ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟವನ್ನು ಸೋಮವಾರ ಸಂಜೆ ವಿಸ್ತರಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ವಿಜಯಪುರ ಜಿಲ್ಲೆಯ ರಾಜಕೀಯ ವಲಯದಲ್ಲಿ ಈ ರಾಜೀನಾಮೆ ತೀವ್ರ ಚರ್ಚೆಗೆ ಕಾರಣವಾಗಿದ್ದು, ಯಶವಂತರಾಯಗೌಡ ಪಾಟೀಲ್, ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಹೊಸ ರಾಜಕೀಯ ಸಮೀಕರಣಗಳ ಆಧಾರದಲ್ಲಿ ಸಚಿವ ಸಂಪುಟವನ್ನು ರಚಿಸಿದೆ. ಯಶವಂತರಾಯಗೌಡ ಪಾಟೀಲ್ ಸೇರಿದಂತೆ ಹಲವು ಹಿರಿಯ ಸಚಿವಾಕಾಂಕ್ಷಿಗಳಿಗೆ ಅವಕಾಶ ದೊರೆಯಲಿಲ್ಲ. ಇದರಿಂದ ಹಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ಯಶವಂತರಾಯಗೌಡ ಪಾಟೀಲ್ ಅವರ ಬೆಂಬಲಿಗರು ಬೆಂಗಳೂರಿನ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆ ನಡೆಸಿ, ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದರು. ಅಲ್ಲದೆ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡುವುದನ್ನು ವಿರೋಧಿಸುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದರು.
ಈಗ ಸಚಿವ ಸಂಪುಟ ವಿಸ್ತರಣೆಯಲ್ಲೂ ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ದೊರೆಯದಿರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಯಶವಂತರಾಯಗೌಡ ಪಾಟೀಲ್ ಅವರ ಮುಂದಿನ ರಾಜಕೀಯ ನಡೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.





