ಶಿಕ್ಷಣ ನೀತಿಯ ಮೇಲೆ ರಾಜ್ಯದಲ್ಲಿ ಅತಿ ದೊಡ್ಡ ಸಮೀಕ್ಷೆ ನಡೆಸಿದ್ದು, ಶಿಕ್ಷಣದ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕೆಂಬುದು ಕರ್ನಾಟಕದ ಜನತೆಯ ಆಗ್ರಹವಾಗಿದೆ. ನಾಲ್ಕು ವರ್ಷದ ಪದವಿಯನ್ನು ಕೈಬಿಡಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎಂದು ವಿಜಯಪುರ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಹೇಳಿದರು.
ಈ ಕುರಿತು ಪ್ರಕಟಣೆಗೆ ತಿಳಿಸಿರುವ ಅವರು, “ರಾಜ್ಯದಲ್ಲಿ ಜನಪರ ಶಿಕ್ಷಣ ನೀತಿಯನ್ನು ರೂಪಿಸಲು ಆಗ್ರಹಿಸಿ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರ ನಡುವೆ ನಡೆಸಿದ ಮಾದರಿ ಸಮೀಕ್ಷೆಯ ವರದಿಯನ್ನು ಎಐಡಿಎಸ್ಒ ಬಿಡುಗಡೆ ಮಾಡಿತು. ಈ ಸಮೀಕ್ಷೆಯಲ್ಲಿ ರಾಜ್ಯದ 9 ಸರ್ಕಾರಿ ವಿಶ್ವವಿದ್ಯಾಲಯಗಳು, 82 ಸರ್ಕಾರಿ ಪದವಿ ಕಾಲೇಜುಗಳು, 12 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು 15 ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯಗಳು ಸೇರಿದಂತೆ 23,120 ಜನ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ” ಎಂದರು.
“ನವೋದಯ ಚಳವಳಿಯ ಚಿಂತಕರು ಹಾಗೂ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಹೋರಾಟಗಾರರ ಕುರಿತು ಶಿಕ್ಷಣದಲ್ಲಿ ಹೆಚ್ಚು ವಿಷಯಗಳನ್ನು ಕಲಿಸಬೇಕೆಂಬುದು ಅವರ ಆಶಯವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಜನತೆಯ ಒಕ್ಕೊರಲಿನ ಕೂಗಾಗಿದೆ. ಈ ಮಾದರಿ ಸಮೀಕ್ಷೆಯ ಪೈಕಿ ಸರ್ಕಾರಿ ಶಾಲಾ ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.
ಶೇ.98.52 ರಷ್ಟು ಮಂದಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸಲು ವಿದ್ಯಾರ್ಥಿಗಳಿಂದ ದೇಣಿಗೆ ಪಡೆಯಬಾರದೆಂದು, ಶೇ. 95.71 ರಷ್ಟು ಮಂದಿ ನಾಲ್ಕು ವರ್ಷದ ಪದವಿ ಅಧ್ಯಯನ ಬೇಡವೆಂದು, ಶೇ. 83ರಷ್ಟು ಮಂದಿ ಕಡಿಮೆ ದಾಖಲಾತಿ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವುದು ಅಥವಾ ಮುಚ್ಚುವುದು ತಪ್ಪೆಂದು, ಶೇ.99ರಷ್ಟು ಮಂದಿ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಕಾರ್ಪೊರೇಟ್ ಕಂಪನಿಗಳ ಬಳಿ ಧನಸಹಾಯ ಪಡೆಯುವುದು ತಪ್ಪೆಂದು, ಶೇ. 80ರಷ್ಟು ಮಂದಿ ನಮ್ಮ ದೇಶದ ಶೈಕ್ಷಣಿಕ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹಾಗೂ ವಿದೇಶಿ ವಿವಿಗಳು ಬೇಡವೆಂದು ಬಯಸಿದ್ದಾರೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಐಡಿಎಸ್ಒ 70ನೇ ಸಂಸ್ಥಾಪನಾ ದಿನಾಚರಣೆ
“ಶೇ. 86ರಷ್ಟು ಮಂದಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಥವಾ ಉದ್ಯೋಗ ತರಬೇತಿ ನೀಡುವ ನೆಪದಲ್ಲಿ ಪಠ್ಯಕ್ರಮದಲ್ಲಿ ಮೌಲ್ಯಗಳನ್ನು ಕಡೆಗಣಿಸಬಾರದೆಂದು, ಶೇ.93 ರಷ್ಟು ಮಂದಿ ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಭೂತಪೂರ್ವ ಪಾತ್ರವಹಿಸಿದ ಮಹಾನ್ ಕ್ರಾಂತಿಕಾರಿಗಳು ಹಾಗೂ ಮಹಾನ್ ನವೋದಯ ಚಿಂತಕರ ಕುರಿತಾದ ಪಾಠಗಳು ಪಠ್ಯಕ್ರಮದ ಭಾಗವಾಗಬೇಕೆಂದು, ಶೇ.97ರಷ್ಟು ಮಂದಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಸ್ಥಾಪನೆಯಾಗಬೇಕೆಂದು ರಾಜ್ಯದ ವಿದ್ಯಾರ್ಥಿಗಳು ಬಯಸಿದ್ದಾರೆ” ಎಂದು ಹೇಳಿದರು.