ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸ್ವಾಗತಾರ್ಹ. ಆದರೆ ಖಾಸಗಿ ಸಹಭಾಗಿತ್ವವನ್ನು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯು ಇದನ್ನು ಖಂಡಿಸುತ್ತದೆ ಎಂದು ಕಾವೇರಿ ರಜಪೂತ್ ಹೇಳಿದರು.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, “ಕಳೆದ 15 ವರ್ಷಗಳಿಂದ AIDSO ವಿದ್ಯಾರ್ಥಿ ಸಂಘಟನೆಯಿಂದ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕೆಂದು ಹೋರಾಟ ಬೆಳೆಸಿದೆ, ಜನರ ಹೋರಾಟದ ಫಲವಾಗಿ ಇಂದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದ್ದು ಸ್ವಾಗತಾರ್ಹ. ಆದರೆ ಇದರಲ್ಲಿ ಖಾಸಗಿ ಸಹಭಾಗಿತ್ವವನ್ನು AIDSO ಸಂಘಟನೆಯು ಒಪ್ಪುವುದಿಲ್ಲ” ಎಂದರು.
“ಈಗಾಗಲೇ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳಿದ್ದು, ಇದಕ್ಕೆ ಲಕ್ಷಾಂತರ ಶುಲ್ಕ ಕಟ್ಟಲು ಸಾಧ್ಯವಾಗದೇ, ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತಮ್ಮ ಕನಸನ್ನು ತೊರೆದಿದ್ದಾರೆ. ಶಿಕ್ಷಣ ಎನ್ನುವುದು ಕೆಲವೇ ಜನರ ಸ್ವತ್ತಾಗದೆ, ಎಲ್ಲರ ಸ್ವತ್ತಾಗಬೇಕು. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗಬೇಕಾದರೆ, ಸರ್ಕಾರವೇ ಸಂಪೂರ್ಣ ಆರ್ಥಿಕ ಜವಾಬ್ದಾರಿ ತೆಗೆದುಕೊಳ್ಳಬೇಕು. ಆಗ ಮಾತ್ರ ಬಡವರು, ಕಾರ್ಮಿಕರು ಮತ್ತು ರೈತರ ಮಕ್ಕಳಿಗೆ ಶಿಕ್ಷಣ ಸಿಗುತ್ತದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಪಿಒಪಿ ವಿಗ್ರಹಗಳನ್ನು ಬಳಸದಿರಿ: ಜಿಲ್ಲಾಧಿಕಾರಿ ದಿವ್ಯಾಪ್ರಭು
“ವಿಜಯಪುರ ಜಿಲ್ಲೆಯು ನಿರಂತರವಾಗಿ ಬರಗಾಲಕ್ಕೆ ತುತ್ತಾಗುತ್ತ ಬಂದಿದ್ದು, ಬಹುತೇಕ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ಕಷ್ಟಪಟ್ಟು ಅಭ್ಯಾಸ ಮಾಡಿ ಮುಂದೆ ಬರಬೇಕೆಂದರೆ ಉನ್ನತ ಶಿಕ್ಷಣ ಪಡೆಯಲು ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲ. ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಕೊಟ್ಟು ಕಲಿಯುವುದಂತೂ ನಮ್ಮ ಜಿಲ್ಲೆಯ ಬಡ ಜನಗಳಿಗೆ, ರೈತ ಮತ್ತು ಕೂಲಿಕಾರ್ಮಿಕರ ಮಕ್ಕಳಿಗೆ ಖಂಡಿತ ಸಾಧ್ಯವಿಲ್ಲ. ಆದ್ದರಿಂದ ಸರ್ಕಾರವು ವಿಶೇಷ ಮುತುವರ್ಜಿ ವಹಿಸಿ ವಿಜಯಪುರ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕೆಂದು ಒತ್ತಾಯಿಸುತ್ತದೆ” ಎಂದರು.