ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ ಭಗವಾನ್ ರೆಡ್ಡಿ ತಿಳಿಸಿದರು.
ವಿಜಯಪುರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಪರ್ಧೆಗೆ ಬಿದ್ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿವೆ. ಜನರನ್ನು ದೋಚುತ್ತ ಒಬ್ಬರ ಮೇಲೊಬ್ಬರು ಆರೋಪ ಹೊರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿರುದ್ಯೋಗ ಸೇರಿದಂತೆ ಅನೇಕ ಸಮಸ್ಯೆಗಳು ಹಾಗೂ ಎರಡೂ ಸರ್ಕಾರಗಳ ವೈಫಲ್ಯಗಳ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಈ ಹೋರಾಟ ನಡೆಯಲಿದೆ” ಎಂದರು.
“ಅಡುಗೆ ಅನಿಲ, ಔಷಧಗಳು, ವಿದ್ಯುತ್, ಹಾಲು, ಪೆಟ್ರೋಲ್, ಡೀಸೆಲ್, ಮೆಟ್ರೋ, ನೀರು, ಆಸ್ತಿ ತೆರಿಗೆ ಎಲ್ಲವೂ ದುಬಾರಿಯಾಗಿದೆ. ಆದರೆ, ಕೇವಲ ಅಭಿವೃದ್ಧಿಯ ಹೆಸರಿನಲ್ಲಿ ತೆರಿಗೆ ಹಣವು ಕಾರ್ಪೊರೇಟ್ ಕಂಪನಿಗಳ, ದೊಡ್ಡ ಗುತ್ತಿಗೆದಾರರ, ರಾಜಕಾರಣಿಗಳ ಮತ್ತು ಹಿರಿಯ ಅಧಿಕಾರಿಗಳ ಜೇಬು ಸೇರುತ್ತವೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ನಿಸರ್ಗದಲ್ಲಿ ಹಬ್ಬದ ವಾತಾವರಣ ಸೃಷ್ಟಿ; ನೋಡುಗರ ಮನಸೂರೆಗೊಳಿಸುವ ಗುಲ್ ಮೊಹರ್
“ರಾಜ್ಯದಲ್ಲಿ 6000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ನಿರ್ಧಾರವನ್ನು ಕೂಡಲೇ ಕೈಬಿಡಿ ಹಾಗೂ ಅವಶ್ಯಕತೆ ಮೂಲಭೂತ ಸೌಲಭ್ಯಗಳನ್ನು ಶಿಕ್ಷಕ ಸಿಬ್ಬಂದಿಯನ್ನು ಒದಗಿಸಬೇಕು. ನಿರುದ್ಯೋಗದಿಂದ ತತ್ತರಿಸುತ್ತಿರುವ ಯುವಜನರಿಗೆ ಉದ್ಯೋಗ ನೀಡಲು ತಕ್ಷಣ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು” ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಸದಸ್ಯರಾದ ಮಲ್ಲಿಕಾರ್ಜುನ ಎಚ್ ಟಿ, ಸಿದ್ದಲಿಂಗ ಬಾಗೇವಾಡಿ, ಭರತ್ ಕುಮಾರ್ ಎಚ್ ಟಿ, ಸಿದ್ದರಾಮ ಹಿರೇಮಠ ಹಾಗೂ ಗೀತಾ ಎಚ್ ಇದ್ದರು.