ಸಮಾನ ಅವಕಾಶ, ಸಮಾಜದ ಬೆಂಬಲ ದೊರೆತರೆ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸು ಸಾಧಿಸಿ, ಭಾರತದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಸರ್ಕಾರ ಎನ್ಎಸ್ಎಸ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಶುಕ್ರವಾರ ಆಯೋಸಿದ್ದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ-2025’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಪ್ರಸ್ತುತ ಸಮಾಜದಲ್ಲಿ ಮಹಿಳೆಯರಿಗೆ ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳು ಲಭ್ಯವಾಗಿವೆ. ಇಂದಿನ ಮಹಿಳೆಯರು ತಮ್ಮ ಪ್ರತಿಭೆಯಿಂದ ಪ್ರತಿಯೊಂದು ವಲಯದಲ್ಲೂ ಹೊಸ ಇತಿಹಾಸವನ್ನು ಬರೆಯುತ್ತಿದ್ದಾರೆ. ಶಿಕ್ಷಣ, ತಂತ್ರಜ್ಞಾನ, ಉದ್ಯಮಶೀಲತೆ, ವಿಜ್ಞಾನ, ಕಲೆ-ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಸಿದ್ಧತೆ ಮತ್ತು ಕಠಿಣ ಪರಿಶ್ರಮದಿಂದ ಮುಂಚೂಣಿಯಲ್ಲಿದ್ದಾರೆ. ರಾಜಕೀಯದಲ್ಲಿ ಮಹಿಳೆಯರು ಪ್ರಭಾವಶಾಲಿ ಸ್ಥಾನ ಗಳಿಸಿ, ಸಾಮಾಜಿಕ ಬದಲಾವಣೆಗಳನ್ನು ತರಲು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ” ಎಂದರು.
“ಕರ್ನಾಟಕ ರಾಜ್ಯ ಎನ್ಎಸ್ಎಸ್ ಸಲಹಾ ಸಮಿತಿ ಸದಸ್ಯ ಡಾ. ಜಾವಿದ್ ಜಮಾದಾರ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಸಮಾಜ ಸೇವಾ ಮನೋಭಾವನೆ ಮತ್ತು ರಾಷ್ಟ್ರ ಸೇವೆಯನ್ನು ಜಾಗೃತಗೊಳಿಸುವುದೇ ರಾಷ್ಟ್ರೀಯ ಸೇವಾ ಯೋಜನೆಯ ಮೂಲ ಉದ್ದೇಶವಾಗಿದ್ದು, ಯುವಕರನ್ನು ಜವಾಬ್ದಾರಿಯುತ ನಾಗರಿಕರಾಗಿ ರೂಪಿಸುವ ಮಹತ್ವದ ಯೋಜನೆಯಾಗಿದೆ. ಯುವಕರ ಮೇಲೆ ದೊಡ್ಡ ಜವಾಬ್ದಾರಿ ಇದ್ದರೂ, ಅನೇಕರು ಜವಾಬ್ದಾರಿಯಿಂದ ವಿಮುಖವಾಗುತ್ತಿರುವುದು ಚಿಂತಾಜನಕ, ಅಪಘಾತಗಳ ಸಂದರ್ಭಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡುವ ಬದಲು ವಿಡಿಯೋ ರೆಕಾಡಿರ್ಂಗ್ ಮಾಡುವ ಮನೋಭಾವ ಹೆಚ್ಚುತ್ತಿದೆ. ಇದು ನೋವುಂಟುಮಾಡುವ ವಿಷಯ. ಯುವಕರು ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗಾಗಿ ಬಳಸುವುದದರ ಬದಲಾಗಿ, ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸುವ ಸಾಧನವಾಗಿ ಬಳಸಬೇಕು” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಮಾತನಾಡಿ, “ಎನ್ಎಸ್ಎಸ್ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ವೃದ್ಧಿಯಾಗುತ್ತದೆ ಹಾಗೂ ಅವರ ವ್ಯಕ್ತಿತ್ವ ಅಭಿವೃದ್ಧಿಯಾಗಲು ಸಹಾಯಕವಾಗುತ್ತದೆ. ಸ್ವಯಂಸೇವಕರಿಗೆ ಉದ್ಯೋಗ ಕ್ಷೇತ್ರದಲ್ಲೂ ಮೀಸಲಾತಿಯ ಅವಕಾಶ ಲಭ್ಯವಿದ್ದು, ಎನ್ಎಸ್ಎಸ್ ರಾಷ್ಟ್ರ ಮತ್ತು ಸಮಾಜಕ್ಕಾಗಿ ಸೇವೆ ಸಲ್ಲಿಸುವ ಉತ್ತಮ ವೇದಿಕೆಯನ್ನು ಒದಗಿಸುತ್ತದೆ” ಎಂದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾ. 23; ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್, ಸಂವಾದ ಸಂಸ್ಥೆಯಿಂದ ಸುಗ್ಗಿ ಸಂಭ್ರಮ
ಇದೇ ಸಂದರ್ಭದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ವಿದ್ಯಾರ್ಥಿನಿಯರರಿಗೆ ಸಾಮಾನ್ಯ ಜ್ಞಾನ ಆಧಾರಿತ ಪ್ರಶ್ನೆಗಳನ್ನು ಕೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ, ಎನ್ಎಸ್ಎಸ್ ಕೋಶದ ಸಂಯೋಜನಾಧಿಕಾರಿ ಡಾ.ಅಶೋಕಕುಮಾರ ಸುರಪುರ, ಲಾಡಲಿ ಫೌಂಡೇಶನ್ ಜಿಲ್ಲಾ ವ್ಯವಸ್ಥಾಪಕ ಯೂಸುಫ್ ಕೊಟ್ಟಲ, ವಿವಿಧ ವಿಭಾಗಗಳ ವಿದ್ಯಾರ್ಥಿನಿಯರು, ಮುಖ್ಯಸ್ಥರು, ಬೋಧಕ ವರ್ಗದವರು ಇದ್ದರು.
ಕಾರ್ಯಕ್ರಮವನ್ನು ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ವಿಷ್ಣು ತಿಂದೆ ನಿರೂಪಿಸಿದರು.