ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ಬಸವನ ಬಾಗೇವಾಡಿ ಸಮಿತಿ ವತಿಯಿಂದ ಪತ್ರ ಚಳವಳಿ ನಡೆಸಲಾಯಿತು.
ಎಐಯುಟಿಯುಸಿ ಸಂಯೋಜಿತ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪತ್ರ ಚಳವಳಿಯಲ್ಲಿ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ವಿವಿಧ ವಸತಿ ನಿಲಯಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಪಾಲ್ಗೊಂಡು, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗೆ ಪತ್ರ ರವಾನಿಸಿದರು.
ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರು ಅತ್ಯಂತ ಕಡಿಮೆ ವೇತನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನೂ ಸಮರ್ಪಕವಾಗಿ ಪಾವತಿಸದಿರುವುದು ಕಾರ್ಮಿಕರನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ ಎಂದು ಸಂಘಟನೆ ಆರೋಪಿಸಿತು.
ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೊಳಿಸಬೇಕು. ಪ್ರತಿ ತಿಂಗಳು ನಿಗದಿತ ದಿನಾಂಕದೊಳಗೆ ವೇತನ ಪಾವತಿಸಬೇಕು. ಕಾರ್ಮಿಕರಿಗೆ ವೇತನ ಚೀಟಿ ನೀಡಬೇಕು. ಪಿಎಫ್, ಇಎಸ್ಐ ಸೇರಿದಂತೆ ಕಾರ್ಮಿಕರಿಗೆ ದೊರೆಯಬೇಕಾದ ಎಲ್ಲ ಶಾಸನಬದ್ಧ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಪರಿಗಣಿಸಬೇಕು. ಸಂಬಂಧಿಸಿದ ಇಲಾಖೆಗಳು ಹಾಗೂ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಕಾರ್ಮಿಕರ ಸಮಸ್ಯೆ ಪರಿಹರಿಸಬೇಕು ಎಂದು ಸಂಘಟನೆ ಒತ್ತಾಯಿಸಿತು. ಸರ್ಕಾರ ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.
ಪತ್ರ ಚಳವಳಿಯಲ್ಲಿ ಚಾಂದ್ ಮಮದಾಪೂರ, ಸಿದ್ದು, ಜಗದೀಶ ಶಂಕರ, ಅನಿಲ, ಬಿಮಯ್ಯ, ಬಾಷಾ, ಮಹಾಂತಗೌಡ, ಗೌರಮ್ಮ ಸೇರಿದಂತೆ ವಸತಿ ನಿಲಯ ಕಾರ್ಮಿಕರು, ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರು ಹಾಗೂ ಇತರ ಕಾರ್ಮಿಕರು ಭಾಗವಹಿಸಿದ್ದರು.




