಭಸ್ಮ