ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿಯ ಲೋಕಸಭಾ ಸದಸ್ಯ ರಾಷ್ಟೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ನನ್ನು ಭಾರತ ಸರ್ಕಾರ ಕೂಡಲೇ ಬಂಧಿಸುವಂತೆ ಆಗ್ರಹಿಸಿ ವಿಜಯಪುರ ಪಟ್ಟಣದ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯ ರಾಜ್ಯಾದ್ಯಕ್ಷ ಮತೀನ ಕುಮಾರ ಮಾತನಾಡಿ, “ಮೋದಿ ಅವರು ಭಾಷಣಗಳಲ್ಲಿ ಭೇಟಿ ಬಜಾವೋ ಭೇಟಿ ಪಡಾವೋ ಎಂದು ಬೊಗಳೆ ಬಿಡುತ್ತಾರೆ. ಈ ದೇಶದ ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆದರೂ ಮಾತನಾಡದ ಪ್ರಧಾನಿ, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ತಿಂಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ನ್ಯಾಯ ಒದಗಿಸುವಂತಹ ಕ್ರಮ ಕೈಗೊಳ್ಳದ ಮೋದಿಗೆ ಧಿಕ್ಕಾರವಿರಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಅಪರಾಧಿ ಬ್ರಿಜ್ ಭೂಷಣ್ ಸಿಂಗ್ನನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದಲ್ಲಿ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿ ಮೋದಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಭೀಮ್ ಆರ್ಮಿ ಕರ್ನಾಟಕ ಏಕತಾ ಮೀಷನ್ ಜಿಲ್ಲಾಧ್ಯಕ್ಷ ಮಲ್ಲು ಜಾಲಗೇರಿ ಮಾತನಾಡಿ, “ಈ ದೇಶದ ಅಂತರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿ ಸಂಸದ ಹಾಗೂ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದನ್ನು ವಿರೋಧಿಸಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ಮಾಡಿದರೆ ಪೋಲಿಸರಿಂದ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ದೇಶಕ್ಕೆ ಹೆಮ್ಮೆ ತಂದು ಕೊಟ್ಟ ಕುಸ್ತಿಪಟುಗಳ ಮೇಲೆ ದೌರ್ಜನ್ಯ ನಡೆದರು ಕುರುಡನಂತೆ ವರ್ತಿಸಿ ಅಪರಾಧಿಗೆ ಬೆಂಬಲ ನೀಡಿದ್ದಾರೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಮನರೇಗಾ ಸಮರ್ಪಕ ಅನುಷ್ಠಾನಕ್ಕೆ ಗ್ರಾಕೂಸ ಒತ್ತಾಯ
ಭೀಮ್ ಆರ್ಮಿ ಕರ್ನಾಟಕ ಏಕತಾ ಮೀಷನ್ ಜಿಲ್ಲಾ ಉಪಾಧ್ಯಕ್ಷ ಅಪ್ಪು ಮುಲ್ಲಾ ಮಾತನಾಡಿ, “ಬಿಜೆಪಿ ನೀಚ ಸಂಸದ ತನ್ನ ಜವಾಬ್ದಾರಿ ಮರೆತು ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರ ವಿರುದ್ಧವಾಗಿ ಮಹಿಳಾ ಕುಸ್ತಿಪಟುಗಳ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರೆ ಪೋಲಿಸರಿಂದ ಹಲ್ಲೆ ನಡೆಸಿದ್ದಾರೆ. ಈ ಕೂಡಲೇ ಆರೋಪಿಯನ್ನು ಬಂಧಿಸಿ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಜಿಲ್ಲಾ ಉಸ್ತುವಾರಿ ಫರೀದ್ ಅಲಿ ಸೈಯದ್, ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಖಯೂಮ್ ಚೌದರಿ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.